
ಬೆಂಗಳೂರು(ಮೇ.29): ಲೈಂಗಿಕ ದೌರ್ಜನ್ಯ, ಅಪಹರಣ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೇ 31ರಂದು ಜರ್ಮನಿಯಿಂದ ಭಾರತಕ್ಕೆ ವಾಪಸ್ ಬರಲು ವಿಮಾನದ ಟಿಕೆಟ್ ಬುಕ್ ಆಗಿದೆ. ವಿಶೇಷ ತನಿಖಾ ತಂಡದ (ಎಸ್ಐಟಿ) ಎದುರು ವಿಚಾರಣೆಗೆ ಮೇ 31ರಂದು ಹಾಜರಾಗುವುದಾಗಿ ಅಜ್ಞಾತ ಸ್ಥಳದಿಂದ ವಿಡಿಯೊ ಬಿಡುಗಡೆ ಮಾಡಿದ್ದ ಪ್ರಜ್ವಲ್ , ಲುಫ್ತಾನ್ಸಾ ಏರ್ಲೈನ್ಸ್ ವಿಮಾನದಲ್ಲಿ ಮ್ಯೂನಿಚ್ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಎಸ್ಐಟಿ ತಂಡ ವಿಮಾನ ನಿಲ್ದಾಣದಲ್ಲಿ ಬೀಡು ಬಿಟ್ಟಿದೆ. ಪ್ರಜ್ವಲ್ ವಿಮಾನ ನಿಲ್ದಾಣ ಪ್ರವೇಶಿಸುತ್ತಿದ್ದಂತೆ ಎಸ್ಐಟಿ ವಶಕ್ಕೆ ಪಡೆಯಲಿದೆ.
ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನದ ಮಾರನೇ ದಿನವೇ ಪ್ರಜ್ವಲ್ ರೇವಣ್ಣ ಜರ್ಮನಿಗೆ ತೆರಳಿದ್ದರು. ಬಳಿಕ ಅವರ ವಿರುದ್ಧ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದವು. ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಪ್ರಜ್ವಲ್ಗೆ ನೋಟಿಸ್ ನೀಡಿತ್ತು. ವಿದೇಶದಲ್ಲಿರುವ ಇರುವುದರಿಂದ ವಿಚಾರಣೆಗೆ ಗೈರಾಗಿದ್ದ. ಹೀಗಾಗಿ ಎಸ್ಐಟಿ, ಇಂಟರ್ಪೋಲ್ ಮುಖಾಂತರ ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸಿತ್ತು.
ಲೈಂಗಿಕ ದೌರ್ಜನ್ಯ ಆರೋಪ: ಪ್ರಜ್ವಲ್ ಅರೆಸ್ಟ್ ಆಗುತ್ತಿದ್ದಂತೆ ಧ್ವನಿ ಟೆಸ್ಟ್ಗೆ ಎಸ್ಐಟಿ ಸಿದ್ಧತೆ?
ಈ ನಡುವೆ ಮೇ 15ರಂದು ಪ್ರಜ್ವಲ್ ಭಾರತಕ್ಕೆ ವಾಪಾಸ್ ಆಗಲು ಕಾಯ್ದಿರಿಸಿದ್ದ ವಿಮಾನ ಟಿಕೆಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಬಳಿಕ ಆ ಟಿಕೆಟ್ ರದ್ದಾಗಿತ್ತು. ಪ್ರಜ್ವಲ್ನ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು.
ಇದರ ಬೆನ್ನಲ್ಲೇ ವಿಡಿಯೋ ಬಿಡುಗಡೆ ಮಾಡಿದ್ದ ಪ್ರಜ್ವಲ್, ಮೇ 31ರಂದು ಬೆಂಗಳೂರಿಗೆ ಮರಳಿ ಎಸ್ಐಟಿ ಎದುರು ಹಾಜರಾಗಿ ವಿಚಾರಣೆ ಎದುರಿಸುವುದಾಗಿ ಹೇಳಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ