
ಕಲಬುರಗಿ (ಜು.9) : ಜಿಲ್ಲೆಯಲ್ಲಿ ಪೊಲೀಸರಿಂದ ಹಫ್ತಾ ವಸೂಲಿ ಮಾಡಿಸಲಾಗುತ್ತಿದೆ ಎಂದು ಆರೋಪಿಸಿ ಪೇದಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾದ ಪ್ರಕರಣ ಹಾಗೂ ಆ ಬಗ್ಗೆ ಮತ್ತೊಬ್ಬ ಪೇದೆ ವಿಡಿಯೋ ಮೂಲಕ ಹೇಳಿರುವುದರ ಕುರಿತು ಸಮಗ್ರ ತನಿಖೆಗೆ ಆದೇಶಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಎನ್ನಲಾದ ಪೇದೆ ಆ ಕುರಿತಾದ ವರದಿಗಳನ್ನು ಈಗಾಗಲೇ ನಿರಾಕರಣೆ ಮಾಡಿದ್ದು ತನಿಖೆಯ ನಂತರ ವಿವರಗಳು ಗೊತ್ತಾಗಲಿವೆ ಎಂದು ಅವರು ಹೇಳಿದ್ದಾರೆ.
ನಗರದ ಅಪ್ಪನ ಕೆರೆಯಲ್ಲಿ ಬಫರ್ ಜೋನ್ ನಲ್ಲಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿರುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪರಿಸರ ಪ್ರಭಾವ ಮೌಲ್ಯಮಾಪನ ವರದಿ ತರಿಸದೆ ಕೆಲಸ ಆರಂಭಿಸಿದ್ದು ಕೆರೆ ಸಂರಕ್ಷಣಾ ಕಾಯ್ದೆ ಉಲ್ಲಂಘನೆಯಾಗಿದೆ. ಹಾಗಾಗಿ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿದ್ದು ತನಿಖೆಗೆ ಆದೇಶಿಸಿದ್ದೇನೆ. ಆದರೆ, ಆ ಸ್ಥಳದಲ್ಲಿ ಸಾರ್ವಜನಿಕರು ಆಯತಪ್ಪಿ ಬೀಳುವ ಸಂಭವವಿರುವುದರಿಂದ ಬೇಲಿ ಹಾಕಿಸಲಾಗುತ್ತಿದೆ ಎಂದರು.
ಜು.15ಕ್ಕೆ ಸಚಿವ ಸಂಪುಟ ಉಪ ಸಮಿತಿ ಸಭೆ, ಬರಗಾಲ ಘೋಷಣೆ ಬಗ್ಗೆ ತೀರ್ಮಾನ, ಪ್ರಿಯಾಂಕ್ ಖರ್ಗೆ
ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 18000 ಶಿಕ್ಷಕರ ಹುದ್ದೆಗಳೂ ಸೇರಿದಂತೆ ರಾಜ್ಯದಲ್ಲಿ ಖಾಲಿ ಇರುವ 2.50 ಲಕ್ಷ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳನ್ನ ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಅವರು ಹೇಳಿದರು.
ನಗರ ವ್ಯಾಪ್ತಿಯಲ್ಲಿ ಚರಂಡಿಗಳಲ್ಲಿ ಮಳೆ ನೀರು ಸರಾಗವಾಗಿ ಸಾಗಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುತ್ತಿದೆ. ಅದಾದ ಮೇಲೆ ಮೂರು ತಿಂಗಳಿಗೊಮ್ಮೆ ಕೆಡಿಪಿ ಸಭೆ ನಡೆಸಲಾಗುವುದು ಎಂದು ಸಚಿವರು ಹೇಳಿದರು.
ಸೋಮವಾರ ಪೆನ್ ಡ್ರೈವ್ ಬಿಡುಗಡೆ ಮಾಡುವುದಾಗಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ ಎಂದು ಪತ್ರಕರ್ತರು ಪ್ರಶ್ನಿಸಿದಾಗ ಉತ್ತರಿಸಿದ ಪ್ರಿಯಾಂಕ್ ಖರ್ಗೆ ಸೋಮವಾರ ಏಕೆ, ಇವತ್ತೆ ಬಿಡುಗಡೆ ಮಾಡಲಿ ಅಥವಾ ನಾಳೆನೆ ಬಿಡುಗಡೆ ಮಾಡಲಿ ಎಂದು ಟಾಂಗ್ ನೀಡಿದರು.
ರಸ್ತೆ ಸುರಕ್ಷತೆ ಕಾಯ್ದೆ ವ್ಯಾಪ್ತಿಗೆ ಬಿಬಿಎಂಪಿ: ಮಸೂದೆ ಮಂಡಿಸಿದ ಸಚಿವ ಪ್ರಿಯಾಂಕ್ ಖರ್ಗೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ