2ಎಗೆ ಸೇರ್ಪಡೆ ಅಧ್ಯಯನಕ್ಕೆ ಅಧಿಕೃತ ಸೂಚನೆ

Kannadaprabha News   | Asianet News
Published : Feb 17, 2021, 07:53 AM IST
2ಎಗೆ ಸೇರ್ಪಡೆ ಅಧ್ಯಯನಕ್ಕೆ ಅಧಿಕೃತ ಸೂಚನೆ

ಸಾರಾಂಶ

ಕರ್ನಾಟಕ ಸರ್ಕಾರ ಪಂಚಮಸಾಲಿಗೆ ಮೀಸಲಾತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ವರದಿ ನಿಡಲು ಅಧಿಕೃತ ಸೂಚನೆ ನೀಡಿದೆ.

ಬೆಂಗಳೂರು (ಫೆ.17):  ರಾಜ್ಯದ ಲಿಂಗಾಯತ ಪಂಚಮಸಾಲಿ ಜನಾಂಗವನ್ನು ‘ಹಿಂದುಳಿದ ವರ್ಗ 2ಎ’ಗೆ ಸೇರಿಸಬೇಕೆಂದು ಮನವಿ ಬಂದಿರುವ ಹಿನ್ನೆಲೆಯಲ್ಲಿ ಈ ಸಂಬಂಧ ಸಮಗ್ರ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸರ್ಕಾರ ಅಧಿಕೃತ ಸೂಚನೆ ನೀಡಿದೆ.

ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸುವಂತೆ ಆಗ್ರಹಿಸಿ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಾದಯಾತ್ರೆ ನಡೆಸಿ ಒತ್ತಡ ನಿರ್ಮಾಣ ಮಾಡಿದ ಬೆನ್ನಲ್ಲೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇರವಾಗಿ ಫೆ.5ರಂದು ಹಿಂದುಳಿದ ವರ್ಗಗಳ ಆಯೋಗಕ್ಕೆ ಪತ್ರ ಬರೆದು ಸಮಗ್ರ ಅಧ್ಯಯನ ವರದಿ ನೀಡುವಂತೆ ಸೂಚಿಸಿದ್ದರು.

ಪಂಚಮಸಾಲಿ 2ಎಗೆ ಸೇರಿಸಿದರೆ ಇತರರಿಗೆ ಅನ್ಯಾಯ! ...

ಆ ನಂತರ ಆಯೋಗವು ಈ ಸಂಬಂಧ ನಿಯಮಾನುಸಾರ ಮುಖ್ಯ ಕಾರ್ಯದರ್ಶಿ ಇಲ್ಲವೇ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರಿಂದ ಪತ್ರ ನೀಡುವಂತೆ ಸರ್ಕಾರಕ್ಕೆ ಕೋರಿತ್ತು.

ಈ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಮಹೇಶ್‌ ಅವರು ಆಯೋಗ ಸದಸ್ಯ ಕಾರ್ಯದರ್ಶಿಗೆ ಅಧಿಕೃತ ಪತ್ರ ಬರೆದಿದ್ದು, ಲಿಂಗಾಯತ ಪಂಚಮಸಾಲಿ ಜನಾಂಗವನ್ನು ‘ಪ್ರವರ್ಗ 2ಎ’ಗೆ ಸೇರಿಸುವಂತೆ ಕೋರಿ ಮನವಿಗಳು ಸರ್ಕಾರಕ್ಕೆ ಸಲ್ಲಿಕೆಯಾಗಿವೆ. ತಮ್ಮ ಜನಾಂಗವು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಔದ್ಯೋಗಿಕವಾಗಿ ಹಿಂದುಳಿದಿರುವುರಿಂದ 2ಎ ಮೀಸಲಾತಿಗೆ ಸೇರಿಸಬೇಕೆಂದು ಪಂಚಮಸಾಲಿ ಜನಾಂಗದವರು ಮನವಿಯಲ್ಲಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಸಮಗ್ರ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಆಯೋಗಕ್ಕೆ ನಿರ್ದೇಶನ ನೀಡಿದ್ದಾರೆ. ಪತ್ರದಲ್ಲಿ ಫೆ.5ರಂದು ಮುಖ್ಯಮಂತ್ರಿ ಅವರು ಆಯೋಗಕ್ಕೆ ಬರೆದಿರುವ ಪತ್ರದ ಬಗ್ಗೆಯೂ ಪ್ರಧಾನ ಕಾರ್ಯದರ್ಶಿ ಅವರು ಉಲ್ಲೇಖಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ಆಲೂಗಡ್ಡೆಗೆ ಮೊಳಕೆ ಬಂದರೆ ತಿನ್ನಬಹುದಾ? ತಜ್ಞರ ಎಚ್ಚರಿಕೆ ಏನು, ಯಾವುದು- ಯಾರಿಗೆ ಅಪಾಯ?