
ಬೆಂಗಳೂರು (ಆ.08): ಹಿಂಬಾಕಿ ಪಾವತಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರೆ ನೀಡಲಾಗಿದ್ದ ಮುಷ್ಕರವನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿ ಕೆಎಸ್ಆರ್ಟಿಸಿ ಕಾರ್ಮಿಕ ಸಂಘಟನೆಗಳು ಸಲ್ಲಿಸಿದ ಪ್ರಮಾಣ ಪತ್ರವನ್ನು ಪರಿಗಣಿಸಿ ಮುಷ್ಕರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಇತ್ಯರ್ಥಪಡಿಸಿರುವ ಹೈಕೋರ್ಟ್, ಸರ್ಕಾರ ಮತ್ತು ಕಾರ್ಮಿಕರ ನಡುವೆ ಸಂಧಾನ ಮುಂದುವರಿಯಲಿ ಎಂದು ಸಲಹೆ ನೀಡಿದೆ.
ಮುಷ್ಕರದಿಂದ ಜನಸಾಮಾನ್ಯರಿಗೆ ತೊಂದರೆ ಉಂಟಾಗುವುದರಿಂದ ಮುಷ್ಕರ ನಡೆಸದಂತೆ ಕೆಎಸ್ಆರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಗೆ ಆದೇಶಿಸುವಂತೆ ಕೋರಿ ಬೆಂಗಳೂರಿನ ಜೆ. ಸುನೀಲ್ ಮತ್ತಿತರರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಆ.5ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್, ಸರ್ಕಾರ ಎಸ್ಮಾ ಕಾಯ್ದೆ ಜಾರಿ ಮಾಡಿದ್ದರೂ ಮುಷ್ಕರ ನಡೆಸಿರುವುದು ಅಕ್ರಮವೆಂದು ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯನ್ನು ತರಾಟೆಗೆ ತೆಗೆದುಕೊಂಡಿತ್ತು. ಜೊತೆಗೆ ಮುಷ್ಕರ ಹಿಂಪಡೆದು ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಬೇಕು.
ಇಲ್ಲವಾದರೆ ಕ್ರಿಯಾ ಸಮಿತಿಯ ಪದಾಧಿಕಾರಿಗಳನ್ನು ಬಂಧಿಸಲು ಆದೇಶಿಸಲಾಗುವುದು ಎಂದು ಎಚ್ಚರಿಕೆ ನೀಡಿ ವಿಚಾರಣೆ ಮುಂದೂಡಿತ್ತು. ಗುರುವಾರ ಅರ್ಜಿ ಮತ್ತೆ ವಿಚಾರಣೆಗೆ ಬಂದಾಗ ಕಾರ್ಮಿಕ ಸಂಘಟನೆಗಳ ಪರ ವಕೀಲರು ಹಾಜರಾಗಿ, ಸದ್ಯ ಮುಷ್ಕರವನ್ನು ಹಿಂಪಡೆಯಲಾಗಿದೆ ಎಂದು ಮಾಹಿತಿ ನೀಡಿ, ಆ ಕುರಿತ ನಿರ್ಣಯವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ಸರ್ಕಾರದ ಪರ ವಕೀಲರು, ಕಾರ್ಮಿಕರ ಜತೆ ಸಂಧಾನ ಮುಂದುವರಿಯುತ್ತಿದೆ. ಇಂದೂ ಸಹ ಮಾತುಕತೆ ನಡೆದಿದ್ದು, ಆ.28ಕ್ಕೆ ಮತ್ತೆ ಸಂಧಾನ ಸಭೆ ನಡೆಯಲಿದೆ ಎಂದು ತಿಳಿಸಿದರು.
ಅರ್ಜಿದಾರರ ಪರ ವಕೀಲೆ ದೀಕ್ಷಾ ಅಮೃತೇಶ್, ಸದ್ಯ ಮುಷ್ಕರ ಹಿಂಪಡೆಯಲಾಗಿದೆ. ಆದರೆ ಮುಂದಿನ ದಿನಗಳಲ್ಲಿ ಇದೇ ಪರಿಸ್ಥಿತಿ ಮರುಕಳಿಸುವ ಸಾಧ್ಯತೆಯಿದೆ. ಆದ್ದರಿಂದ ಪ್ರಕರಣ ಸಂಬಂಧ ನಿರ್ಧಾರ ಕೈಗೊಳ್ಳಲು ಸರ್ಕಾರಕ್ಕೆ ಕಾಲಮಿತಿ ನಿಗದಿಪಡಿಸಿ ಆದೇಶಿಸಬೇಕು ಎಂದು ಕೋರಿದರು. ಸದ್ಯ ಮುಷ್ಕರ ಹಿಂಪಡೆದಿರುವ ಕಾರಣ ಅರ್ಜಿ ಇತ್ಯರ್ಥಪಡಿಸಲಾಗುತ್ತಿದೆ ಎಂದು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರ ನೇತೃತ್ವದ ವಿಭಾಗೀಯ ಪೀಠ ತಿಳಿಸಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ