
ಬೆಂಗಳೂರು (ಡಿ.4): ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಪಕ್ಷಗಳನ್ನು ಸಮರ್ಥವಾಗಿ ಎದುರಿಸುವ ಕುರಿತು ಕಾರ್ಯತಂತ್ರ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸಂಜೆ ಸಚಿವರೊಂದಿಗೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ.
ಗುರುವಾರ ಮಧ್ಯಾಹ್ನ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಂಪುಟ ಸಭೆ ಮುಗಿದ ಬಳಿಕ ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ.
ವಿಧಾನಮಂಡಲ ಅಧಿವೇಶನದಲ್ಲಿ ಅಧಿಕಾರ ಹಂಚಿಕೆ ಕಿತ್ತಾಟ ಮತ್ತಿತರ ವಿಷಯ ಪ್ರಸ್ತಾಪಿಸಿ ಪ್ರತಿಪಕ್ಷಗಳು ಅವಿಶ್ವಾಸ ಮಂಡನೆಗೆ ಸಿದ್ಧತೆ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಅಧಿವೇಶನದಲ್ಲಿ ಎತ್ತಬಹುದಾದ ವಿಚಾರಗಳಿಗೆ ಸರ್ಕಾರದಿಂದ ಯಾವ ರೀತಿ ತಿರುಗೇಟು ನೀಡಬೇಕು ಎಂಬ ಬಗ್ಗೆ ಸಚಿವರ ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ. ವಿವಿಧ ಇಲಾಖೆಗಳಿಂದ ಮಂಡನೆಯಾಗಲಿರುವ ವಿಧೇಯಕಗಳ ಬಗ್ಗೆ, ಪ್ರತಿಪಕ್ಷಗಳು ಇಲಾಖಾವಾರು ಕೇಳುವ ಪ್ರಶ್ನೆಗಳಿಗೆ ಹೇಗೆ ಸಿದ್ಧತೆ ನಡೆಸಬೇಕು ಎಂಬ ಚರ್ಚೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.
ಡಿ.8 ರಿಂದ ಅಧಿವೇಶನ ಶುರುವಾಗಲಿದ್ದು, ಅಧಿವೇಶನ ಶುರುವಾದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ವೇಳೆ ಶಾಸಕರು, ಪರಿಷತ್ ಸದಸ್ಯರು ಎಲ್ಲರೂ ಹೇಗೆ ಸರ್ಕಾರವನ್ನು ಸಮರ್ಥಿಸಿಕೊಳ್ಳಬೇಕು ಎಂದು ಚರ್ಚಿಸಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ