
ಬೆಳಗಾವಿ (ಏ.15) : ರಾಜ್ಯ ಸಚಿವ ಸಂಪುಟದಲ್ಲಿ ಮಂಡನೆಯಾದ ಜಾತಿ ಗಣತಿ ವರದಿಯಲ್ಲಿನ ಜಾತಿವಾರು ಅಂಕಿ ಅಂಶದ ಬಗ್ಗೆ ವಿಪಕ್ಷ ಬಿಜೆಪಿ-ಜೆಡಿಎಸ್ನಿಂದ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಇದೇ ಮೊದಲ ಬಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೊಸದಾಗಿ ಜಾತಿ ಗಣತಿ ನಡೆಸಬೇಕೆಂದು ಹೇಳುವ ಮೂಲಕ ಜಾತಿ ಗಣತಿ ವರದಿಗೆ ತಕರಾರು ಮಂಡಿಸಿದ ಮೊದಲ ಸಚಿವರಾಗಿದ್ದಾರೆ.
ಜನಗಣತಿಯಲ್ಲಿನ ಜಾತಿವಾರು ಅಂಕಿ-ಅಂಶದ ಬಗ್ಗೆ ಹಲವು ಸಚಿವರಲ್ಲಿ ಆಕ್ಷೇಪವಿದ್ದರೂ ಯಾರೂ ಬಹಿರಂಗವಾಗಿ ಹೇಳಿಕೆ ನೀಡದೆ ಗುರುವಾರ ನಡೆಯುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸುತ್ತೇವೆ ಎಂದಷ್ಟೇ ಹೇಳಿದ್ದರು. ಆದರೆ ಸಚಿವೆ ಲಕ್ಷ್ಮೀ ಇದಕ್ಕಿಂತ ಭಿನ್ನ ಹೇಳಿಕೆ ನೀಡಿದ್ದಾರೆ,
ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಲಕ್ಷ್ಮೀ ಅವರು, ‘ಜಾತಿ ಗಣತಿಗೆ ನಮ್ಮ ವಿರೋಧ ಯಾವತ್ತೂ ಇಲ್ಲ. ಆದರೆ ಈ ಜಾತಿ ಗಣತಿಯಲ್ಲಿ ವೀರಶೈವ- ಲಿಂಗಾಯತರನ್ನು ಪ್ರತ್ಯೇಕ ಮಾಡಿ ಗಣತಿ ಮಾಡಲಾಗಿದೆ. ಹಾಗಾಗಿ ಜಾತಿ ಗಣತಿಯನ್ನು ಇನ್ನೊಮ್ಮೆ ವೀರಶೈವ-ಲಿಂಗಾಯತರನ್ನು ಒಟ್ಟಾಗಿ ಪರಿಗಣಿಸಿ ಮಾಡಬೇಕು’ ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಇದನ್ನೂ ಓದಿ: ಈಗಾಗಲೇ ಜಾತಿ ಗಣತಿ ವರದಿಗೆ ಒಕ್ಕಲಿಗ ಸಮುದಾಯ ಅಪಸ್ವರ
‘ಜಾತಿ ಗಣತಿ ವರದಿಯಲ್ಲಿ ಬೇರೆ ಎಲ್ಲಾ ಜಾತಿಯ ಜನರು ಹೆಚ್ಚಾಗಿ ಕಾಣುತ್ತಿದ್ದಾರೆ. ಆದರೆ ವೀರಶೈವ- ಲಿಂಗಾಯತ ಪ್ರತ್ಯೇಕವಾಗಿ ಪರಿಗಣಿಸಿದ್ದರಿಂದ ಒಡೆದು ಹೋಗಿದ್ದು, ಅಂಕಿ ಅಂಶ ಕಡಿಮೆ ಕಾಣಿಸುತ್ತಿದೆ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ