
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆಯಾದರೂ ಆರ್ಥಿಕ ವಿಚಾರದಲ್ಲಿ ರಾಜ್ಯದ ಜನತೆಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಬೆಂಗಳೂರಿನ ನೆಹರೂ ತಾರಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಕುಸುಮ ಸಂಜೀವಿನಿ’ ಹೆಸರಲ್ಲಿ ಹಿಮೋಫಿಲಿಯ ರೋಗಿಗಳಿಗೆ ರೋಗ ನಿರೋಧಕ ಚಿಕಿತ್ಸೆ ಹಾಗೂ 108 ಆ್ಯಂಬುಲೆನ್ಸ್ ಸೇವೆಗಳನ್ನು ಡಿಸಿಎಂ ಶಿವಕುಮಾರ್ ಅವರು ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಸರ್ಕಾರ ಐದು ಗ್ಯಾರಂಟಿ ಮೂಲಕ ಕುಟುಂಬಕ್ಕೆ ₹5 ಸಾವಿರದಷ್ಟು ಹಣಕಾಸಿನ ನೆರವು, ಉಳಿತಾಯ ನೀಡುತ್ತಿದೆ. ಗೃಹಲಕ್ಷ್ಮೀ, ಉಚಿತ ಬಸ್ಸು, 200 ಯುನಿಟ್ವರೆಗೆ ವಿದ್ಯುತ್, ಯುವನಿಧಿ ಯೋಜನೆ ಜಾರಿಗೊಳಿಸಿದೆ. ಸರ್ಕಾರಕ್ಕೆ ಇದರಿಂದ ಹೊರೆ ಆಗುತ್ತಿರಬಹುದು. ಹೊರೆಯಾದರೂ ಸರ್ಕಾರ ಜನತೆಗೆ ಆರ್ಥಿಕ ಶಕ್ತಿ ಕಡಿಮೆ ಆಗಬಾರದು, ಮಾನಸಿಕ ಒತ್ತಡ ಉಂಟಾಗಬಾರದು. ಹೀಗೆ ಜನರಿಗೆ ಮಾನಸಿಕ ಧೈರ್ಯ ತುಂಬಲು, ಆರ್ಥಿಕ ಶಕ್ತಿ ತುಂಬುತ್ತಿದೆ ಎಂದರು.
ಜನರ ಜೇಬಲ್ಲಿ ₹10 ಹೆಚ್ಚಿದ್ದರೆ ಆತ್ಮವಿಶ್ವಾಸ ಜಾಸ್ತಿ ಮಾಡುತ್ತದೆ. ಇದನ್ನು ನಾವು ನೋಡಬೇಕಾಗುತ್ತದೆ. ಯಾರು ಇರಲಿ, ಇಲ್ಲದಿರಲಿ, ಕಾಂಗ್ರೆಸ್ ಸರ್ಕಾರ ಎಲ್ಲ ಹಂತದಲ್ಲೂ ಜನರ ಜತೆಯಿರಲಿದೆ. ಮಾನವನ ಸೇವೆ ಮಾಡುವುದು ನಮ್ಮ ಸರ್ಕಾರದ ಬದ್ಧತೆ. ಆರೋಗ್ಯ ಕ್ಷೇತ್ರದ ಬೇಡಿಕೆಗೆ ನಮ್ಮ ಸರ್ಕಾರ ಎಂದಿಗೂ ಹಿಂದೇಟು ಹಾಕಿಲ್ಲ. ಇಂತಹ ಅಪರೂಪದ ಕಾಯಿಲೆಯಿಂದ ಬಳಲುವ ಮಕ್ಕಳಿಗೆ ಆತ್ಮವಿಶ್ವಾಸ ತುಂಬಬೇಕು. ರಾಜ್ಯದ ಮಕ್ಕಳು ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್ ಆಗುವಂತೆ ಬೆಳೆಯಬೇಕು. ಯಾವುದೂ ಅಸಾಧ್ಯವಲ್ಲ. ದೇವರು ಅವಕಾಶ ನೀಡುತ್ತಾನೆ. ಸಿಕ್ಕಿರುವ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.
ಜನರ ಕಲ್ಯಾಣಕ್ಕಾಗಿ ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ. ಇದರಿಂದ ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಯಾವುದೇ ತೊಡಕಾಗಿಲ್ಲ. ಅಭಿವೃದ್ಧಿ ಹಾಗೂ ಗ್ಯಾರಂಟಿ ಯೋಜನೆ, ಎರಡನ್ನೂ ಸಮಾನವಾಗಿ ಮುಂದುವರಿಸುತ್ತೇವೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ.
ಗ್ಯಾರಂಟಿ ಯೋಜನೆಗಳಿಗಾಗಿ ವರ್ಷಕ್ಕೆ ಸುಮಾರು 52 ಸಾವಿರ ಕೋಟಿ ರು.ಗೂ ಹೆಚ್ಚು ಹಣವನ್ನು ವ್ಯಯಿಸಬೇಕಾಗುತ್ತದೆ. ಹೀಗಾಗಿ, ಈ ಹಣ ಭಾರ ಎಂದು ಡಿಸಿಎಂ ಹೇಳಿರಬಹುದು.
ಸಿದ್ದರಾಮಯ್ಯ, ಮುಖ್ಯಮಂತ್ರಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ