ಗುಡಿಸಲು ಕಳೆದುಕೊಂಡವರಿಗೆ 6,100 ಪರಿಹಾರ ಸಾಕೇ?ಸರ್ಕಾರದ ಕ್ರಮಕ್ಕೆ ಹೈಕೋರ್ಟ್‌ ಅಸಮಾಧಾನ

Kannadaprabha News   | Asianet News
Published : Aug 12, 2020, 08:50 AM IST
ಗುಡಿಸಲು ಕಳೆದುಕೊಂಡವರಿಗೆ 6,100 ಪರಿಹಾರ ಸಾಕೇ?ಸರ್ಕಾರದ ಕ್ರಮಕ್ಕೆ ಹೈಕೋರ್ಟ್‌ ಅಸಮಾಧಾನ

ಸಾರಾಂಶ

ಕಾಚರಕನಹಳ್ಳಿ ವಲಸೆ ಕಾರ್ಮಿಕರ ಗುಡಿಸಲುಗಳಿಗೆ ಬೆಂಕಿ ಪ್ರಕರಣ| ಸರ್ಕಾರದ ವಿರುದ್ಧ ಕಿಡಿ| ಪರಿಹಾರ ಮೊತ್ತ ಹೆಚ್ಚಿಸಲು ಸೂಚನೆ| ಪರಿಹಾರ ಮೊತ್ತವನ್ನು ಹೆಚ್ಚಿಸುವಂತೆ ಸೂಚಿಸಿದ ಹೈಕೋರ್ಟ್‌|  

ಬೆಂಗಳೂರು(ಆ.12): ನಗರದ ಕಾಚರಕನಹಳ್ಳಿಯ ಕೊಳಗೇರಿ ಪ್ರದೇಶದಲ್ಲಿ ವಾಸ ಮಾಡುತ್ತಿದ್ದ ವಲಸೆ ಕಾರ್ಮಿಕರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಸಂತ್ರಸ್ತ ಕುಟುಂಬಗಳಿಗೆ ತಲಾ 6,100 ರು. ಪರಿಹಾರ ಘೋಷಣೆ ಮಾಡಿರುವ ಸರ್ಕಾರದ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್‌, ಪರಿಹಾರ ಮೊತ್ತವನ್ನು ಹೆಚ್ಚಿಸುವಂತೆ ಸೂಚಿಸಿದೆ.

ಪ್ರಕರಣ ಕುರಿತು ವಕೀಲರಾದ ವೈಶಾಲಿ ಹೆಗಡೆ ಬರೆದ ಪತ್ರ ಆಧರಿಸಿ ದಾಖಲಿಸಿಕೊಂಡ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ, ಸಂತ್ರಸ್ತ ಕುಟುಂಬಕ್ಕೆ ಕೇವಲ 6,100 ರು. ಪರಿಹಾರ ಸಾಕೇ, ಇಡೀ ಮನೆಯನ್ನೇ ಕಳೆದುಕೊಂಡಿರುವಾಗ ಈ ಹಣ ಯಾವುದಕ್ಕೆ ಸರಿ ಹೊಂದುತ್ತದೆ, ಆ ಮೊತ್ತದಲ್ಲಿ ಮನೆಯನ್ನು ಕಟ್ಟಿಕೊಳ್ಳಲು ಸಾಧ್ಯವೇ ಎಂದು ತೀಕ್ಷ್ಣವಾಗಿ ಪ್ರಶ್ನಿಸಿತು.

ತವರಿನಿಂದ ಬಂದವರಿಗೆ ಶಾಕ್‌: ಕೂಲಿ ಕಾರ್ಮಿಕರ 30 ಗುಡಿಸಲಿಗೆ ಬೆಂಕಿ!

ಸರ್ಕಾರಿ ವಕೀಲರು ಉತ್ತರಿಸಿ, ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ರಾಜ್ಯ ವಿಪತ್ತು ನಿಧಿಯಿಂದ ಈ ಪರಿಹಾರ ಕೊಡಲಾಗುತ್ತಿದೆ. ಮನೆ ಹಾನಿಗೆ 4,100 ರು. ಮತ್ತು ಗೃಹ ಬಳಕೆ ವಸ್ತು ನಾಶಕ್ಕೆ 2,000 ರು. ಪರಿಹಾರ ನೀಡಲಾಗುತ್ತಿದೆ ಎಂದು ಸಮಜಾಯಿಷಿ ನೀಡಿದರು. ಅದನ್ನು ಒಪ್ಪದ ನ್ಯಾಯಪೀಠ, ಪ್ರಕರಣವು ವಿಪತ್ತು ಅಲ್ಲ. ಕಿಡಿಗೇಡಿಗಳು ಕಾನೂನನ್ನು ತಮ್ಮ ಕೈಗೆ ತೆಗೆದುಕೊಂಡು ಅಮಾಯಕರ ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ಪ್ರಕರಣವನ್ನು ವಿಪತ್ತು ಕಾಯ್ದೆಯಡಿ ಪರಿಗಣಿಸಿ ಪರಿಹಾರ ನೀಡಲು ಆಗುವುದಿಲ್ಲ. ರಾಜ್ಯ ಸರ್ಕಾರ ಸೂಕ್ತ ಪರಿಹಾರ ಕೊಡಬೇಕು ಎಂದು ನುಡಿಯಿತು.

ಅಲ್ಲದೆ, ಈಗ 6100 ಪರಿಹಾರ ಘೋಷಿಸಿ ಕೈಗೊಂಡ ನಿರ್ಧಾರವನ್ನು ಸರ್ಕಾರ ಎರಡು ವಾರದಲ್ಲಿ ಮರು ಪರಿಶೀಲನೆ ನಡೆಸಿ ಪ್ರಮಾಣಪತ್ರ ಸಲ್ಲಿಸಬೇಕು. ಹಾಗೆಯೇ, ಈಗಾಗಲೇ ನಿರ್ಧರಿಸಿರುವಂತೆ ಪರಿಹಾರ ಮೊತ್ತವನ್ನು ಸಂತ್ರಸ್ತರಿಗೆ ವಿತರಿಸುವ ಕಾರ್ಯ ಆರಂಭಿಸಬೇಕು. ಎಷ್ಟುಜನರಿಗೆ ಪರಿಹಾರ ವಿತರಿಸಲಾಯಿತು ಮತ್ತು ಮರು ಪರಿಶೀಲನೆ ಮಾಡಿದ ನಂತರ ಎಷ್ಟು ಹಣವನ್ನು ಪರಿಹಾರವಾಗಿ ನೀಡಲಾಗುತ್ತದೆ ಎಂಬ ಬಗ್ಗೆ ಮಾಹಿತಿ ನೀಡಿ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು. ವಿಚಾರಣೆ ವೇಳೆ ಸರ್ಕಾರದ ಪರ ವಕೀಲ ವಿಕ್ರಂ ಹುಯಿಲುಗೋಳ ವಾದ ಮಂಡಿಸಿ, ಮನೆ ಕಳೆದುಕೊಂಡ ಸಂತ್ರಸ್ತ ಕುಟುಂಬಗಳಿಗೆ ತಲಾ 6,100 ರು. ಪರಿಹಾರ ಘೋಷಿಸಲಾಗಿದೆ ಎಂದು ತಿಳಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕುಡುಕರ ಲಿವರ್‌ ಚಿಕಿತ್ಸೆಗೆ ಹಣ ಕೇಳಿದ ಶಾಸಕರು: ಪರಿಷತ್‌ನಲ್ಲಿ ಸ್ವಾರಸ್ಯಕರ ಚರ್ಚೆ
ಸಾಲುಮರದ ತಿಮ್ಮಕ್ಕ ಹೆಸರಲ್ಲಿ ಪ್ರತಿ ವರ್ಷ ಪ್ರಶಸ್ತಿ ಪ್ರದಾನ: ಸಿಎಂ ಸಿದ್ದರಾಮಯ್ಯ