
ಬೆಂಗಳೂರು (ಮೇ.3): ಈಗಾಗಲೇ ಎಲ್ಲಾ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನತೆ ತತ್ತರಿಸಿ ಹೋಗಿದ್ದಾರೆ. ಇಂಥ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಜನರ ಮೇಲೆ ದರ ಏರಿಕೆಯ ಭಾರ ಹಾಕುವುದು ಸರಿಯಲ್ಲ ಎಂದು ಗೃಹ ಸಚಿವ ಡಾ। ಜಿ.ಪರಮೇಶ್ವರ್ ಕಿಡಿಕಾರಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಧಾನಮಂತ್ರಿ, ಹಣಕಾಸು ಸಚಿವರು ಸೇರಿ ಬಿಜೆಪಿಯ ಅನೇಕ ನಾಯಕರು ದೇಶದ ಆರ್ಥಿಕ ಪರಿಸ್ಥಿತಿ ಬಲವಾಗಿದೆ ಎಂದು ಹೇಳುತ್ತಿದ್ದಾರೆ. ಈಗ ದರ ಹೆಚ್ಚಿಸುವ ಅಗತ್ಯವೇನು? ಎಲ್ಲ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರ ಜೀವನ ಕಷ್ಟವಾಗುತ್ತಿದೆ. ಇಂಥ ಸಂದರ್ಭದಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಹೆಚ್ಚು ಮಾಡುವ ಅವಶ್ಯಕತೆ ಇರಲಿಲ್ಲ ಎಂದರು. ಇರಾನ್ ಯುದ್ಧವನ್ನೇ ನೆಪವಾಗಿಟ್ಟುಕೊಂಡು ಬೆಲೆ ಹೆಚ್ಚಳ ಮಾಡಬಾರದಾಗಿತ್ತು. ದೇಶದ ಆರ್ಥಿಕತೆ ಉತ್ತಮವಾಗಿದೆ ಎಂದು ಅವರು ಹೇಳಿದರು.
ಹಣದುಬ್ಬರ ನಿಯಂತ್ರಿಸಲು, ಸಂಕಷ್ಟ ನಿಭಾಯಿಸುವ ಶಕ್ತಿ ಕೇಂದ್ರಕ್ಕೆ ಇದೆ. ಆರ್ಥಿಕ ಸ್ಥಿತಿ ಸುಭದ್ರವಾಗಿದೆ ಎಂದು ಪ್ರಧಾನ ಮಂತ್ರಿಗಳೂ ಹೇಳುತ್ತಾರೆ, ಕೇಂದ್ರ ಹಣಕಾಸು ಸಚಿವರು ಕೂಡ ಹೇಳುತ್ತಾರೆ. ಹೀಗಿರುವಾಗ ಆರ್ಥಿಕ ಸ್ಥಿತಿ ಸುಭದ್ರವಾಗಿರುವುದನ್ನು ಇಂತಹ ಸಂದರ್ಭದಲ್ಲಿ ತೋರಿಸಬೇಕು ಎಂದು ಹೇಳಿದರು.
ತೈಲದ ಬ್ಯಾರಲ್ ದರ ಹೆಚ್ಚಳವಾಗಿದ್ದರೆ ಅದನ್ನು ತಡೆದುಕೊಳ್ಳುವ ಶಕ್ತಿ ತೋರಿಸಬೇಕು, ಅದನ್ನು ಬಿಟ್ಟು ಜನ ಸಮುದಾಯಕ್ಕೆ ಹೊರೆಯಾಗುವ ರೀತಿ ಅಗತ್ಯವಸ್ತುಗಳ ಬೆಲೆ ಹೆಚ್ಚಳ ಮಾಡುವುದು ಸರಿಯಲ್ಲ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಹೆಚ್ಚಳವಾದಾಗ ದರ ಏರಿಕೆ ಮಾಡುವುದು ಅನಿವಾರ್ಯ ಎಂದು ಹೇಳುತ್ತಿದ್ದ ಸಂದರ್ಭದಲ್ಲಿ ಬಿಜೆಪಿಯವರು ಟೀಕೆ ಮಾಡುತ್ತಿದ್ದರು. ಈಗ ಅವರೇನು ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ