
ಬೆಂಗಳೂರು (ಮಾ.07): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಗರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪದಡಿ ಮಾರ್ವತಿ ಸಿದ್ದರಾಮಯ್ಯ ಹಾಗೂ ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ತನಿಖೆಗೆ ಬರುವಂತೆ ನೀಡಿದ್ದ ಸಮನ್ಸ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಲ್ಲಿ 14 ನಿವೇಶನಗಳನ್ನು ಅಕ್ರಮವಾಗಿ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಲೋಕಾಯುಕ್ತ ಇಲಾಖೆಯಿಂದ ತನಿಖೆ ಮಾಡಿದ್ದು, ನ್ಯಾಯಾಲಯಕ್ಕೆ ಸಾಕ್ಷಾಧಾರ ಕೊರತೆ ಎಂದು ಬಿ-ರಿಪೋರ್ಟ್ ಸಲ್ಲಿಕೆ ಮಾಡಿತ್ತು. ಆದರೆ, ಇದಕ್ಕೂ ಕೆಲವು ದಿನಗಳ ಮುಂಚೆ ಪಾರ್ವತಿ ಸಿದ್ದರಾಮಯ್ಯ ಅವರು ಸೈಟು ಹಂಚಿಕೆ ಹಗರಣದಲ್ಲಿ ಭಾಗಿಯಾಗಿದ್ದಾರೆ ಮತ್ತು ಇದಕ್ಕೆ ಸಂಬಂಧಿತ ಕಡತಗಳನ್ನು ಮುಚ್ಚಿ ಹಾಕುವಲ್ಲಿ ಸಚಿವ ಬೈರತಿ ಸುರೇಶ್ ಅವರ ಕೈವಾಡವೂ ಇದೆ ಎಂದು ಆರೋಪ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ವತಿಯಿಂದ ಇಬ್ಬರಿಗೂ ವಿಚಾರಣೆಗೆ ಬರುವಂತೆ ನೊಟೀಸ್ ನೀಡಲಾಗಿತ್ತು. ಆದರೆ, ವಿಚಾರಣೆಗೆ ಹಾಜರಾಗದೇ ಹೈಕೋರ್ಟ್ ಮೊರೆ ಹೋಗಿದ್ದರು.
ಇದನ್ನೂ ಓದಿ:
ಇಡಿ ಸಮನ್ಸ್ ರದ್ದುಗೊಳಿಸುವಂತೆ ಬೈರತಿ ಸುರೇಶ್ ಹಾಗೂ ಪಾರ್ವತಿ ಸಿದ್ದರಾಮಯ್ಯ ಅವರು ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದಿಂದ ಕಳೆದೆರಡು ವಾರಗಳಲ್ಲಿ ಸಂಪೂರ್ಣವಾಗಿ ವಾದ ವಿವಾದ ಆಲಿಸಿತ್ತು. ತೀರ್ಪು ಕಾಯ್ದಿರಿಸಿದ್ದ ನ್ಯಾಯಾಲಯವು ಇಂದು ಆದೇಶವನ್ನು ಹೊರಡಿಸಿದ್ದು, ಇಡಿ ಸಮನ್ಸ್ ರದ್ದುಗೊಳಿಸಿದೆ. ಈ ಮೂಲಕ ಪಾರ್ವತಿ ಸಿದ್ದರಾಮಯ್ಯ ಹಾಗೂ ಸಚಿವ ಬೈರತಿ ಸುರೇಶ್ ಅವರನ್ನು ತನಿಖೆ ಮಾಡುವಂತಿಲ್ಲ ಎಂದು ತಿಳಿಸಿದೆ.
ಆದರೆ, ಈ ಮುಡಾ ಕೇಸಿನಲ್ಲಿ ಇಡಿ ದಾಖಲಿಸಿಕೊಂಡಿದ್ದ ಸಂಪೂರ್ಣ ಇಸಿಐಆರ್ ರದ್ದಾಗಿಲ್ಲ. ಪಾರ್ವತಿ ಸಿದ್ದರಾಮಯ್ಯ ಹಾಗೂ ಬೈರತಿ ಸುರೇಶ್ ಅವರ ವಿರುದ್ಧದ ತನಿಖೆ ಮಾಡುವಂತಿಲ್ಲ. ಆದರೆ, ಕೇಸಿನಲ್ಲಿ ಭಾಗಿಯಾಗಿರುವ ಇತರರನ್ನು ತನಿಖೆಗೆ ಒಳಪಡಿಸಿ ವಿಚಾರಣೆ ಮಾಡಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ