
ಬೆಂಗಳೂರು(ಆ.02): ಮುಖ್ಯಮಂತ್ರಿ ಆದ ಬಳಿಕ ಈ ಅವಧಿಯಲ್ಲಿ ಮೊದಲ ಬಾರಿಗೆ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುತ್ತಿದ್ದು, ಆ.3ರಂದು ಗುರುವಾರ ಬೆಳಗ್ಗೆ 11 ಗಂಟೆಗೆ ದೆಹಲಿಯಲ್ಲಿ ಪ್ರಧಾನಿ ಹಾಗೂ ಮುಖ್ಯಮಂತ್ರಿಗಳ ಭೇಟಿ ನಿಗದಿಯಾಗಿದೆ.
ಇಂದು(ಬುಧವಾರ) ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳೆಸಲಿರುವ ಸಿದ್ದರಾಮಯ್ಯ, ಬುಧವಾರ ಹಾಗೂ ಗುರುವಾರ ಎರಡು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಲವು ಕೇಂದ್ರ ಸಚಿವರನ್ನು ಭೇಟಿಯಾಗಲಿದ್ದಾರೆ.
ಆ.3 ರಂದು ಪ್ರಧಾನಮಂತ್ರಿಗಳ ಭೇಟಿ ವೇಳೆ ಸಿದ್ದರಾಮಯ್ಯ ಅವರು ಕೇಂದ್ರ ಸಹಯೋಗದ ರಾಜ್ಯ ಯೋಜನೆಗಳು ಹಾಗೂ ಅನುದಾನ ಬಿಡುಗಡೆ ಸಂಬಂಧ ಬೇಡಿಕೆ ಇಡುವ ಸಾಧ್ಯತೆಯಿದೆ.
ಮಂಗಳೂರು: ನೈತಿಕ ಪೊಲೀಸ್ ಗಿರಿ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ
ರಾಜ್ಯ ಸರ್ಕಾರ ಪ್ರಮುಖ ಯೋಜನೆ ಅನ್ನಭಾಗ್ಯಕ್ಕೆ ಅಕ್ಕಿ ಪೂರೈಕೆ ಸಂಬಂಧ ಮನವಿ ಮಾಡಲಿದ್ದಾರೆ. ಕೇಂದ್ರದ ಅನುದಾನ ಹೆಚ್ಚಿಸುವಂತೆ ಮನವಿ ಮಾಡುವುದರ ಜೊತೆಗೆ ನೀರಾವರಿ ಯೋಜನೆಗಳಿಗೆ ಅನುದಾನ, ಜಲಜೀವನ್ ಮಿಷನ್, ನರೇಗಾಗೆ ಹೆಚ್ಚಿನ ಹಣಕಾಸು ನೆರವು ನೀಡುವಂತೆ ಸಿದ್ದರಾಮಯ್ಯ ಕೋರಬಹುದು.
ಇನ್ನು 15ನೇ ಹಣಕಾಸು ಆಯೋಗದಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಪ್ರಸ್ತಾಪಿಸಬಹುದು. ಆದರೆ, ಈ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಒತ್ತಾಯ ರೂಪದಲ್ಲಿ ಲಿಖಿತ ಮನವಿ ಸಲ್ಲಿಸಬಹುದು ಎಂದು ಹೇಳಲಾಗಿದೆ.
ಧಾರವಾಡ: ನೆರೆ ಸಂತ್ರಸ್ಥರ ಕಣ್ಣೀರು ಒರೆಸದ ಸಿದ್ದು ಸರಕಾರಕ್ಕೆ ಹಿಡಿಶಾಪ..!
ಹಣಕಾಸು ಸಚಿವರ ಭೇಟಿ ವೇಳೆ, 15ನೇ ಹಣಕಾಸು ಆಯೋಗದ ಶಿಫಾರಸಿನ ಪ್ರಕಾರ 5,495 ಕೋಟಿ ರು.ಗಳ ಮಧ್ಯಂತರ ಪರಿಹಾರದ ವಿಶೇಷ ಅನುದಾನ ನೀಡುವಂತೆ ಕೋರುವ ಸಾಧ್ಯತೆ ಇದೆ. ಜತೆಗೆ ಬರ ಮಾನದಂಡವನ್ನು ಪರಿಷ್ಕರಿಸಿ ರಾಜ್ಯಕ್ಕೆ ಬರ ಪರಿಹಾರ ನೀಡುವಂತೆಯೂ ಮನವಿ ಮಾಡುವ ಸಾಧ್ಯತೆ ಇದೆ. ಜಿಎಸ್ಟಿಯಲ್ಲೂ ರಾಜ್ಯದ ಪಾಲು ಸಮರ್ಪಕವಾಗಿ ಸಿಗುತ್ತಿಲ್ಲ ಎಂಬುದನ್ನು ಗಮನಕ್ಕೆ ತರಲಿದ್ದಾರೆ.
ದಸರಾ ಏರ್ಶೋಗೆ ಕೋರಿಕೆ:
ಬಳಿಕ ಕೇಂದ್ರ ರಕ್ಷಣಾ ಸಚಿವ ರಾಜನಾಥ್ಸಿಂಗ್ ಅವರನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ಮೈಸೂರು ದಸರಾ ವೇಳೆ ಏರ್ಶೋ ನಡೆಸಲು ಅಗತ್ಯ ಅನುಮತಿ ಕೇಳಲಿದ್ದಾರೆ. ನಂತರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ರಾಜ್ಯದ ಪ್ರಮುಖ ಹೆದ್ದಾರಿ ರಸ್ತೆ ಯೋಜನೆಗಳ ಬಗ್ಗೆ ಚರ್ಚಿಸಲಿದ್ದು ನೂತನ ಯೋಜನೆಗಳಿಗೆ ಪ್ರಸ್ತಾವನೆ ಸಲ್ಲಿಸಲಿದ್ದಾರೆ. ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ ಹೆದ್ದಾರಿಯ ನ್ಯೂನತೆಗಳ ಬಗ್ಗೆಯೂ ಗಮನಕ್ಕೆ ತರಲಿದ್ದಾರೆ ಎಂದು ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ