
ಬೆಂಗಳೂರು (ಜೂ.24): ರಾಜ್ಯ ಸರ್ಕಾರದಲ್ಲಿ ಆಡಳಿತಾತ್ಮಕ ದಕ್ಷತೆಯನ್ನು ಹೆಚ್ಚಿಸಲು ಮತ್ತು ಸಾರ್ವಜನಿಕರ ಅಹವಾಲುಗಳನ್ನು ಒಂದೇ ಸೂರಿನಡಿ ತ್ವರಿತವಾಗಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ ಮಹತ್ತರ ಹೆಜ್ಜೆಯಿಟ್ಟಿದೆ. ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಘೋಷಿಸಿದ್ದ ಮಹತ್ವಾಕಾಂಕ್ಷೆಯ 'ಪ್ರಜಾಸೇವಾ ಇಲಾಖೆ'ಯನ್ನು (Praja Seva Department) ಹೊಸದಾಗಿ ಸ್ಥಾಪಿಸಿ ಈಗ ಅಧಿಕೃತ ಆದೇಶ ಹೊರಡಿಸಲಾಗಿದೆ. ಜೂನ್ 20 ರಂದು ನಡೆದ ಸಚಿವ ಸಂಪುಟ ಸಭೆಯ ತೀರ್ಮಾನದಂತೆ , ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು (DPAR) ಜೂನ್ 24 ರಂದು ಈ ಹೊಸ ಇಲಾಖೆಯನ್ನು ಸೃಜಿಸಿ ಅಧಿಸೂಚನೆ ಹೊರಡಿಸಿದೆ.
ನೂತನ ಪ್ರಜಾಸೇವಾ ಇಲಾಖೆಯನ್ನು ಹೆಚ್ಚು ವ್ಯವಸ್ಥಿತವಾಗಿ ರೂಪಿಸಲು ಹಾಲಿ ಇರುವ ಮೂರು ಪ್ರಮುಖ ವಿಭಾಗಗಳನ್ನು ಇದರಲ್ಲಿ ವಿಲೀನಗೊಳಿಸಲಾಗಿದೆ. ಅವುಗಳೆಂದರೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಆಡಳಿತ ಸುಧಾರಣೆ), ಇದರ (ಇ-ಆಡಳಿತ) ಅಡಿಯಲ್ಲಿನ ಸಾರ್ವಜನಿಕ ದೂರುಗಳು ಮತ್ತು ಕುಂದುಕೊರತೆಗಳು ವಿಭಾಗದ 'ಎ' ಮತ್ತು 'ಬಿ' ಶಾಖೆಗಳು ಹಾಗೂ ಸಕಾಲ ಮಿಷನ್ ಅನ್ನು ವಿಲೀನ ಮಾಡಲಾಗಿದೆ.
ಹೊಸ ಇಲಾಖೆಯ ಆಡಳಿತ ವಿನ್ಯಾಸದ ಕುರಿತು ಸ್ಪಷ್ಟ ಆದೇಶ ಹೊರಡಿಸಲಾಗಿದ್ದು , ಒಟ್ಟು 73 ಮಂಜೂರಾದ ಖಾಯಂ ಹುದ್ದೆಗಳನ್ನು ಮರುಹೊಂದಾಣಿಕೆ ಮೂಲಕ ಸೃಜಿಸಲಾಗಿದೆ. ಇದರಲ್ಲಿ ಸರ್ಕಾರದ ಕಾರ್ಯದರ್ಶಿ ಹಾಗೂ ಮಿಷನ್ ನಿರ್ದೇಶಕರು, ಅಪರ ಮಿಷನ್ ನಿರ್ದೇಶಕರು, ಉಪ ಕಾರ್ಯದರ್ಶಿ ಹಾಗೂ ಆಡಳಿತಾಧಿಕಾರಿ ಹುದ್ದೆಗಳು ಸೇರಿವೆ. ಇದರೊಂದಿಗೆ ತಾಂತ್ರಿಕ ಹಾಗೂ ಆಡಳಿತಾತ್ಮಕ ಕೆಲಸಗಳ ನಿರ್ವಹಣೆಗಾಗಿ ಒಟ್ಟು 48 ಹುದ್ದೆಗಳನ್ನು ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡಲಾಗಿದೆ.
ಈ ಐತಿಹಾಸಿಕ ನಿರ್ಧಾರದಿಂದಾಗಿ ಇನ್ಮುಂದೆ ಸಾರ್ವಜನಿಕರು ತಮ್ಮ ದೂರುಗಳು ಮತ್ತು ಆಡಳಿತಾತ್ಮಕ ಕೆಲಸಗಳಿಗಾಗಿ ಬೇರೆ ಬೇರೆ ಇಲಾಖೆಗಳಿಗೆ ಅಲೆಯುವುದು ತಪ್ಪಲಿದ್ದು, ಪ್ರಜಾಸೇವಾ ಇಲಾಖೆಯ ಮೂಲಕ ತ್ವರಿತವಾಗಿ ನ್ಯಾಯ ಸಿಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ