ರಾಜ್ಯದ ಗ್ರಾ.ಪಂ.ಗಳಿಗೆ ಬರಬೇಕಾದ ₹2186 ಕೋಟಿ ಬಾಕಿ: ಕೇಂದ್ರಕ್ಕೆ ಒತ್ತಡ ಹೇರಲು ಸಂಸದರಿಗೆ ಸಚಿವ ಈಶ್ವರ ಖಂಡ್ರೆ ಪತ್ರ

Published : Jul 16, 2026, 05:29 PM IST
Eshwar Khandre Letter to Mps

ಸಾರಾಂಶ

15ನೇ ಹಣಕಾಸು ಆಯೋಗದ ಅಡಿಯಲ್ಲಿ ಕರ್ನಾಟಕದ ಗ್ರಾಮ ಪಂಚಾಯಿತಿಗಳಿಗೆ ಬರಬೇಕಿದ್ದ ₹2186.20 ಕೋಟಿ ಅನುದಾನವನ್ನು ಕೇಂದ್ರ ಸರ್ಕಾರ ತಾಂತ್ರಿಕ ಕಾರಣ ನೀಡಿ ತಡೆಹಿಡಿದಿದೆ. ಈ ಹಿನ್ನೆಲೆಯಲ್ಲಿ, ಹಣ ಬಿಡುಗಡೆಗೆ ಕೇಂದ್ರದ ಮೇಲೆ ಒತ್ತಡ ಹೇರುವಂತೆ ಕೋರಿ ಸಚಿವ ಈಶ್ವರ ಖಂಡ್ರೆ ಅವರು ರಾಜ್ಯದ ಎಲ್ಲಾ ಸಂಸದರಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರು (ಜು.16): ರಾಜ್ಯದ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ಬರಬೇಕಿದ್ದ 15ನೇ ಹಣಕಾಸು ಆಯೋಗದ ಬೃಹತ್ ಮೊತ್ತದ ಅನುದಾನಕ್ಕೆ ಕೇಂದ್ರ ಸರ್ಕಾರ ತಡೆ ನೀಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ, ಬಾಕಿ ಇರುವ ₹2186.20 ಕೋಟಿ ಹಣವನ್ನು ಕೂಡಲೇ ಬಿಡುಗಡೆ ಮಾಡಿಸುವಂತೆ ಕೋರಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅವರು ರಾಜ್ಯದ ಎಲ್ಲಾ ಸಂಸದರಿಗೆ ಪತ್ರ ಬರೆದಿದ್ದಾರೆ.

ಏನಿದು ಪ್ರಕರಣ?

15ನೇ ಹಣಕಾಸು ಆಯೋಗದ ಶಿಫಾರಸಿನಂತೆ 2025-26ನೇ ಸಾಲಿನಲ್ಲಿ ಕರ್ನಾಟಕದ ಗ್ರಾಮ ಪಂಚಾಯಿತಿಗಳಿಗೆ ಒಟ್ಟು 2186.20 ಕೋಟಿ ರೂಪಾಯಿ ಹಂಚಿಕೆಯಾಗಿತ್ತು. ಆದರೆ, ಕೇಂದ್ರ ಸರ್ಕಾರವು ತಾಂತ್ರಿಕ ಕಾರಣಗಳನ್ನು ಹಾಗೂ ತಂತ್ರಾಂಶದ (Software) ತೊಡಕನ್ನು ನೆಪವಾಗಿಟ್ಟುಕೊಂಡು ಈ ಅನುದಾನವನ್ನು ಬಿಡುಗಡೆ ಮಾಡದೆ ತಡೆಹಿಡಿದಿದೆ. ರಾಜ್ಯ ಸರ್ಕಾರವು ಕೇಂದ್ರವು ವಿಧಿಸಿದ್ದ ಎಲ್ಲಾ ಷರತ್ತುಗಳನ್ನು ಪಾಲಿಸಿದ್ದರೂ ಸಹ, ಅನುದಾನ ಬಿಡುಗಡೆ ಮಾಡದಿರುವುದು ಗ್ರಾಮೀಣಾಭಿವೃದ್ಧಿಗೆ ದೊಡ್ಡ ಹೊಡೆತ ನೀಡಿದೆ.

ಸಂಸದರಿಗೆ ಈಶ್ವರ ಖಂಡ್ರೆ ಮನವಿ:

ರಾಜ್ಯದಿಂದ ಆಯ್ಕೆಯಾಗಿರುವ ಕೇಂದ್ರ ಸಚಿವರುಗಳಾದ ನಿರ್ಮಲಾ ಸೀತಾರಾಮನ್, ಪ್ರಲ್ಹಾದ ಜೋಶಿ, ಎಚ್.ಡಿ. ಕುಮಾರಸ್ವಾಮಿ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ ಸೇರಿದಂತೆ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ತಮ್ಮ ಪುತ್ರ ಸಾಗರ್ ಖಂಡ್ರೆ ಸೇರಿದಂತೆ ಲೋಕಸಭೆ ಮತ್ತು ರಾಜ್ಯಸಭೆಯ ಎಲ್ಲಾ ಸದಸ್ಯರಿಗೂ ಸಚಿವರು ಪತ್ರ ಬರೆದಿದ್ದಾರೆ.

‘ರಾಜ್ಯವು ಈಗಾಗಲೇ ಮಳೆ ಕೊರತೆಯಿಂದ ಸಂಕಷ್ಟದಲ್ಲಿದೆ. ಇಂತಹ ಸಮಯದಲ್ಲಿ ಗ್ರಾಮ ಪಂಚಾಯಿತಿಗಳಿಗೆ ಬರಬೇಕಾದ ಅನುದಾನ ಸ್ಥಗಿತಗೊಂಡಿರುವುದು ಗ್ರಾಮೀಣ ಭಾಗದ ಮೂಲಸೌಕರ್ಯ ಮತ್ತು ಅಭಿವೃದ್ಧಿ ಕೆಲಸಗಳಿಗೆ ಅಡ್ಡಿಯಾಗಿದೆ. ಈ ಕುರಿತು ನಾನು ವೈಯಕ್ತಿಕವಾಗಿ ಕೇಂದ್ರ ಪಂಚಾಯತ್ ರಾಜ್ ಸಚಿವ ರಾಜೀವ್ ರಂಜನ್ ಸಿಂಗ್ ಅವರಿಗೆ ಮನವಿ ಮಾಡಿದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಆದ್ದರಿಂದ, ರಾಜ್ಯದ ಹಿತದೃಷ್ಟಿಯಿಂದ ನೀವೆಲ್ಲರೂ ಕೇಂದ್ರ ಸಚಿವರ ಮೇಲೆ ಒತ್ತಡ ಹೇರಬೇಕು,’ ಎಂದು ಪತ್ರದಲ್ಲಿ ಈಶ್ವರ ಖಂಡ್ರೆ ವಿನಂತಿಸಿದ್ದಾರೆ.

ತಾಂತ್ರಿಕ ನೆಪವೊಡ್ಡಿ ಹಣಕ್ಕೆ ಕತ್ತರಿ:

ಕೇಂದ್ರ ಸರ್ಕಾರವು 'ಸಾಫ್ಟ್‌ವೇರ್ ಸಮಸ್ಯೆ'ಯನ್ನು ಮುಂದಿಟ್ಟುಕೊಂಡು ಹಣ ತಡೆಹಿಡಿದಿದೆ. ಆದರೆ ರಾಜ್ಯ ಸರ್ಕಾರವು ತನ್ನ ಪಾಲಿನ ಎಲ್ಲಾ ದಾಖಲೆಗಳು ಮತ್ತು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದೆ. ಪಂಚಾಯತ್ ರಾಜ್ ಇಲಾಖೆಯು ಈ ಬಗ್ಗೆ ಹಿರಿಯ ಅಧಿಕಾರಿಗಳ ಮಟ್ಟದಲ್ಲಿ ಹಲವು ಬಾರಿ ಪತ್ರ ವ್ಯವಹಾರ ನಡೆಸಿದ್ದರೂ ಪ್ರಯೋಜನವಾಗಿಲ್ಲ. ಈಗ ಸಂಸದರ ಮೂಲಕ ಕೇಂದ್ರದ ಮೇಲೆ ರಾಜಕೀಯ ಒತ್ತಡ ಹೇರಿ ಹಣ ಬಿಡುಗಡೆ ಮಾಡಿಸಿಕೊಳ್ಳುವುದು ರಾಜ್ಯ ಸರ್ಕಾರದ ಮುಂದಿರುವ ದಾರಿಯಾಗಿದೆ.

ಗ್ರಾಮೀಣ ಜನರ ಬದುಕು ಹಸನಾಗಲು ಮತ್ತು ಪಂಚಾಯಿತಿಗಳು ಆರ್ಥಿಕವಾಗಿ ಸಬಲವಾಗಲು ಈ ₹2186 ಕೋಟಿ ಮೊತ್ತ ಅತ್ಯಂತ ಅಗತ್ಯವಾಗಿದ್ದು, ರಾಜ್ಯದ ಸಂಸದರು ಪಕ್ಷಾತೀತವಾಗಿ ಈ ಹೋರಾಟಕ್ಕೆ ಕೈಜೋಡಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಪಡಸಾಲೆಯ ಚರ್ಚೆ ರಿವೀಲ್ ಬೆನ್ನಲ್ಲೇ ಸಿಕ್ತು ಸ್ಪಷ್ಟನೆ!
KSRTC ಬಸ್‌ಗಳಿಗೆ ಬಂತು ಹೈಟೆಕ್ ಕಣ್ಗಾವಲು ವ್ಯವಸ್ಥೆ! ಕ್ಷಣಕ್ಷಣಕ್ಕೂ ಸಿಗಲಿದೆ ಮಾಹಿತಿ, ಏನಿದು VLTD ಡಿವೈಸ್?