
ಬೆಂಗಳೂರು (ಡಿ.09): ಕಾಂಗ್ರೆಸ್ ಪಕ್ಷದೊಳಗೆ 'ಅಹಿಂದ' (ಅಲ್ಪಸಂಖ್ಯಾತ, ಹಿಂದುಳಿದ ವರ್ಗ ಮತ್ತು ದಲಿತ) ನಾಯಕತ್ವದ ಕುರಿತು ಹೊಸ ಚರ್ಚೆಯೊಂದು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರ ಮತ್ತು ವಿರೋಧ ಹೇಳಿಕೆಗಳು ಮುನ್ನೆಲೆಗೆ ಬಂದಿವೆ. ಪ್ರಸ್ತುತ ಸಿದ್ದರಾಮಯ್ಯನವರೇ ಅಹಿಂದ ಸಮುದಾಯದ ನಿರ್ವಿವಾದ ನಾಯಕರಾಗಿರುವಾಗ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರನ್ನು ಮುಂದಿನ ನಾಯಕ ಎಂದು ಬಿ.ಕೆ. ಹರಿಪ್ರಸಾದ್ ಅವರು ಬೆಂಬಲಿಸಿ ನೀಡಿದ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.
ಬಿ.ಕೆ. ಹರಿಪ್ರಸಾದ್ ಅವರ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಸಚಿವ ಹಾಗೂ ಸಿದ್ದರಾಮಯ್ಯ ಆಪ್ತ ಬಳಗದ ಪ್ರಮುಖ ನಾಯಕರಾದ ಬೈರತಿ ಸುರೇಶ್ ಅವರು, 'ಈಗ ನಮ್ಮ ನಾಯಕರಾಗಿ ಸಿದ್ದರಾಮಯ್ಯ ಇದ್ದಾರೆ. ಸಿದ್ದರಾಮಯ್ಯ ಕಿಂಗ್. ಕಿಂಗ್ ಇಸ್ ಎ ಲೈವ್ (ರಾಜ ಜೀವಂತವಾಗಿದ್ದಾರೆ). ಹೀಗಿರುವಾಗ ಬೇರೆ ನಾಯಕತ್ವದ ಬಗ್ಗೆ ಚರ್ಚೆ ಅನಗತ್ಯ' ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 'ಬಿ.ಕೆ. ಹರಿಪ್ರಸಾದ್ ಯಾವ ಅರ್ಥದಲ್ಲಿ ಈ ಹೇಳಿಕೆ ನೀಡಿದ್ದಾರೆ ಎಂಬುದು ಗೊತ್ತಿಲ್ಲ. ನಮ್ಮ ನಾಯಕನಾಗಿ ಯಾರು ಇರಬೇಕು, ಮುಂದಿನ ನಾಯಕರಾಗಿ ಯಾರು ಬರಬೇಕು ಎಂಬುದನ್ನು ಸ್ವತಃ ಸಿದ್ದರಾಮಯ್ಯನವರೇ ಸ್ಪಷ್ಟಪಡಿಸಬೇಕು' ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ಗೆ ನೀಡಿದ ಹೇಳಿಕೆಯಲ್ಲಿ ಒತ್ತಿ ಹೇಳಿದರು.
ಮುಂದಿನ ಚುನಾವಣೆಯಲ್ಲಿ ತಮ್ಮ ತಂದೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗುತ್ತಾರೆ ಎಂಬ ಯತೀಂದ್ರ ಸಿದ್ದರಾಮಯ್ಯನವರ ಹೇಳಿಕೆ ಕುರಿತೂ ಪ್ರತಿಕ್ರಿಯಿಸಿದ ಬೈರತಿ ಸುರೇಶ್, 'ಅದು ಯತೀಂದ್ರ ಅವರ ವೈಯಕ್ತಿಕ ಅಭಿಪ್ರಾಯ. ಒಬ್ಬ ಮಗನಾಗಿ ಅಂತಹ ಭಾವನೆಯಿಂದ ಮಾತನಾಡುವುದು ಸಹಜ. ಆದರೆ, ನಾಯಕತ್ವದ ಅಂತಿಮ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯನವರ ನಾಯಕತ್ವಕ್ಕೆ ಸವಾಲು ಒಡ್ಡುವುದು ಅಥವಾ ಹೊಸ ನಾಯಕತ್ವದ ಕುರಿತು ಅನಗತ್ಯ ಚರ್ಚೆ ನಡೆಸುವುದು ಪಕ್ಷಕ್ಕೆ ಒಳ್ಳೆಯದಲ್ಲ ಎಂಬ ಸಂದೇಶವನ್ನು ಬೈರತಿ ಸುರೇಶ್ ರವಾನಿಸಿದರು.
ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿ 'ಅಹಿಂದ' ಸಿದ್ಧಾಂತವನ್ನು ಬಲವಾಗಿ ಪ್ರತಿಪಾದಿಸಿದ್ದರು. ಈ ವರ್ಗಗಳ ಸಮುದಾಯವನ್ನು ಒಂದೇ ವೇದಿಕೆಯಡಿ ತರುವಲ್ಲಿ ಯಶಸ್ವಿಯಾಗಿದ್ದು, ಕಾಂಗ್ರೆಸ್ನ ಶಕ್ತಿ ಹೆಚ್ಚಲು ಕಾರಣವಾಗಿತ್ತು. ಆದರೆ, ಈಗಿನ ಸನ್ನಿವೇಶದಲ್ಲಿ ಈ ನಾಯಕತ್ವದ ಕುರಿತು ಗೊಂದಲಕಾರಿ ಹೇಳಿಕೆಗಳು ಬರುತ್ತಿರುವುದು, ಆಂತರಿಕ ಭಿನ್ನಾಭಿಪ್ರಾಯಗಳನ್ನು ಮತ್ತಷ್ಟು ತೀವ್ರಗೊಳಿಸುವ ಸಾಧ್ಯತೆ ಇದೆ. ಜಾರಕಿಹೊಳಿ ಅವರನ್ನು ಅಹಿಂದ ನಾಯಕತ್ವಕ್ಕೆ ಸೂಕ್ತ ಎಂದು ಪ್ರತಿಪಾದಿಸುವ ಮೂಲಕ, ಬಿ.ಕೆ. ಹರಿಪ್ರಸಾದ್ ಅವರು ಪರ್ಯಾಯ ನಾಯಕತ್ವದ ಚರ್ಚೆಗೆ ಬಾಗಿಲು ತೆರೆದಿದ್ದಾರೆ.
ಸಮಸ್ಯೆ ಬಗೆಹರಿಯಬೇಕಾದರೆ, ಈ ಗೊಂದಲಗಳಿಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಸ್ಪಷ್ಟ ಉತ್ತರ ನೀಡಬೇಕೆಂದು ಬೈರತಿ ಸುರೇಶ್ ಆಗ್ರಹಿಸಿದ್ದಾರೆ. ಒಟ್ಟಿನಲ್ಲಿ, 'ಅಹಿಂದ ಕಿಂಗ್' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಕೇಳಿ ಬಂದಿರುವುದು ಕಾಂಗ್ರೆಸ್ ಪಕ್ಷದಲ್ಲಿ ಹೊಸ ರಾಜಕೀಯ ಬೆಳವಣಿಗೆಗಳಿಗೆ ನಾಂದಿ ಹಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ