
ಬೆಂಗಳೂರು (ಏ.16) ಸಾರ್ವಜನಿಕ, ಖಾಸಗಿ, ಡೀಮ್ಡ್ ಸೇರಿದಂತೆ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಪರಿಶಿಷ್ಟರು, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ ಶಿಕ್ಷಣ ಮತ್ತು ಘನತೆಯ ಹಕ್ಕು ರಕ್ಷಣೆಗಾಗಿ ಜಾರಿಗೊಳಿಸಲು ಉದ್ದೇಶಿಸಲಾಗಿರುವ ಕರ್ನಾಟಕ ರೋಹಿತ್ ವೇಮುಲಾ (ಬಹಿಷ್ಕಾರ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ವಿಧೇಯಕ ಅನುಷ್ಠಾನ ಸಂಬಂಧ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆಯಿದೆ.
ಕರ್ನಾಟಕ ರೋಹಿತ್ ವೇಮುಲಾ (ಬಹಿಷ್ಕಾರ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ವಿಧೇಯಕ ಅನುಷ್ಠಾನ ಕುರಿತಂತೆ ಈ ಹಿಂದೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೂ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದರು. ಅದರಂತೆ ಈ ಹಿಂದೆಯೂ ಸಚಿವ ಸಂಪುಟ ಸಭೆಯಲ್ಲಿ ವಿಧೇಯಕ ಚರ್ಚೆಗೆ ಬಂದಿತ್ತಾದರೂ ಯಾವುದೇ ನಿರ್ಧಾರ ತೆಗೆದುಕೊಂಡಿರಲಿಲ್ಲ. ಬದಲಿಗೆ ಕಾನೂನು ಮತ್ತು ಗೃಹ ಇಲಾಖೆ ಅಭಿಪ್ರಾಯ ನೀಡಲು ಸಂಪುಟ ಸಭೆಯಲ್ಲಿ ಸೂಚಿಸಿ, ವಿಧೇಯಕದ ಬಗೆಗಿನ ನಿರ್ಧಾರವನ್ನು ಮುಂದೂಡಲಾಗಿತ್ತು. ಇದೀಗ ಕಾನೂನು ಮತ್ತು ಗೃಹ ಇಲಾಖೆ ಅಭಿಪ್ರಾಯ ನೀಡಿದ್ದು, ವಿಧೇಯಕದ ಕುರಿತಂತೆ ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುತ್ತಿದೆ.
ಯಾವುದೇ ವಿದ್ಯಾರ್ಥಿ ಜಾತಿ, ವರ್ಗ ಅಥವಾ ಧರ್ಮದ ಆಧಾರದ ಮೇಲೆ ತಾರತಮ್ಯಕ್ಕೆ ಒಳಗಾಗದಂತೆ ರಕ್ಷಣೆ ನೀಡುವುದು ವಿಧೇಯಕದ ಆಶಯವಾಗಿದೆ. ವಿಧೇಯಕದಲ್ಲಿನ ಅಂಶಗಳ ಉಲ್ಲಂಘನೆಯು ಜಾಮೀನುರಹಿತ ಅಪರಾಧವಾಗಲಿದ್ದು, ತಪ್ಪಿತಸ್ಥರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ ಜತೆಗೆ ಸಂಬಂಧಪಟ್ಟ ಸಂಸ್ಥೆಗೆ ಸರ್ಕಾರದಿಂದ ಹಣಕಾಸು ನೆರವು ಮತ್ತು ಅನುದಾನ ನಿಲ್ಲಿಸುವ ಅಂಶಗಳು ಈ ಹಿಂದೆ ವಿಧೇಯಕದಲ್ಲಿ ಸೇರಿಸಲಾಗಿತ್ತು. ಇದೀಗ ಹೊಸದಾಗಿ ಚರ್ಚೆಗೆ ಬರುತ್ತಿರುವ ವಿಧೇಯಕದಲ್ಲಿಯೂ ಆ ರೀತಿಯ ಅಂಶಗಳನ್ನು ಸೇರಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ