
ಬೆಂಗಳೂರು, (ಮೇ.09): ನಾಳೆ ಅಂದ್ರೆ ಮೇ 10ರಿಂದ 18ರಿಂದ 44 ವರ್ಷದವರಿಗೆ ವ್ಯಾಕ್ಸಿನ್ ನೀಡುವ ಬಗ್ಗೆ ಆರೋಗ್ಯ ಇಲಾಖೆ ಸಚಿವ ಡಾ.ಕೆ.ಸುಧಾಕರ್ ಮಹತ್ವದ ಮಾಹಿತಿ ಕೊಟ್ಟಿದ್ದಾರೆ.
ಈ ಬಗ್ಗೆ ಇಂದು (ಭಾನುವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆ, ನಿಮ್ಹಾನ್ಸ್, ಜಯನಗರದ ಜನರಲ್ ಆಸ್ಪತ್ರೆ, ಇಎಸ್ಐ, ಸರ್ ಸಿ.ವಿ.ರಾಮನ್ ಜನರಲ್ ಆಸ್ಪತ್ರೆ ಸೇರಿದಂತೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಕೊವಿಡ್ ಲಸಿಕೆ ಹಾಕಲಾಗುತ್ತೆ. ಹಾಗೂ ಆರಂಭಿಕವಾಗಿ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ ಲಸಿಕೆ ಹಾಕಲಾಗುತ್ತೆ. ಲಸಿಕೆ ಪೂರೈಕೆ ಹೆಚ್ಚಾಗುತ್ತಿದ್ದಂತೆ ಮುಂದಿನ ದಿನಗಳಲ್ಲಿ ಇನ್ನಷ್ಟು ಲಸಿಕಾ ಕೇಂದ್ರಗಳಲ್ಲಿ ವಿತರಣೆ ಆರಂಭಿಸಲಾಗುವುದು ಎಂದು ಹೇಳಿದರು.
ವ್ಯಾಕ್ಸಿನ್ ಸಿಗದೆ ಪರದಾಟ: 2ನೇ ಡೋಸ್ ಲಸಿಕೆ ಬೇಕಾದವರಿಗೆ ಆದ್ಯತೆ ನೀಡಿ, ಸುಧಾಕರ್
ಇತರೆ ಜಿಲ್ಲೆಗಳಲ್ಲಿ ಆರಂಭಿಕವಾಗಿ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಹಾಗೂ ಸರ್ಕಾರಿ ಮೆಡಿಕಲ್ ಕಾಲೇಜುಗಳಲ್ಲಿ 18-44 ವಯೋಮಾನದವರಿಗೆ ಲಸಿಕೆ ನೀಡಲಾಗುವುದು. ಲಸಿಕೆ ಪೂರೈಕೆ ಹೆಚ್ಚಾಗುತ್ತಿದ್ದಂತೆ, ಮುಂದಿನ ದಿನಗಳಲ್ಲಿ ಇನ್ನಷ್ಟು ಲಸಿಕೆ ಕೇಂದ್ರಗಳಲ್ಲಿ ವಿತರಣೆ ಆರಂಭಿಸಲಾಗುವುದು ಎಂದು ಸಚಿವರು ವಿವರಿಸಿದರು.
ಪ್ರತಿ ವ್ಯಕ್ತಿಗೂ ಆದಷ್ಟು ಶೀಘ್ರದಲ್ಲಿ ಲಸಿಕೆ ಒದಗಿಸಲು ಸರ್ಕಾರ ಬದ್ಧವಾಗಿದೆ. ಅಗತ್ಯ ಲಸಿಕೆ ಪೂರೈಕೆ ಮಾಡಿಕೊಳ್ಳಲು ನಿರಂತರ ಪ್ರಯತ್ನ ಸಾಗಿದೆ. ಆದ್ದರಿಂದ ಎಲ್ಲಾ ನಾಗರಿಕರು, ಅದರಲ್ಲೂ ವಿಶೇಷವಾಗಿ ನನ್ನ ಯುವಮಿತ್ರರು ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯಬೇಕು. ಖಂಡಿತವಾಗಿ ಲಸಿಕೆ ಸಿಗುತ್ತದೆ ಎಂದು ಮನವಿ ಮಾಡಿದರು.
ನಿನ್ನೆ (ಶನಿವಾರ) 3.5 ಲಕ್ಷ ಡೋಸ್ ಲಸಿಕೆ ರಾಜ್ಯಕ್ಕೆ ತಲುಪಿದೆ. ಈವರೆಗೂ ಒಟ್ಟು 6.5 ಲಕ್ಷ ಡೋಸ್ ರಾಜ್ಯಕ್ಕೆ ತಲುಪಿದೆ. ಕೇಂದ್ರ ಸರ್ಕಾರದಿಂದ 99,58,190 ಡೋಸ್ ಕೊವಿಶೀಲ್ಡ್, 10,91,280 ಡೋಸ್ ಕೊವ್ಯಾಕ್ಸಿನ್ ಲಸಿಕೆ ರಾಜ್ಯಕ್ಕೆ ಪೂರೈಕೆಯಾಗಿದ್ದು, ಈವರೆಗೆ ಒಟ್ಟು 1,10,49,470 ಡೋಸ್ ಲಸಿಕೆ ತಲುಪಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದರು.
ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಸೋಂಕಿನ ವಿರುದ್ಧ ನೀಡುವ ಲಸಿಕಾ ಅಭಿಯಾನಕ್ಕೆ ಮೇ 1ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿವಾಜಿನಗರದ ವಾಜಪೇಯಿ ಮೆಡಿಕಲ್ ಕಾಲೇಜಿನಲ್ಲಿ ಸಾಂಕೇತಿಕ ಚಾಲನೆ ನೀಡಿದ್ರು. ಆದ್ರೆ, ಲಸಿಕೆ ಪೂರೈಕೆ ಆಗದಿದ್ದರಿಂದ ತಡೆಹಿಡಿಯಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ