
ಬೆಂಗಳೂರು/ಮೈಸೂರು (ಸೆ.25): ಪದ್ಮವಿಭೂಷಣ, ಸರಸ್ವತೀ ಸಮ್ಮಾನ್ ಪುರಸ್ಕೃತ ಎಸ್.ಎಲ್.ಬೈರಪ್ಪನವರು, ಮೈಸೂರಿನಲ್ಲಿಯೇ ತಮ್ಮ ಜೀವಿತಾವಧಿಯನ್ನು ಕಳೆದಿದ್ದು, ವಿದ್ಯಾಭ್ಯಾಸ, ಸಾಹಿತ್ಯಕೃಷಿಯಲ್ಲಿ ನಡೆಸಿದ್ದರು. ಆದ್ದರಿಂದ ಮೈಸೂರಿನಲ್ಲಿಯೇ ಎಸ್.ಎಲ್.ಬೈರಪ್ಪನವರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪನವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸ್.ಎಲ್ ಬೈರಪ್ಪನವರ ನಿಧನದಿಂದ ಸಾರಸ್ವತ ಲೋಕ ಬಡವಾಗಿದೆ. ಅವರು ಸುಮಾರು 25 ಕಾದಂಬರಿಗಳನ್ನು ಬರೆದಿದ್ದು, ಮೈಸೂರಿನಲ್ಲಿಯೇ ವಿದ್ಯಾಭ್ಯಾಸ ನಡೆಸಿದ ಬೈರಪ್ಪನವರಿಗೆ ಮೈಸೂರು ಕರ್ಮಸ್ಥಳ. ಅವರ ಕಾದಂಬರಿಗಳು 40 ಭಾಷೆಗಳಿಗೆ ತರ್ಜುಮೆಯಾಗಿದ್ದು, ಇಷ್ಟು ಸಂಖ್ಯೆಯಲ್ಲಿ ಸಾಹಿತಿಯೊಬ್ಬರ ಕೃತಿಗಳು ತರ್ಜುಮೆಯಾಗಿರುವುದು ಅಪರೂಪ. ವಿವಿಧ ಭಾಷೆಗಳ ಓದುಗರನ್ನು ಸಂಪಾದಿಸಿದ್ದರು. ಸಣ್ಣ ಗ್ರಾಮವೊಂದರಲ್ಲಿ ಜನಿಸಿದ ಬೈರಪ್ಪನವರು ಫಿಲಾಸಫಿಯನ್ನು ಓದಿದ್ದರೂ, ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಂಡವರು ಎಂದರು.
ಬೋಧನಾ ವೃತ್ತಿಯಲ್ಲಿದ್ದುಕೊಂಡು ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನೂ ತೊಡಗಿಸಿಕೊಂಡಿದ್ದರು. ಕಾದಂಬರಿಗಳನ್ನು ಆತ್ಮತೃಪ್ತಿಗಾಗಿ ಬರೆಯುತ್ತಿದ್ದ ಅವರ ಕೃತಿಗಳು ಜಗತ್ಪ್ರಸಿದ್ಧವಾಗಿದ್ದವು. ನಾನು ಅವರ ಕೆಲವೊಂದು ಕಾದಂಬರಿಗಳನ್ನು ಓದಿದ್ದೇನೆ. ಬದುಕಿನ ಅನುಭವಗಳನ್ನಾಧರಿಸಿ ಬರೆಯುವ ಸಾಹಿತಿ. ಅವರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರು, ಸಾಹಿತ್ಯಾಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಭರಿಸಲು ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.
ಸಾಹಿತ್ಯ ಹಾಗೂ ಸ್ನೇಹ ಬೇರೆ ಬೇರೆ. ನಮ್ಮ ದೃಷ್ಟಿಕೋನಗಳು ಬೇರೆಯಾಗಿದ್ದರೂ, ಭೈರಪ್ಪನವರು ಜೊತೆ ನನಗೆ ಉತ್ತಮ ಬಾಂಧವ್ಯವಿತ್ತು. ಬೈರಪ್ಪನವರ ಅಂತ್ಯಕ್ರಿಯೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಭಾಗವಹಿಸಲಿದ್ದಾರೆ. ವಿವಿಧ ಪ್ರಶಸ್ತಿಗಳಿಗೆ ಭಾಜನರಾಗಿರುವ ಭೈರಪ್ಪನವರು ನಾಡು ಕಂಡ ಶ್ರೇಷ್ಠ ಸಾಹಿತಿಗಳಾಗಿದ್ದರು. ಯಾವುದೇ ಪ್ರಶಸ್ತಿಗೂ ಹಂಬಲಿಸದ ಬೈರಪ್ಪನವರಿಗೆ ಅವರ ಸಾಹಿತ್ಯದ ಕೊಡುಗೆಯನ್ನು ಪರಿಗಣಿಸಿ ಜ್ಞಾನಪೀಠ ಪ್ರಶಸ್ತಿಯನ್ನು ನೀಡಿದ್ದರೆ ಉತ್ತಮವಾಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ