ಸರಳ ಪ್ರಕ್ರಿಯೆಯಲ್ಲಿ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ

By Kannadaprabha NewsFirst Published Jun 7, 2023, 8:07 PM IST
Highlights

ಕಾಂಗ್ರೆಸ್‌ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಅತೀ ಶೀಘ್ರ ಜಾರಿಗೊಳಿಸಲಾಗುತ್ತದೆ. ಚುನಾವಣೆಗೂ ಮುನ್ನ ಬೆಲೆ ಏರಿಕೆಯಿಂದ ತತ್ತರಿಸಿದ ಜನರಿಗೆ ನೀಡಿದ ಭರವಸೆಗಳನ್ನು ಹಂತ ಹಂತವಾಗಿ ಈಡೇರಿಸುತ್ತಿದ್ದೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ: ಲಕ್ಷ್ಮೀ ಹೆಬ್ಬಾಳಕರ 

ಬೆಳಗಾವಿ(ಜೂ.07):  ಭರವಸೆ ನೀಡಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲಾಗುವುದು. ಯಾವುದೇ ಅಂತೆ ಕಂತೆಗಳಿಗೆ ಕಿವಿಗೊಡಬೇಡಿ. ಸರ್ಕಾರ ನಿಮ್ಮ ಜೊತೆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಬೆಳಗಾವಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕಾಂಗ್ರೆಸ್‌ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಅತೀ ಶೀಘ್ರ ಜಾರಿಗೊಳಿಸಲಾಗುತ್ತದೆ. ಚುನಾವಣೆಗೂ ಮುನ್ನ ಬೆಲೆ ಏರಿಕೆಯಿಂದ ತತ್ತರಿಸಿದ ಜನರಿಗೆ ನೀಡಿದ ಭರವಸೆಗಳನ್ನು ಹಂತ ಹಂತವಾಗಿ ಈಡೇರಿಸುತ್ತಿದ್ದೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಅವರು ಹೇಳಿದರು.

ಪ್ರತಾಪ್ ಸಿಂಹ ಅಣ್ಣ ಸರ್ವಜ್ಞರು, ಅವರ ಚಿಂತನೆಗಳಿಗೆ ಯಾರೂ ಸರಿಸಾಟಿ ಇಲ್ಲ: ಹೆಬ್ಬಾಳ್ಕರ್ ಟಾಂಗ್

ಬಿಜೆಪಿಯವರು ನಡೆಸುತ್ತಿರುವ ಪ್ರತಿಭಟನೆಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಅವರ ಅಧಿಕಾರ ಅವಧಿಯಲ್ಲಿ ರಾಜ್ಯದ ಜನರಿಗೆ ನೀಡಿದ ಭರವಸೆಗಳಲ್ಲಿ ಎಷ್ಟುಈಡೇರಿಸಿದ್ದಾರೆ ಎಂದು ಜನರಿಗೆ ಗೊತ್ತಿದೆ. ಅದಕ್ಕಾಗಿಯೇ ಜನರು ಅವರಿಗೆ ಪಾಠ ಕಲಿಸಿದ್ದಾರೆ ಎಂದು ಹೇಳಿದರು.

ಗೃಹ ಲಕ್ಷ್ಮೇ ಯೋಜನೆಯ ಅರ್ಜಿ ಕರೆಯಲು ಅಧಿಕಾರಿಗಳ ಜೊತೆಗೆ ಈಗಾಗಲೇ ಚರ್ಚೆ ನಡೆಸಿದ್ದೇವೆ. ಮನೆಯ ಯಜಮಾನಿಯನ್ನು ಕುಟುಂಬಸ್ಥರೇ ಗುರುತಿಸಲಿದ್ದಾರೆ. ಇದರಲ್ಲಿ ಯಾವುದೇ ಗೊಂದಲವಿಲ್ಲದೆ ಸರಳವಾಗಿ ಯೋಜನೆ ಜಾರಿಯಾಗಲಿದೆ ಎನ್ನುವ ವಿಶ್ವಾಸವಿದೆ. ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ವಿಚಾರವಾಗಿ ಮಾತನಾಡಿದ ಅವರು, ಜೂನ್‌ 15ರಿಂದ ಜುಲೈ 15ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. 3-4 ಇಲಾಖೆಗಳ ಜೊತೆ ನಾವು ಕೆಲಸ ಮಾಡಬೇಕಾಗುತ್ತದೆ. ಬರೀ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯಿಂದ ಆಗಲ್ಲ. ನಮ್ಮ ಇಲಾಖೆ ಸಿಬ್ಬಂದಿ ಜೊತೆ ಕಂದಾಯ ಇಲಾಖೆ, ಆರ್‌ಡಿಪಿಆರ್‌, ನಗರಾಭಿವೃದ್ಧಿ ಇಲಾಖೆ ಇರಬಹುದು. ಈ ಎಲ್ಲ ಇಲಾಖೆ ಒಳಗೊಂಡು ಗೃಹಲಕ್ಷ್ಮೇ ಯೋಜನೆ ಜಾರಿ ತರಬೇಕಾಗುತ್ತದೆ. ಅವರ ಬ್ಯಾಂಕ್‌ ಖಾತೆ ನಂಬರ್‌, ಆಧಾರ್‌ ಲಿಂಕ್‌ ಮಾಡುವುದಾಗಲಿ, ಕುಟುಂಬದ ಮುಖ್ಯಸ್ಥೆ ಆಯ್ಕೆ ಇದೆಲ್ಲ ನೋಡಿಕೊಂಡು ನಾವು ಹಾರ್ಡ್‌ ಕಾಪಿ ಫಾಮ್‌ರ್‍ ಅನ್ನು ಕೊಡುತ್ತೇವೆ. ಜೊತೆಗೆ ಸಾಫ್‌್ಟವೇರ್‌ ಡೆವಲಪ್‌ ಮಾಡುತ್ತಿದ್ದೇವೆ. ಫಲಾನುಭವಿಗಳು ತಮ್ಮ ಅರ್ಜಿ ಅಪ್‌ಲೋಡ್‌ ಮಾಡಬಹುದು. ಎಲ್ಲ ರೀತಿಯಾದ ಸರಳ ಪ್ರಕ್ರಿಯೆಯಲ್ಲಿ ಗೃಹಲಕ್ಷ್ಮಿ ಯೋಜನೆ ಅನುಷ್ಠಾನವಾಗುತ್ತದೆ ಎಂದು ಹೇಳಿದರು.

ಗೃಹಜ್ಯೋತಿ ಯೋಜನೆಯಿಂದ ಬಾಡಿಗೆದಾರರು ವಂಚಿತರಾಗುವ ಆತಂಕದ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವೆ, ಈಗಾಗಲೆ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಇಂಧನ ಸಚಿವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಹಾಗಾಗಿ ಯಾರೂ ಆತಂಕಪಡಬೇಕಾಗಿಲ್ಲ. ಅಂತೆ ಕಂತೆಗಳಿಗೆ ದಯಮಾಡಿ ಯಾರೂ ಕಿವಿಗೊಡಬೇಡಿ. ಸರ್ಕಾರ ನಿಮ್ಮ ಜೊತೆಗಿದೆ ಎಂದು ಭರವಸೆ ನೀಡಿದರು.

ಅತ್ತೆ, ಸೊಸೆ ಇಬ್ಬರಿಗೂ ಗೃಹಲಕ್ಷ್ಮಿ ಯೋಜನೆ ಕೊಡುವಂತೆ ಒತ್ತಾಯ!

ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ಕುರಿತು ಸರ್ಕಾರ ಚರ್ಚಿಸಿ ನಿರ್ಧಾರ ಕೈಗೊಳ್ಳಲಿದೆ. ಪ್ರಣಾಳಿಕೆಯಲ್ಲೂ ಈ ವಿಷಯ ಹಾಕಲಾಗಿತ್ತು. ಆ ಬಗ್ಗೆ ಸರಿಯಾದ ನಿರ್ಧಾರಕ್ಕೆ ಸರ್ಕಾರ ಬರಲಿದೆ. ಚುನಾವಣೆ ವೇಳೆ ಬೆಲೆ ಏರಿಕೆಯಿಂದ ತತ್ತರಿಸಿದ ಜನರಿಗೆ ಭರವಸೆಯ ಆಶಾಕಿರಣ ಮೂಡಿಸಿದ್ದು ಕಾಂಗ್ರೆಸ್‌ ಪಕ್ಷ. ಕೊಟ್ಟಭರವಸೆಯನ್ನು ಈಡೇರಿಸಲಾಗುವುದು. ಅಲ್ಲಿಯವರೆಗೆ ಸ್ವಲ್ಪ ತಾಳ್ಮೆ ಬೇಕು. ಯಾವುದೇ ಆತಂಕ ಬೇಡ ಎಂದು ತಿಳಿಸಿದರು.

ಬೆಳಗಾವಿ ಜಿಲ್ಲೆ ವಿಭಜನೆ ಬಗ್ಗೆ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲಾ ವಿಭಜನೆ ಆಗಬೇಕು. ಜಿಲ್ಲಾ ವಿಭಜನೆ ಕೂಗು ಮೊದಲಿನಿಂದಲೂ ಇದೆ. ನಮ್ಮ ಸರ್ಕಾರ ಅದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದ ಅವರು, ಗೋ ಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಮಹಿಳೆಯಾಗಿ ಹೇಳ್ತಿನಿ, ಗೋಹತ್ಯೆ ಅಷ್ಟೇ ಅಲ್ಲ, ಯಾವ ಪ್ರಾಣಿಯ ಹತ್ಯೆಯನ್ನು ನಾನು ಸಹಿಸಲ್ಲ ಎಂದರು.

click me!