
ಬೆಂಗಳೂರು(ಜ.29): ಜಾತಿ ದೌರ್ಜನ್ಯ (ಅಟ್ರಾಸಿಟಿ) ಪ್ರಕರಣಗಳ ಶಿಕ್ಷೆಯ ಪ್ರಮಾಣ ಶೇ.10ಕ್ಕಿಂತ ಹೆಚ್ಚಾಗುವಂತೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಅಟ್ರಾಸಿಟಿ ಪ್ರಕರಣಗಳ ಕುರಿತು ಜಿಲ್ಲಾಧಿಕಾರಿಗಳು ಪ್ರತಿ 3 ತಿಂಗಳಿಗೊಮ್ಮೆ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಬೇಕು ಹಾಗೂ ದೌರ್ಜನ್ಯ ಎಸಗಿದವರಿಗೆ ಶಿಕ್ಷೆಯಾಗುವಂತೆ ಮಾಡುವಲ್ಲಿ ವಿಫಲ ರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಮಂಗಳವಾರ ಸಿದ್ದರಾಮಯ್ಯ ಅವರು ತಮ್ಮ ಅಧ್ಯಕ್ಷತೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಸಭೆ ನಡೆಸಿದರು.
ಸಭೆಯಲ್ಲಿ ಪ್ರಮುಖವಾಗಿ ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಜಾಮೀನು ಸಿಗುತ್ತಿದೆ. ಅಂತಹ ಪ್ರಕರಣಗಳಲ್ಲಿ ಮೇಲ್ಮನವಿಗೆ ಹೋಗಿ ಜಾಮೀನು ರದ್ದುಪಡಿಸಿ ಆರೋಪಿಗೆ ಶಿಕ್ಷೆ ಕೊಡಿಸಿದ ಪ್ರಕರಣಗಳು ಎಷ್ಟಿವೆ ಎಂದು ಪ್ರಶ್ನಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಹಾಗೆಯೇ, ಜಾತಿ ದೌರ್ಜನ್ಯ ದೂರು ಬಂದಾಗ ಪೊಲೀಸರೇ ದೌರ್ಜನ್ಯ ಎಸಗಿದವರಿಂದ ಪ್ರತಿದೂರು ಪಡೆದು ಪ್ರಕರಣ ದುರ್ಬಲಗೊಳಿಸುತ್ತಿರುವ ದೂರುಗಳಿವೆ. ಅದು ಹೀಗೆ ಮುಂದುವರಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬಿಜೆಪಿ ಶಾಸಕ ಮುನಿರತ್ನಗೆ ಅಟ್ರಾಸಿಟಿ ಕೇಸಿನಲ್ಲಿ ಜಾಮೀನು ಮಂಜೂರು!
ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆ ಪ್ರಮಾಣ 2020ರಲ್ಲಿ ಶೇ.10ರಷ್ಟಿತ್ತು. ಅದೇ ಈಗ ಅದು ಶೇ.7ಕ್ಕಿಳಿದಿದೆ. ಹೀಗಾಗಿ ಶಿಕ್ಷೆಯ ಪ್ರಮಾಣ ಶೇ.10 ಕ್ಕಿಂತ ಹೆಚ್ಚಾಗುವಂತೆ ಮಾಡಲು ಸೂಕ್ತ ಕ್ರಮ ಕೈಗೊ ಳಬೇಕು. ಈ ಕುರಿತು ಸರ್ಕಾರಿ ಅಭಿಯೋಜಕರು ಮತ್ತು ಪೊಲೀಸ್ ಅಧಿಕಾರಿಗಳು ನಿಯಮಿತವಾಗಿ ಪರಿಶೀಲನಾ ಸಭೆ ನಡೆಸಬೇಕು. ಅದೇರೀತಿ ಅಟ್ರಾಸಿಟಿ ಪ್ರಕರಣಗಳ ಶಿಕ್ಷೆ ಪ್ರಮಾಣ ಹೆಚ್ಚಾಗುವಂತೆ ಮಾಡಲು ಜಿಲ್ಲಾಧಿಕಾರಿಗಳು ಪ್ರತಿ 3 ತಿಂಗಳಿಗೊಮ್ಮೆ ಪ್ರಗತಿ ಪರಿಶೀಲನಾ ಸಭೆ ನಡೆಸಬೇಕು. ಪ್ರಕರಣದ ಕುರಿತು ವಿಳಂಬ ಧೋರಣೆ ತೋರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.
ತನಿಖೆ ತಡವಾದ್ರೆ ಸಾಕ್ಷಿ ನಾಶ ಸಾಧ್ಯತೆ: ಸಿಎಂ
ಪರಿಶಿಷ್ಟರ ಕೊಲೆ ಮತ್ತು ಅತ್ಯಾಚಾರ ಪ್ರಕರಣಗಳ ತನಿಖೆಯನ್ನು ವಿಳಂಬ ಮಾಡಬಾರದು. ತನಿಖೆ ತಡವಾದರೆ, ನ್ಯಾಯಾಲಯಗಳಲ್ಲಿ ವಿಚಾರಣೆಗೆ ತಡೆ ನೀಡಿದರೆ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿ ನಾಶವಾಗುವ ಸಾಧ್ಯತೆಗಳಿವೆ. ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಾಗಲೇಬೇಕು. ಅದಕ್ಕಾಗಿ ಆರೋಪ ಪಟ್ಟಿ ಶೀಘ್ರವಾಗಿ ಸಲ್ಲಿಸಿ ಸಾಕ್ಷ್ಯಗೆ ಳನ್ನು ಪರಿಣಾಮಕಾರಿಯಾಗಿ ನ್ಯಾಯಾಲ ಯದ ಮುಂದೆ ಹಾಜರುಪಡಿಸಬೇಕು ಎಂದು ಮುಖ್ಯಮಂತ್ರಿಗಳು ನಿರ್ದೇಶಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ