
ಬೆಂಗಳೂರು (ಜು.1): ಇತ್ತೀಚೆಗಷ್ಟೆ ರಾಜ್ಯದ ಸರ್ಕಾರಿ ಶಾಲೆಗಳಿಗೆ 2,500 ಕಂಪ್ಯೂಟರ್ ಸೈನ್ಸ್ (ಗಣಕ ವಿಜ್ಞಾನ) ಶಿಕ್ಷಕರ ಹುದ್ದೆಗಳನ್ನು ಮಂಜೂರು ಮಾಡಿದ್ದ ಸರ್ಕಾರವು, ಈ ಹುದ್ದೆಗಳ ನೇಮಕಾತಿಗೆ ಅನುಕೂಲವಾಗುವಂತೆ ಶಿಕ್ಷಕರ ನೇಮಕಾತಿ ನಿಯಮಾವಳಿಗೆ ತಿದ್ದುಪಡಿ ಮಾಡಿ ಕರಡು ಅಧಿಸೂಚನೆ ಹೊರಡಿಸಿದೆ.
ಕಂಪ್ಯೂಟರ್ ಸೈನ್ಸ್ ಶಿಕ್ಷಕರನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ತಿದ್ದುಪಡಿ ನಿಯಮಗಳಲ್ಲಿ ಅವಕಾಶ ನೀಡಲಾಗಿದ್ದು, ನೇಮಕಗೊಂಡ 5 ವರ್ಷಗಳ ಒಳಗಾಗಿ ಎನ್ಸಿಟಿಇ ಮಾನ್ಯತೆ ಪಡೆದ ಸಂಸ್ಥೆಯಿಂದ ಬಿಎಡ್ ಪದವಿ ಪಡೆಯಬೇಕು ಮತ್ತು ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಎಂಬ ಷರತ್ತು ವಿಧಿಸಲಾಗಿದೆ.
ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ (ಕೆಪಿಎಸ್) 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ನೀಡಲು ಆದೇಶಿಸಿರುವ ಸರ್ಕಾರ, ಇದಕ್ಕೆ ಅಗತ್ಯ ಶೈಕ್ಷಣಿಕ ಅರ್ಹತೆ ಹೊಂದಿರುವ ಶಿಕ್ಷಕರು ಇಲಾಖೆಯಲ್ಲಿ ಇಲ್ಲದ ಕಾರಣ ಹೊಸ ನೇಮಕಾತಿಗೆ 2500 ಹುದ್ದೆಗಳನ್ನು ಮಂಜೂರು ಮಾಡಿದೆ. ಈ ಹುದ್ದೆಗಳಿಗೆ ಕಂಪ್ಯೂಟರ್ ಸೈನ್ಸ್ನಲ್ಲಿ ಬಿ.ಎಸ್ಸಿ, ಬಿಸಿಎ, ಬಿಐಟಿ, ಅಥವಾ ಕಂಪ್ಯೂಟರ್ ಸೈನ್ಸ್ನಲ್ಲಿ ಬಿ.ಇ ಅಥವಾ ಬಿ.ಟೆಕ್ ಪದವಿ ಹೊಂದಿರುವ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮಾಡಿಕೊಳ್ಳಬಹುದು. ಎಸ್ಎಸ್ಎಲ್ಸಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಮತ್ತು ಪಿಯುಸಿಯಲ್ಲಿ ಭಾಷೆಯನ್ನಾಗಿ ಕನ್ನಡವನ್ನು ಓದಿರಬೇಕು ಎಂದು ತಿಳಿಸಲಾಗಿದೆ.
ಆಕ್ಷೇಪಣೆಗೆ ಅವಕಾಶ:
ಈ ಕರಡು ನಿಯಮಗಳ ಕುರಿತು ಆಕ್ಷೇಪಣೆ ಅಥವಾ ಸಲಹೆಗಳಿದ್ದಲ್ಲಿ, ಈ ಅಧಿಸೂಚನೆ ರಾಜ್ಯಪತ್ರದಲ್ಲಿ ಪ್ರಕಟವಾದ 7 ದಿನಗಳ ಒಳಗಾಗಿ ಅಪರ ಮುಖ್ಯ ಕಾರ್ಯದರ್ಶಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, 6ನೇ ಮಹಡಿ, ಬಹುಮಹಡಿಗಳ ಕಟ್ಟಡ, ಬೆಂಗಳೂರು ಇವರಿಗೆ ಸಲ್ಲಿಸಬಹುದೆಂದು ತಿಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ