
ವಿಧಾನಸಭೆ(ಸೆ.23): ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗೆ ನಾನು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ.
ಗುರುವಾರ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿ ಮಾತನಾಡಿದ ಅವರು, ‘ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಪಟ್ಟಿದ್ದೇನೆ. ನನ್ನ ಅವಧಿಯಲ್ಲಿ ತಾಂತ್ರಿಕ ಕಾರಣಗಳಿಂದಾಗಿ ಸಾಧ್ಯವಾಗಲಿಲ್ಲ. ಸಮುದಾಯವನ್ನು 2ಎಗೆ ಸೇರಿಸಬೇಕು ಎಂಬುದು ನನ್ನ ಒತ್ತಾಯವಾಗಿದೆ. ಈ ಹಿಂದೆ ಪಂಚಮಸಾಲಿ ಸಮುದಾಯಕ್ಕೆ 3ಬಿ ವರ್ಗಕ್ಕೆ ಮೀಸಲಾತಿ ತಂದಿದ್ದೇನೆ. 2ಎ ಮೀಸಲಾತಿಗೆ ಸಮುದಾಯ ಒತ್ತಾಯಿಸಿದ್ದು, ಕಾರಣಾಂತರಗಳಿಂದ ಸಾಧ್ಯವಾಗಿರಲಿಲ್ಲ. ಆದರೆ, ಸಮುದಾಯಕ್ಕೆ ತೊಂದರೆಯಾಗಬಾರದು ಎಂದು ಹಿಂದುಳಿದ ವರ್ಗ ಆಯೋಗಕ್ಕೆ ವರದಿ ನೀಡಲು ಸೂಚಿಸಿದ್ದೆ’ ಎಂದು ಸ್ಪಷ್ಟನೆ ನೀಡಿದರು.
ಬಿಎಸ್ವೈಯವರನ್ನು ಪಂಚಮಸಾಲಿ ಲಿಂಗಾಯತರ ವಿರೋಧಿ ಎಂದು ಬಿಂಬಿಸುವ ಯತ್ನ ವಿಷಾದನೀಯ: ವಿಜಯೇಂದ್ರ
ಇದಕ್ಕೆ ಉತ್ತರ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ಸರ್ಕಾರಕ್ಕೆ ವರದಿ ಸಲ್ಲಿಸಿದ ನಂತರ ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ವೀರಶೈವರ ಹಲವು ಪಂಗಡ ಬಿಟ್ಟು ಹೋಗಿದ್ದವು. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಸಂಪುಟ ಉಪಸಮಿತಿ ಮಾಡಿದ್ದರು. ನಾನು ಸಹ ಅದರ ಸದಸ್ಯನಾಗಿದ್ದೆ. ಪಂಗಡಗಳನ್ನು 2ಎಗೆ ಸೇರಿಸಲು ಸರಿಯಾದ ದತ್ತಾಂಶ ಇರಲಿಲ್ಲ. ಹೀಗಾಗಿ 3ಬಿಗೆ ಸೇರಿಸಲಾಗಿತ್ತು. ಇದೊಂದು ಕಾನೂನಿನ ಅಂಶವಾಗಿರುವ ಕಾರಣ ಸಮಯ ಬೇಕಾಗುತ್ತದೆ. ಆದರೂ ನಮ್ಮ ಸರ್ಕಾರ ನ್ಯಾಯ ಒದಗಿಸಲು ಬದ್ಧವಾಗಿದೆ’ ಎಂದು ಹೇಳಿದರು.
‘ಪಂಚಮಸಾಲಿ ಸಮುದಾಯ ಕೃಷಿ ಅವಲಂಬಿತ ಸಮುದಾಯವಾಗಿದೆ. ವೀರಶೈವ ಲಿಂಗಾಯತ ಅಭಿವೃದ್ಧಿಗಾಗಿ ಪ್ರಾಧಿಕಾರ ಮಾಡಿದ್ದು ನಾನು ಮತ್ತು ಅಭಿವೃದ್ಧಿಗೆ 500 ಕೋಟಿ ರು ಮೀಸಲಿಟ್ಟಿದ್ದೆ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಅಭಿವೃದ್ಧಿಗೆ ಕೆಲಸ ಮಾಡಿದ್ದೇವೆ. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೂ ಆರ್ಥಿಕ ನೆರವು ಒದಗಿಸಲಾಗಿತ್ತು. ವಿವಿಧ ಕ್ಷೇತ್ರದಲ್ಲಿ ಹಿಂದುಳಿದಿರುವ ಈ ಸಮುದಾಯವನ್ನು 2ಎ ಸೇರ್ಪಡೆ ಮಾಡುವ ಸರ್ಕಾರದ ಪ್ರಯತ್ನಕ್ಕೆ ನನ್ನ ಸಹಮತ ಇದೆ. ಸಮುದಾಯದ ಸ್ವಾಮೀಜಿ ಪಾದಯಾತ್ರೆ ಮಾಡಿದ್ದು, ಅವರಿಗೆ ನ್ಯಾಯ ಕೊಡಿಸಬೇಕು ಎಂದು ಮನವಿ ಮಾಡುತ್ತೇವೆ’ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ