ಕನ್ನಡಿಗರಿಗೆ ನ್ಯೂ ಇಂಡಿಯಾ ಅಶ್ಯೂರನ್ಸ್‌ನಿಂದ ಅನ್ಯಾಯ

Published : Nov 24, 2018, 08:19 AM IST
ಕನ್ನಡಿಗರಿಗೆ ನ್ಯೂ ಇಂಡಿಯಾ ಅಶ್ಯೂರನ್ಸ್‌ನಿಂದ ಅನ್ಯಾಯ

ಸಾರಾಂಶ

ಕೇಂದ್ರ ಸರಕಾರ ಸ್ವಾಮ್ಯದ ನ್ಯೂ ಇಂಡಿಯಾ ಅಶ್ಯೂರೆನ್ಸ್‌ ಕಂಪನಿಯು ರಾಜ್ಯದ ವಿವಿಧ ಕಚೇರಿಗಳಲ್ಲಿ ಖಾಲಿ ಇರುವ 42 ‘ಸಿ’ ವೃಂದದ ಹುದ್ದೆಗಳ ನೇಮಕಾತಿ ವೇಳೆಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡದೆ ಅನ್ಯಾಯ ಮಾಡಲಾಗುತ್ತಿದೆ. 

ಬೆಂಗಳೂರು[ನ.24]: ಕೇಂದ್ರ ಸರಕಾರ ಸ್ವಾಮ್ಯದ ನ್ಯೂ ಇಂಡಿಯಾ ಅಶ್ಯೂರೆನ್ಸ್‌ ಕಂಪನಿಯು ರಾಜ್ಯದ ವಿವಿಧ ಕಚೇರಿಗಳಲ್ಲಿ ಖಾಲಿ ಇರುವ 42 ‘ಸಿ’ ವೃಂದದ ಹುದ್ದೆಗಳ ನೇಮಕಾತಿ ವೇಳೆಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡದೆ ಅನ್ಯಾಯ ಮಾಡಲಾಗುತ್ತಿದೆ. ಈ ಬಗ್ಗೆ ಕೂಡಲೇ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಕೇಂದ್ರ ಸರಕಾರದಿಂದ ಕನ್ನಡಿಗರಿಗೆ ನ್ಯಾಯ ಒದಗಿಸುವಂತೆ ಮಾಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್‌.ಜಿ. ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನ್ಯೂ ಇಂಡಿಯಾ ಇನ್ಶೂರೆನ್ಸ್‌ ಕಂಪನಿಯು ನೇಮಕಾತಿ ವೇಳೆ ಕನ್ನಡ ಭಾಷೆ ತಿಳಿದವರಿಗೆ ಆದ್ಯತೆ ನೀಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಸಂಸ್ಥೆಯ ಪ್ರಾಂತೀಯ ಮುಖ್ಯಸ್ಥ ಚಿರಂಜೀವಿ ರೆಡ್ಡಿ ಅವರಿಗೆ ಮನವಿ ಮಾಡಿತ್ತು. ಇದರಂತೆ ನೇಮಕಾತಿ ವೇಳೆ ಭಾಷೆಯ ಕುರಿತು ಸಂದರ್ಶನ ನಡೆಸುವ ತಜ್ಞರ ಸಮಿತಿಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪ್ರತಿನಿಧಿಗೆ ಅವಕಾಶ ನೀಡಬೇಕು ಎಂದು ಹೇಳಿತ್ತು. ಆದರೆ, ಪ್ರಸ್ತುತ ಐಎಎಸ್‌ ಅಧಿಕಾರಿಗಳೇ ಸಂದರ್ಶನಕ್ಕೆ ಮುಂದಾಗಿದ್ದು, ಬೇರೆ ರಾಜ್ಯಗಳ ಅಭ್ಯರ್ಥಿಗಳಿಗೆ ಆದ್ಯತೆ ನೀಡುವ ಸಾಧ್ಯತೆ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನ.24 ರಂದು ಶನಿವಾರ ಅರ್ಹ ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು, ಬರೆಯಲು, ಓದಲು ಬರುವುದನ್ನು ಖಾತ್ರಿ ಪಡಿಸಿಕೊಳ್ಳಲು ಬ್ಯಾಂಕ್‌ನ ಅಧಿಕಾರಿಗಳನ್ನೊಳಗೊಂಡ ಆಂತರಿಕ ಸಮಿತಿ ಸಂದರ್ಶನ ನಡೆಸಲಿದೆ. ಆದರೆ ಸಮಿತಿಯಲ್ಲಿ ಕರ್ನಾಟಕದ ಅಧಿಕಾರಿಗಳು ಇರುವ ಬಗ್ಗೆ ಖಾತ್ರಿಯೇ ಇಲ್ಲ. ಪಾರದರ್ಶಕವಾಗಿ ನೇಮಕಾತಿ ಮಾಡದೆ ಕನ್ನಡಿಗರಿಗೆ ಅನ್ಯಾಯ ಮಾಡಲಾಗುತ್ತಿದೆ. ಬ್ಯಾಂಕಿಂಗ್‌ ಕ್ಷೇತ್ರದ ನೇಮಕಾತಿಯಲ್ಲಿ ಸ್ಥಳೀಯರಿಗೆ ಒದಗಿಸಿದ್ದ ಪ್ರಾತಿನಿಧ್ಯತೆಯನ್ನು 2016ರಲ್ಲಿ ಕೇಂದ್ರ ಸರಕಾರವು ಐಬಿಪಿಎಸ್‌ ತಿದ್ದುಪಡಿ ಮೂಲಕ ರದ್ದುಗೊಳಿಸಿತ್ತು. ಇದೀಗ ಐಬಿಪಿಎಸ್‌ ನೆಪ ಇಟ್ಟುಕೊಂಡು ನ್ಯೂ ಇಂಡಿಯಾ ಇನ್ಶೂರೆನ್ಸ್‌ ಕಂಪೆನಿಯು ಕನ್ನಡಿಗರಿಗೆ ಮೋಸ ಮಾಡುತ್ತಿದೆ. ಈ ಬಗ್ಗೆ ಎಲ್ಲಾ ಸಂಸದರಿಗೆ ಪತ್ರ ಬರೆದಿದ್ದರೂ ಯಾರೂ ಸ್ಪಂದಿಸಿಲ್ಲ. ಇದೀಗ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದೇನೆ. ಅವರು ಕೂಡಲೇ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಜನರಿಗೆ ಅರಿವು ಮೂಡಿಸಲು ಮಾಧ್ಯಮಗಳ ಮುಂದೆ ಬಂದಿದ್ದೇನೆ ಎಂದು ಎಸ್‌.ಜಿ. ಸಿದ್ದರಾಮಯ್ಯ ಅಸಹಾಯಕತೆ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

'ನಮ್ಮ ವಯಸ್ಸು ಮೀರುತ್ತಿದೆ, ಬೇಗ ಜಾಬ್ ಕರೆಯಲು ಹೇಳಿ ಸರ್' ಪೊಲೀಸ್ ಕಮಿಷನರ್ ಎದುರು ಗಳಗಳನೇ ಅತ್ತ ಕೊಪ್ಪಳ ಯುವತಿ
ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ