
ಮಂಗಳೂರು (ಸೆ.27): ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿ ಎಸ್ಐಟಿಗೆ ಅಕ್ರಮ ಶಸ್ತ್ರಾಸ್ತ್ರ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಶುಕ್ರವಾರ 3ನೇ ಹಾಗೂ ಕೊನೆಯ ನೋಟಿಸ್ನ್ನು ಜಾರಿ ಮಾಡಿ, ಅವರ ಮನೆಯ ಗೋಡೆಗೆ ಅಂಟಿಸಲಾಗಿದೆ. ಸೆ.29ಕ್ಕೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದ್ದು, ಅಂದೂ ವಿಚಾರಣೆಗೆ ಹಾಜರಾಗದಿದ್ದರೆ ತಿಮರೋಡಿಯನ್ನು ಬಂಧಿಸುವ ಸಾಧ್ಯತೆಯಿದೆ.
ಈ ಮಧ್ಯೆ, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ತಿಮರೋಡಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ. ನಿರೀಕ್ಷಣಾ ಜಾಮೀನು ಸಿಗದೆ ಇದ್ದರೆ ತಿಮರೋಡಿ ಬಂಧನ ಖಚಿತವಾಗಲಿದೆ. ಪ್ರಸ್ತುತ ತಿಮರೋಡಿ ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ತಲೆಮರೆಸಿಕೊಂಡಿದ್ದಾರೆ.
ಇದನ್ನೂ ಓದಿ: ಗಡೀಪಾರಾದ ತಿಮರೋಡಿ ರಾಯಚೂರಿಗೆ ಬೇಡ, ಕಾಡಿಗೆ ಕಳುಹಿಸಿ ಎಂದು ಪ್ರತಿಭಟನೆ
ಬಂಧನ ಭೀತಿ:
ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಆರೋಪದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರು ಮಂಗಳೂರು ಜಿಲ್ಲಾ ಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು ಇಂದು (ಸೆ.27ರಂದು) ಅರ್ಜಿಯ ವಿಚಾರಣೆ ನಡೆಯಲಿದೆ. ಈ ಸಂಬಂಧ ಕೋರ್ಟ್ ಸಹಾಯಕ ಅಭಿಯೋಜಕರಿಗೆ ಆಕ್ಷೇಪಣೆಗಳಿದ್ದರೆ ಸಲ್ಲಿಸಲು ನೋಟಿಸ್ ಜಾರಿಗೊಳಿಸಿದೆ.
ಇದನ್ನೂ ಓದಿ: 32 ಕ್ರಿಮಿನಲ್ ಪ್ರಕರಣ, ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು, ಆದೇಶದ ಬೆನ್ನಲ್ಲೇ ನಾಪತ್ತೆಕಅ
ಈ ಮಧ್ಯೆ, ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಆರೋಪದಲ್ಲಿ ಬಂಧನ ಭೀತಿಯಲ್ಲಿ ತಲೆಮರೆಸಿಕೊಂಡಿರುವ ತಿಮರೋಡಿ ಮನೆಗೆ ಮೂರನೇಯ ಮತ್ತು ಕೊನೆಯ ನೋಟಿಸ್ ಅಂಟಿಸಿದ್ದಾರೆ. ಅವರು ನಾಪತ್ತೆಯಾದ ಕಾರಣ ಈಗಾಗಲೇ ವಿಚಾರಣೆಗೆ ಆಗಮಿಸುವಂತೆ ಸೂಚಿಸಿ ಪೊಲೀಸರು ಅವರ ಮನೆಗೆ ಎರಡು ಬಾರಿ ನೋಟಿಸ್ ಅಂಟಿಸಿ ಬಂದಿದ್ದರು. ಸೆ.25ರಂದು ಹಾಜರಾಗುವಂತೆ ಎರಡನೇ ನೋಟಿಸ್ನ್ನು ಅಂಟಿಸಲಾಗಿದ್ದರೂ, ಗುರುವಾರ ಅವರು ವಿಚಾರಣೆಗೆ ಹಾಜರಾಗಿಲ್ಲ ಹೀಗಾಗಿ, ಪೊಲೀಸರು ಮತ್ತೆ ಮೂರನೇ ನೋಟಿಸ್ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ