
ಬೆಂಗಳೂರು (ಆ.15): ಇಂಧನ ಬೆಲೆ ಹೆಚ್ಚಳದಿಂದ ನಾಲ್ಕು ನಿಗಮಗಳಿಗೆ ಭಾರೀ ನಷ್ಟವಾಗುತ್ತಿದೆ. ಆದ್ದರಿಂದ ಬಸ್ ಪ್ರಯಾಣ ದರ ಹೆಚ್ಚಳ ಅನಿವಾರ್ಯ. ಹೀಗಾಗಿ ಜನರಿಗೆ ಹೊರೆ ಆಗದಂತೆ ಬಸ್ ಪ್ರಯಾಣ ದರ ಹೆಚ್ಚಳ ಮಾಡಲಾಗುವುದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದರು.
ಕೆಎಸ್ಸಾರ್ಟಿಸಿ(KSRTC) ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಬಸ್ ಪ್ರಯಾಣ ದರ ಹೆಚ್ಚಳ ಮಾಡಿದ ನಂತರ 9ಕ್ಕೂ ಹೆಚ್ಚಿನ ಬಾರಿ ತೈಲೋತ್ಪನ್ನಗಳ ಬೆಲೆ ಹೆಚ್ಚಳ ಆಗಿದ್ದರೂ ಬಸ್ ಪ್ರಯಾಣ ದರ ಹೆಚ್ಚಳ ಮಾಡಿಲ್ಲ. ಇದರಿಂದ ನಿಗಮಗಳಿಗೆ ಭಾರೀ ಪ್ರಮಾಣದಲ್ಲಿ ನಷ್ಟ ಉಂಟಾಗುತ್ತಿದೆ ಎಂದರು.
ಬಸ್ ಪ್ರಯಾಣ ದರ ಹೆಚ್ಚಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲು ನಿವೃತ್ತ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದಲ್ಲಿ ರಚಿಸಲಿರುವ ಸಮಿತಿ ದರ ಹೆಚ್ಚಳದ ಸಾಧಕ-ಬಾಧಕ, ಹಾಗೂ ನಿಗಮಗಳ ಆರ್ಥಿಕ ಪರಿಸ್ಥಿತಿ ಪರಿಶೀಲಿಸಿ ವರದಿ ನೀಡಲಿದೆ ಎಂದು ಹೇಳಿದರು.
ವರದಿಯನ್ನು ಮುಖ್ಯಮಂತ್ರಿ ಅವರು ಮತ್ತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಜನರಿಗೆ ಹೊರೆಯಾಗದಂತೆ ಪ್ರಯಾಣ ದರ ಹೆಚ್ಚಳ ಮಾಡಲಾಗುತ್ತದೆ ಎಂದು ವಿವರಿಸಿದರು.
ಎಲೆಕ್ಟ್ರಿಕ್ ಬಸ್ಗಳನ್ನು ಯಾವುದೇ ಕಾರಣಕ್ಕೂ ರದ್ದು ಮಾಡುವುದಿಲ್ಲ. ಪೂರ್ವ ನಿಗದಿಯಂತೆ ಕೇಂದ್ರ ಸರ್ಕಾರದಿಂದ 4500 ಇವಿ ಬಸ್ಗಳನ್ನು ಪಡೆಯಲಾಗುತ್ತದೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲೂ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ