HMT Land Row 450 ಎಕರೆ ಎಚ್ಎಂಟಿ ಭೂಮಿ ರಾಜ್ಯ ಸರ್ಕಾರ ವಶಪಡಿಸಿಕೊಳ್ಳದಂತೆ ಹೈಕೋರ್ಟ್‌ನಿಂದ ತಡೆ

Gowthami K   | Kannada Prabha
Published : Jul 31, 2026, 10:26 AM IST
HMT

ಸಾರಾಂಶ

ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ಎಚ್‌ಎಂಟಿ ಲಿಮಿಟೆಡ್‌ಗೆ ಸೇರಿದ 430 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ. ಭೂಮಿ ಹಸ್ತಾಂತರಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಹೊರಡಿಸಿದ್ದ ಆದೇಶಕ್ಕೆ ತಡೆ ನೀಡಿರುವ ನ್ಯಾಯಪೀಠ, ಮುಂದಿನ ಆದೇಶದವರೆಗೆ ಎಚ್‌ಎಂಟಿಯನ್ನು ತೆರವುಗೊಳಿಸಬಾರದು ಎಂದು ಮಧ್ಯಂತರ ಆದೇಶ ನೀಡಿದೆ.

ಬೆಂಗಳೂರು: ಬೆಂಗಳೂರಿನ ಜಾಲಹಳ್ಳಿಯಲ್ಲಿ ಎಚ್‌ಎಂಟಿ ಲಿಮಿಟೆಡ್‌ ಕಂಪನಿಗೆ ಸೇರಿದ 430 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌‌ ನಿರ್ದೇಶಿಸಿದೆ. ಭೂಮಿಯನ್ನು 30 ದಿನಗಳಲ್ಲಿ ತನಗೆ ಹಸ್ತಾಂತರ ಮಾಡುವಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಜೂ.15ರಂದು ಹೊರಡಿಸಿರುವ ಆದೇಶ ಪ್ರಶ್ನಿಸಿ ಎಚ್‌ಎಂಟಿ ಲಿಮಿಟೆಡ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರ ಪೀಠ ಈ ಮಧ್ಯಂತರ ಆದೇಶವನ್ನು ಮಾಡಿದೆ.

ವಿಚಾರಣೆ ವೇಳೆ ಎಚ್‌ಎಂಟಿ ಪರ ಹಾಜರಾದ ಹಿರಿಯ ವಕೀಲರು, ವಿವಾದಿತ ಭೂಮಿ ಹೊರತುಪಡಿಸಿ ಉಳಿದ ಭೂಮಿಯನ್ನು ಸಂಸ್ಥೆ ಪರಭಾರೆ ಮಾಡುವುದಿಲ್ಲವೆಂದು ನ್ಯಾಯಾಲಯಕ್ಕೆ ಮುಚ್ಚಳಿಕೆ ನೀಡಲಾಗುವುದು ಎಂದು ತಿಳಿಸಿದರು.

ಯಾವುದೇ ಮರಗಳನ್ನು ಕತ್ತರಿಸಬಾರದು

ಆ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಪೀಠ, ಎಚ್‌ಎಂಟಿ ಉಳಿದ ಭೂಮಿಯ ಮಾರಾಟ, ಗುತ್ತಿಗೆ, ಪರವಾನಗಿ, ಅಡಮಾನ ಅಥವಾ ಇತರೆ ಯಾವುದೇ ರೀತಿಯಲ್ಲಿ ಬದಲಾಯಿಸುವಂತಿಲ್ಲ. ಯಾವುದೇ ಮರಗಳನ್ನು ಕತ್ತರಿಸಬಾರದು ಅಥವಾ ವಿವಾದಿತ ಆಸ್ತಿಯ ಮೇಲೆ ಯಾವುದೇ ಮೂರನೇ ವ್ಯಕ್ತಿಯ ಹಕ್ಕುಗಳನ್ನು ಸೃಷ್ಟಿಸಬಾರದು‌ ಇನ್ನೂ ಮುಂದಿನ ವಿಚಾರಣೆಯವರೆಗೆ ಹಾಲಿ ಸ್ವಾಧೀನದಲ್ಲಿರುವ ಎಚ್‌ಎಂಟಿಯನ್ನು ತೆರವುಗೊಳಿಸಬಾರದು ಎಂದು ಸರ್ಕಾರಕ್ಕೆ ನಿರ್ದೇಶಿಸಿ ಆದೇಶ ಮಾಡಿದೆ.

ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲರು, ನ್ಯಾಯಾಲಯದ ಮುಂದೆ ಪ್ರಶ್ನಿಸಿರುವ ಆದೇಶ ಸುಪ್ರೀಂಕೋರ್ಟ್‌ನಲ್ಲಿ ರಾಜ್ಯ ಸರ್ಕಾರದ ನಿಲುವಿಗೆ ವಿರುದ್ಧವಾಗಿದೆ. ರಾಜ್ಯ ಸರ್ಕಾರ ಈ ಹಿಂದೆ ಭೂಮಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರೂ, ನಂತರ ಅದನ್ನು ಹಿಂಪಡೆಯಲು ಪ್ರಯತ್ನಿಸಿದೆ. ಈ ಮಧ್ಯೆ, ಭೂಮಿ ಡಿನೋಟಿಫೈ ಮಾಡಲು ರಾಜ್ಯಕ್ಕೆ ನಿರ್ದೇಶನಗಳನ್ನು ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಸುಮಾರು 178 ಎಕರೆಗಳನ್ನು ಈಗಾಗಲೇ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು ಮತ್ತಿತರರಿಗೆ ಮಾರಾಟ ಮಾಡಲಾಗಿದೆ. ಆದರೆ, ಇದನ್ನು ದಾಖಲೆ ಸಹಿತ ಸಲ್ಲಿಸಿದ್ದರೂ ಸಹ ಉಪ ಸಂರಕ್ಷಣಾಧಿಕಾರಿ ಸಂಪೂರ್ಣ ವಿಸ್ತೀರ್ಣದ ಭೂಮಿ ಲಭ್ಯವಿದೆ ಎಂದು ಆದೇಶದಲ್ಲಿ ಹೇಳಿದ್ದಾರೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ರಾಜ್ಯ ಸರ್ಕಾರದ ಪರ ಹಾಜರಾಗಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಕಿರಣ್‌ ರೋಣ್‌, ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ತನ್ನ ಅರ್ಜಿಯನ್ನು ಹಿಂತೆಗೆದುಕೊಂಡಿದೆ. ಮೂಲ ಭೂಮಿಯ ಗಣನೀಯ ಭಾಗವನ್ನು ಈಗಾಗಲೇ ವರ್ಗಾಯಿಸಲಾಗಿದ್ದರೂ, ಸುಮಾರು 290 ಎಕರೆಗಳು ಗಮನಾರ್ಹ ಹಸಿರು ಹೊದಿಕೆಯೊಂದಿಗೆ ಖಾಲಿಯಾಗಿ ಉಳಿದಿದೆ. ಎಚ್‌ಎಂಟಿಯನ್ನು ಮರಗಳನ್ನು ಕಡಿಯದಂತೆ ನಿರ್ಬಂಧಿಸಬೇಕೆಂದು ಮನವಿ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾವೇರಿ ನೀರು ಬಿಡುಗಡೆಗೆ ನಿರ್ವಹಣಾ ಪ್ರಾಧಿಕಾರದಿಂದಲೂ ಆದೇಶ ಕಾವೇರಿ ಇಕ್ಕಟ್ಟಿನಲ್ಲಿ ಸರ್ಕಾರ - ಮುಂದೇನು?
ಯೋಗೇಶ್ ಗೌಡ ಹತ್ಯೆ ಕೇಸ್: ಜಾಮೀನು ಕೋರಿ ವಿನಯ್‌ ಕುಲಕರ್ಣಿ ಅರ್ಜಿ ಇಂದು ಹೈಕೋರ್ಟ್‌ ತೀರ್ಪು