
ವಿಧಾನಸಭೆ (ಫೆ.24): ಬಜೆಟ್ ಭಾಷಣದಲ್ಲಿ ತಿಳಿಸಿದ್ದ ‘ಗೃಹಿಣಿ ಶಕ್ತಿ’ ಯೋಜನೆಯ ಮೊತ್ತ 500 ರು.ಗಳಿಂದ 1 ಸಾವಿರ ರು.ಗಳಿಗೆ ಹೆಚ್ಚಳ, ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಘೋಷಿಸಿದ್ದ 1 ಸಾವಿರ ಬಸ್ಸುಗಳ ಸಂಖ್ಯೆಯನ್ನು 2 ಸಾವಿರಕ್ಕೆ ಹೆಚ್ಚಳ ಮಾಡುವುದಾಗಿ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಮಂಡಿಸಿರುವ ಸರ್ವಸ್ಪರ್ಶಿ ಬಜೆಟ್ ಅನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಬಜೆಟ್ ಮೇಲೆ ನಡೆದ ಚರ್ಚೆಗೆ ಸುದೀರ್ಘ ಉತ್ತರ ನೀಡಿದ ಅವರು, ನಾನು ಬಜೆಟ್ನಲ್ಲಿ ಘೋಷಿಸಿರುವ ಯೋಜನೆಗಳು ಸರ್ಕಾರದ ಸೂಕ್ಷ್ಮತೆಯನ್ನು ತೋರಿಸುತ್ತವೆ. ಕೃಷಿ ಮಹಿಳಾ ಕಾರ್ಮಿಕರಿಗೆ ಮಾಸಿಕ 500 ರು. ಸಹಾಯಧನ ನೀಡುವ ಗೃಹಿಣಿ ಶಕ್ತಿ ಯೋಜನೆ ಘೋಷಿಸಲಾಗಿತ್ತು. ದುಡಿಯುವ ವರ್ಗದ ಮಹಿಳೆಯರಿಗೆ ಶಕ್ತಿ ನೀಡಲು ಈ ಮೊತ್ತವನ್ನು 1 ಸಾವಿರ ರು.ಗಳಿಗೆ ಹೆಚ್ಚಳ ಮಾಡಲಾಗುವುದು ಎಂದು ಘೋಷಿಸಿದರು.
ವಕೀಲರ ಮೇಲೆ ಹಲ್ಲೆ ಮಾಡಿದರೆ 3 ವರ್ಷ ಜೈಲು: ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಮಸೂದೆ ಮಂಡನೆ
ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಜೆಟ್ನಲ್ಲಿ ಘೋಷಿಸಲಾಗಿದ್ದ ಒಂದು ಸಾವಿರ ಬಸ್ಸುಗಳನ್ನು 2000ಕ್ಕೆ ಹೆಚ್ಚಳ ಮಾಡಲಾಗುವುದು. ಇನ್ನು ಕಟ್ಟಡ ಕಾರ್ಮಿಕರ ಮಕ್ಕಳಿಗೆ ನಾಲ್ಕು ಸಾವಿರ ಶಿಶು ವಿಹಾರಗಳನ್ನು ಪ್ರಾರಂಭಿಸಲು ಬಜೆಟ್ನಲ್ಲಿ ಅನುದಾನ ಮೀಸಲಿಡಲಾಗಿದೆ. ನಿರುದ್ಯೋಗಿಗಳಿಗೆ ಬದುಕುವ ದಾರಿ ಕಲ್ಪಿಸಲಾಗಿದ್ದು, ಆಶಾ ಅಂಗನವಾಡಿ ಕಾರ್ಯಕರ್ತೆಯರು, ಅಡುಗೆ ಸಹಾಯಕರ ಗೌರವಧನವನ್ನು ಸತತ ಎರಡನೇ ವರ್ಷವೂ ಒಂದು ಸಾವಿರ ರು. ಹೆಚ್ಚಿಸಲಾಗಿದೆ. ರೈತರಿಗೆ 2 ಲಕ್ಷ ಜೀವ ವಿಮೆ ಹಾಗೂ ಅಪಘಾತ ವಿಮೆಯನ್ನು ಮೊದಲ ಬಾರಿಗೆ ಘೋಷಿಸಲಾಗಿದೆ ಎಂದು ಹೇಳಿದರು.
ಅವಶ್ಯಕತೆ ಹಾಗೂ ಸಂದರ್ಭಕ್ಕೆ ತಕ್ಕಂತೆ ರಾಜ್ಯ ಸರ್ಕಾರ ಸ್ಪಂದಿಸಿದೆ. ಜನಕಲ್ಯಾಣ ಹಾಗೂ ಆರ್ಥಿಕ ಸ್ಥಿರತೆಯನ್ನು ಸಾಧಿಸುವ ವಾಸ್ತವಿಕ ಬಜೆಟ್ ಮಂಡಿಸಿದ್ದೇನೆ. 402 ಕೋಟಿ ರು. ಉಳಿತಾಯ ಬಜೆಟ್ ಮಂಡಿಸಿರುವುದು ಆರ್ಥಿಕ ನಿರ್ವಹಣೆಯ ಪ್ರತಿಬಿಂಬ. ಹಿಂದಿನ ಸರ್ಕಾರದ ರೀತಿಯಲ್ಲಿ ಬೇಕಾಬಿಟ್ಟಿಸಾಲಗಳನ್ನು ಮಾಡದೆ ಕೊರೋನಾ ನಿರ್ವಹಣೆಯ ನಡುವೆಯೂ ಸಾಲದ ಪ್ರಮಾಣವನ್ನು ಮಿತಿಯಲ್ಲಿಡುವ ಮೂಲಕ ಆರ್ಥಿಕ ಶಿಸ್ತು ಪ್ರದರ್ಶಿಸಿದ್ದೇವೆ ಎಂದರು.
ಕಳಪೆ ರಸ್ತೆಗೆ ಅಧಿಕಾರಿಗಳೇ ಹೊಣೆ: ರಸ್ತೆ ಕಾಮಗಾರಿಗಳ ಗುಣಮಟ್ಟನಿಯಂತ್ರಣ ಮತ್ತು ಪರೀಕ್ಷಾ ವರದಿಗಳನ್ನು ಖಚಿತಪಡಿಸಿಕೊಳ್ಳದೆ ಗುತ್ತಿಗೆದಾರರಿಗೆ ಮೊತ್ತ ಪಾವತಿಸುವ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿಸುವ ಸಂಬಂಧ ಸರ್ಕಾರವು ಆದೇಶ ಹೊರಡಿಸಬೇಕು ಎಂದು ಭಾರತ ಲೆಕ್ಕ ನಿಯಂತ್ರಕರು ಮತ್ತು ಮಹಾ ಲೆಕ್ಕಪರಿಶೋಧಕರ (ಸಿಎಜಿ) ವರದಿಯು ಸಲಹೆ ನೀಡಿದೆ. ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಚ್ರ್ 2021ಕ್ಕೆ ಕೊನೆಗೊಂಡ ವರ್ಷಕ್ಕೆ ಲೋಕೋಪಯೋಗಿ ಇಲಾಖೆಯಲ್ಲಿ ರಸ್ತೆ ಕಾಮಗಾರಿಗಳ ಯೋಜನೆ ಮತ್ತು ಗುತ್ತಿಗೆ ನಿರ್ವಹಣೆ ಮೇಲಿನ ಕಾರ್ಯನಿರ್ವಹಣೆಗೆ ಸಂಬಂಧಿಸಿದ ವರದಿಯನ್ನು ಮಂಡಿಸಿದರು.
ಕಾಮಗಾರಿಗಳ ಅನುಷ್ಠಾನದಲ್ಲಿ ಉಂಟಾದ ಅಡಚಣೆಯನ್ನು ಸ್ಪಷ್ಟವಾಗಿ ದಾಖಲಿಸುವ ಮತ್ತು ಒಪ್ಪಂದ ನಿಬಂಧನೆಗಳಿಗೆ ಅನುಸಾರವಾಗಿ ಕಾರ್ಯನಿರ್ವಹಿಸುವ ‘ಅಡಚಣೆ ರಿಜಿಸ್ಟರ್’ ಅನ್ನು ಲೋಕೋಪಯೋಗಿ ಇಲಾಖೆ ನಿರ್ವಹಿಸುವುದನ್ನು ಸರ್ಕಾರ ಖಚಿತಪಡಿಸಿಕೊಳ್ಳಬೇಕು. ಅರಣ್ಯ ಇಲಾಖೆಯಿಂದ ಅಗತ್ಯ ಅನುಮತಿಯನ್ನು ಪಡೆದ ನಂತರವೇ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂಬುದನ್ನು ಸಹ ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಉದ್ದೇಶಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಸ್ತೆ ಅಭಿವೃದ್ಧಿಗೆ ಸಮಗ್ರ ವಾರ್ಷಿಕ ಮತ್ತು ಪಂಚ ವಾರ್ಷಿಕ ಯೋಜನೆಗಳನ್ನು ಸಿದ್ಧಪಡಿಸುವುದನ್ನು ಸರ್ಕಾರ ಖಚಿತಪಡಿಸಿಕೊಳ್ಳಬೇಕು.
ಶಾಸಕ ರಾಮದಾಸ್ ಹೊರತುಪಡಿಸಿ ಬೇರೊಬ್ಬರಿಗೆ ಬಿಜೆಪಿ ಟಿಕೆಟ್ ನೀಡಿ: ಬ್ರಾಹ್ಮಣ ಸಂಘ
ತಾಂತ್ರಿಕ ಮಂಜೂರಾತಿಯನ್ನು ನೀಡುವ ಪ್ರಾಧಿಕಾರಿಗಳು ಅಂದಾಜುಗಳನ್ನು ಕೂಲಂಕಷವಾಗಿ ಪರಿಶೀಲಿಸಬೇಕು. ತಪ್ಪಾದ ಅಂದಾಜಿನಿಂದ ನಷ್ಟ, ಹಾನಿಗಳ ಹೊಣೆಗಾರಿಕೆಯನ್ನು ನಿಗದಿಗೊಳಿಸಬೇಕು. ರಸ್ತೆ ಸುರಕ್ಷತಾ ಲೆಕ್ಕ ಪರಿಶೋಧನೆಗಳನ್ನು ಕಡ್ಡಾಯವಾಗಿ ನಡೆಸುವುದನ್ನು ಮತ್ತು ತಾಂತ್ರಿಕ ಮಂಜೂರಾತಿ ನೀಡುವ ಮೊದಲು ಅಂದಾಜುಗಳಲ್ಲಿ ಅಗತ್ಯವಿರುವ ರಸ್ತೆ ಸುರಕ್ಷತಾ ನಿಬಂಧನೆಗಳನ್ನು ಸೇರಿಸಲಾಗಿದೆ ಎಂಬುದರ ಕುರಿತು ಸರ್ಕಾರ ಗಮನಿಸಬೇಕು. ರಸ್ತೆ ಸುಧಾರಣೆ ಆಥವಾ ಅಭಿವೃದ್ಧಿ ಕಾಮಗಾರಿಗಳ ಸ್ಥಳದಿಂದ ಉಪಯುಕ್ತತೆಗಳನ್ನು ವರ್ಗಾಯಿಸಲು ನೀತಿ ಅಥವಾ ಮಾರ್ಗಸೂಚಿಗಳನ್ನು ರೂಪಿಸುವುದನ್ನು ಸರ್ಕಾರ ಪರಿಗಣಿಸಬೇಕು ಎಂದು ತಿಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ