ಬೈಕ್ ಟ್ಯಾಕ್ಸಿ ಚಾಲಕರ ಮೇಲಿನ ಹಲ್ಲೆ ತಡೆಗೆ ಹೈಕೋರ್ಟ್‌ ಸೂಚನೆ

By Kannadaprabha NewsFirst Published Apr 26, 2024, 10:40 AM IST
Highlights

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬೈಕ್‌ ಟ್ಯಾಕ್ಸಿ ಚಾಲಕರ ಮೇಲೆ ನಡೆಯುತ್ತಿರುವ ಹಲ್ಲೆ ಹಾಗೂ ಅವರ ಕಾರ್ಯನಿರ್ವಹಣೆಗೆ ಅಡ್ಡಿ ಉಂಟು ಮಾಡುತ್ತಿರುವುದನ್ನು ತಡೆಯಲು ಅಗತ್ಯ ಕ್ರಮ ಜರುಗಿಸುವಂತೆ ಗೃಹ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ. 

ಬೆಂಗಳೂರು (ಏ.26): ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬೈಕ್‌ ಟ್ಯಾಕ್ಸಿ ಚಾಲಕರ ಮೇಲೆ ನಡೆಯುತ್ತಿರುವ ಹಲ್ಲೆ ಹಾಗೂ ಅವರ ಕಾರ್ಯನಿರ್ವಹಣೆಗೆ ಅಡ್ಡಿ ಉಂಟು ಮಾಡುತ್ತಿರುವುದನ್ನು ತಡೆಯಲು ಅಗತ್ಯ ಕ್ರಮ ಜರುಗಿಸುವಂತೆ ಗೃಹ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಬೈಕ್ ಟ್ಯಾಕ್ಸಿ ಚಾಲಕರ ಸೇವೆ ಅಡ್ಡಿಯುಂಟು ಮಾಡುತ್ತಿರುವುದನ್ನು ತಡೆಯಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬೆಂಗಳೂರಿನ ಮಡಿವಾಳದ ಎ.ಶ್ರೀಕಾಂತ್ ರೆಡ್ಡಿ ಹಾಗೂ ಬೈಕ್‌ ಟ್ಯಾಕ್ಸಿ ಕ್ಷೇಮಾಭಿವೃದ್ಧಿ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಮೂರ್ತಿ ಹೇಮಂತ್ ಚಂದನ್ ಗೌಡರ್‌ ಅವರ ಪೀಠ ಈ ನಿರ್ದೇಶನ ನೀಡಿದೆ. 

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗೆ ಕಾನೂನುಬಾಹಿರವಾಗಿ ತಡೆಯೊಡ್ಡಲು ಯಾರಾದರೂ ಯತ್ನಿಸಿದರೆ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಸರ್ಕಾರ, ಗೃಹ ಇಲಾಖೆ ಮತ್ತು ಪೊಲೀಸ್ ಇಲಾಖೆಗೆ ನ್ಯಾಯಪೀಠ ಇದೇ ವೇಳೆ ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿದೆ. ಅರ್ಜಿದಾರರ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ, ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ನಿರಂತರವಾಗಿ ಹಲ್ಲೆಗಳು ನಡೆಯುತ್ತಿವೆ. ಅದನ್ನು ತಡೆಯಲು ಮತ್ತು ಹಲ್ಲೆಕೋರರ ಮೇಲೆ ಪೊಲೀಸರು ಯಾವುದೇ ಕಾನೂನು ಕ್ರಮ ಜರುಗಿಸುತ್ತಿಲ್ಲ ಹಾಗಾಗಿ ಬೈಕ್ ಟ್ಯಾಕ್ಸಿಕಾರ್ಯಾ ಚರಣೆಗೆ ಅಡ್ಡಿ ಮಾಡುವವರ ವಿರುದ್ಧ ಕ್ರಮ ಜರುಗಿಸಲು ಪೊಲೀಸರಿಗೆ ನಿರ್ದೇಶಿಸಬೇಕು ಎಂದು ಕೋರಿದರು.

ಕರ್ನಾಟಕ Election 2024 Live: ಮತದಾನ ನಿಮ್ಮ ಹಕ್ಕು, ಬೇಗ ಹೋಗಿ ಚಲಾಯಿಸಿ

ಕಾಜಲ್‌ ಹಿಂದುಸ್ತಾನಿ ವಿರುದ್ಧದ ಕೇಸ್‌ಗೆ ಹೈಕೋರ್ಟ್‌ ತಡೆ: ಕೋಮು ದ್ವೇಷ ಭಾಷಣ ಮಾಡಿದ ಆರೋಪ ಸಂಬಂಧ ರಾಷ್ಟ್ರೀಯವಾದಿ ಕಾಜಲ್‌ ಹಿಂದುಸ್ತಾನಿ ವಿರುದ್ಧ ದಾಖಲಿಸಿರುವ ಕ್ರಿಮಿನಲ್‌ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಪ್ರಕರಣ ಸಂಬಂಧ ತಮ್ಮ ವಿರುದ್ಧದ ಪ್ರಾಸಿಕ್ಯೂಷನ್‌ಗೆ ಉಡುಪಿ ಜಿಲ್ಲಾಧಿಕಾರಿ ನೀಡಿರುವ ಪೂರ್ವಾನುಮತಿ ರದ್ದುಪಡಿಸುವಂತೆ ಕೋರಿ ಕಾಜಲ್ ಹಿಂದುಸ್ತಾನಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪಸನ್ನ ಅವರ ಪೀಠ ಈ ಆದೇಶ ಮಾಡಿದೆ. ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿ, ಅರ್ಜಿದಾರರ ಭಾಷಣ ಯಾವುದೇ ರೀತಿ ಕೋಮು ದ್ವೇಷಕ್ಕೆ ಎಡೆಮಾಡಿಕೊಟ್ಟಿಲ್ಲ. 

ಪಿಯು ಪರೀಕ್ಷೆ 2: ನೋಂದಾಯಿಸಿದ ವಿಷಯಕ್ಕೆ ಮಾತ್ರ ಹಾಜರಾದರೆ ಸಾಕು

ಎಫ್‌ಐಆರ್‌ನಲ್ಲಿ ಮಾಡಲಾಗಿರುವ ಆರೋಪಗಳನ್ನು ಸಾಬೀತುಪಡಿಸುವ ಯಾವುದೇ ದಾಖಲೆಗಳು ಇಲ್ಲ. ಸಮಾಜದಲ್ಲಿ ಅರ್ಜಿದಾರರ ಘನತೆ ಹಾಗೂ ಖ್ಯಾತಿಗೆ ಧಕ್ಕೆ ತರುವ ಉದ್ದೇಶದಿಂದ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ತನಿಖಾಧಿಕಾರಿಗಳಾದ ಉಡುಪಿ ಟೌನ್‌ ಠಾಣಾ ಪೊಲೀಸರು, ಪೂರಕ ಸಾಕ್ಷ್ಯಾಧಾರಗಳ ಕೊರತೆಯಿದ್ದರೂ ಅರ್ಜಿದಾರರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಜಿಲ್ಲಾಧಿಕಾರಿಗಳು ಪ್ರಾಸಿಕ್ಯೂಷನ್‌ಗೆ ನೀಡಿರುವ ಪೂರ್ವಾನುಮತಿಯನ್ನು ರದ್ದುಪಡಿಸಬೇಕು ಎಂದು ಕೋರಿದರು. ಅದನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧದ ಕ್ರಿಮಿನಲ್‌ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳಿಗೆ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿದೆ.

click me!