
ಚಾಮರಾಜನಗರ (ಜ.20): ತಮಿಳುನಾಡಿನಲ್ಲಿ ಅಯ್ಯಪ್ಪ ಮಾಲಾದಾರಿಗಳ ಮೇಲೆ ದೌರ್ಜನ್ಯ ಮತ್ತು ಕನ್ನಡ ಬಾವುಟಕ್ಕೆ ಹಾನಿ ಮಾಡಲಾಗಿದೆ ಎನ್ನಲಾದ ಘಟನೆಗೆ ಸಂಬಂಧಿಸಿದಂತೆ ಈಗ ಮಹತ್ವದ ಬೆಳವಣಿಗೆ ನಡೆದಿದೆ. ಈ ಬಗ್ಗೆ ತಮಿಳುನಾಡಿನ ಥೇನಿ ಜಿಲ್ಲಾ ಎಸ್ಪಿ ಬಿ. ಸ್ನೇಹಪ್ರಿಯ ಅವರು ಚಾಮರಾಜನಗರ ಎಸ್ಪಿ ಮುತ್ತುರಾಜು ಅವರಿಗೆ ಪತ್ರ ಬರೆದು ಪೂರ್ಣ ಮಾಹಿತಿ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋವೊಂದು ವೈರಲ್ ಆಗಿತ್ತು. ಈ ವೀಡಿಯೋವನ್ನು ಚಾಮರಾಜನಗರ ಎಸ್ಪಿ ಮುತ್ತುರಾಜು ಅವರು ಥೇನಿ ಎಸ್ಪಿಯವರ ಗಮನಕ್ಕೆ ತಂದಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ತಮಿಳುನಾಡು ಪೊಲೀಸರು, ಪ್ರಕರಣದ ಗಂಭೀರತೆ ಅರಿತು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ಈಗಾಗಲೇ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಥೇನಿ ಎಸ್ಪಿ ಮಾಹಿತಿ ನೀಡಿದ್ದಾರೆ.
ಘಟನೆಯ ಹಿನ್ನೆಲೆಯ ಬಗ್ಗೆ ವಿವರಿಸಿರುವ ಪೊಲೀಸರು, ತಮಿಳುನಾಡಿನ ಲಾರಿಯೊಂದು ಕರ್ನಾಟಕದ ಪ್ರವಾಸಿ ವ್ಯಾನ್ನ ಹಿಂಬದಿಗೆ ಡಿಕ್ಕಿ ಹೊಡೆದಿದ್ದರಿಂದ ಗಲಾಟೆ ಆರಂಭವಾಗಿದೆ ಎಂದು ತಿಳಿಸಿದ್ದಾರೆ. ಈ ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ, ಆದರೆ ವ್ಯಾನ್ನ ಹಿಂಭಾಗದ ಲೈಟ್ಗೆ ಸಣ್ಣ ಪ್ರಮಾಣದ ಹಾನಿಯಾಗಿದೆ. ಈ ವಿಚಾರವಾಗಿ ಎರಡೂ ಕಡೆಯವರ ನಡುವೆ ತೀವ್ರ ವಾಗ್ವಾದ ನಡೆದಿದೆ.
ಸ್ಥಳದಲ್ಲಿದ್ದ ಪೊಲೀಸರ ವರ್ತನೆ ಬಗ್ಗೆ ತನಿಖೆ
ಗಲಾಟೆ ನಡೆದ ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಎರಡೂ ಕಡೆಯವರನ್ನು ಸಮಾಧಾನಪಡಿಸಿ ಸಮಸ್ಯೆ ಬಗೆಹರಿಸಿದ್ದಾರೆ. ಯಾವುದೇ ಪಕ್ಷಪಾತವಿಲ್ಲದೆ ಕಾನೂನು ಕ್ರಮ ವಹಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ. ಆದರೆ, ಘಟನೆಯ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಪೊಲೀಸರ ಪಾತ್ರ ಮತ್ತು ಅವರ ವರ್ತನೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪ್ರಶ್ನೆಗಳು ಎದ್ದಿರುವ ಹಿನ್ನೆಲೆಯಲ್ಲಿ, ಈ ಬಗ್ಗೆಯೂ ತನಿಖೆಗೆ ಆದೇಶಿಸಲಾಗಿದೆ. ತನಿಖೆಯಲ್ಲಿ ಲೋಪ ಕಂಡುಬಂದಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸುವುದಾಗಿ ಥೇನಿ ಎಸ್ಪಿ ಭರವಸೆ ನೀಡಿದ್ದಾರೆ.
ಕನ್ನಡಿಗರ ಸುರಕ್ಷತೆಗೆ ಆದ್ಯತೆ
ಕರ್ನಾಟಕದಿಂದ ತಮಿಳುನಾಡಿಗೆ ಬರುವ ಪ್ರಯಾಣಿಕರು ಮತ್ತು ವಾಹನಗಳ ಸುರಕ್ಷತೆ ಹಾಗೂ ಭದ್ರತೆಯನ್ನು ಕಾಪಾಡಲು ತಮ್ಮ ಇಲಾಖೆ ಬದ್ಧವಾಗಿದೆ ಎಂದು ಎಸ್ಪಿ ಬಿ ಸ್ನೇಹಪ್ರಿಯ ಅವರು ಪತ್ರದ ಮೂಲಕ ಸ್ಪಷ್ಟಪಡಿಸಿದ್ದಾರೆ. ಈ ಎಲ್ಲಾ ಮಾಹಿತಿಯನ್ನು ಚಾಮರಾಜನಗರ ಎಸ್ಪಿ ಮುತ್ತುರಾಜು ಅವರು ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ