
ಬೆಂಗಳೂರು (ಫೆ.6): ನಿಜವಾದ ಪ್ರೇಮಿ ತನ್ನ ಪ್ರೇಯಸಿಯೊಂದಿಗೆ ಕಳೆದ ಖಾಸಗಿ ಕ್ಷಣಗಳ ದೃಶ್ಯಗಳನ್ನು ಸರೆಹಿಡಿಯಲ್ಲ, ಆ ಪೋಟೋಗಳನ್ನು ತೋರಿಸಿ ಲೈಂಗಿಕ ಕ್ರಿಯೆಗೆ ಬಲವಂತಪಡಿಸಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಹೈಕೋರ್ಟ್, ಪ್ರೀತಿ ನೆಪದಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ವ್ಯಕ್ತಿಯೊಬ್ಬನಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದೆ.
ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ವ್ಯಕ್ತಿಯೊಬ್ಬ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ನ್ಯಾಯಮೂರ್ತಿ ವಿ.ಶ್ರೀಷಾನಂದ ಅವರ ಪೀಠ ಈ ಆದೇಶ ಮಾಡಿದೆ. ಅರ್ಜಿದಾರ ಮತ್ತು ಸಂತ್ರಸ್ತೆ ನಡುವೆ ಪ್ರೇಮ ಸಂಬಂಧವಿತ್ತು. ಇಬ್ಬರ ನಡುವೆ ಸಮ್ಮತಿಯಿಂದ ಲೈಂಗಿಕ ಕ್ರಿಯೆ ನಡೆದಿದೆ. ಹಾಗಾಗಿ, ನಿರೀಕ್ಷಣಾ ಜಾಮೀನು ನೀಡಬೇಕು ಎಂಬ ಆರೋಪಿ ವಾದ ಮಂಡಿಸಿದ್ದ.
ಈ ವಾದ ತಿರಸ್ಕರಿಸಿರುವ ನ್ಯಾಯಪೀಠ, ಪ್ರೇಮ ಸಂಬಂಧದ ಕಾರಣದಿಂದ ಈ ಘಟನೆ ನಡೆದಿದೆ. ಒಪ್ಪಿಗೆಯಿಂದ ನಡೆದ ಕೃತ್ಯ ಇದಾಗಿದೆ ಎಂದು ಭಾವಿಸಿದರೆ, ಯಾವುದೇ ನಿಜವಾದ ಪ್ರೇಮಿಯೂ ಖಾಸಗಿ ಕ್ಷಣಗಳ ದೃಶ್ಯಗಳ ಫೋಟೋ ತೆಗೆಯುವುದಿಲ್ಲ. ಬಲವಂತದ ಲೈಂಗಿಕ ಕ್ರಿಯೆಗೆ ಸಂತ್ರಸ್ತೆಯನ್ನು ಬ್ಲ್ಯಾಕ್ ಮೇಲ್ ಮಾಡಲ್ಲ ಎಂದು ಕಟುವಾಗಿ ನುಡಿದಿದೆ.
ಪ್ರಕರಣದಲ್ಲಿ ಆರೋಪಿ ಮತ್ತು ಸಂತ್ರಸ್ತೆ ನಡುವೆ ಅನ್ಯೋನ್ಯತೆ ಬೆಳೆದಿತ್ತು ಎಂಬುದು ಸ್ಪಷ್ಟ. ಆದರೆ, ಪ್ರೇಮ ಸಂಬಂಧದ ಸೋಗಿನಲ್ಲಿ ದೈಹಿಕ ಸಂಬಂಧ ಹೊಂದಲು ಆರೋಪಿ ಸಂತ್ರಸ್ತೆಗೆ ಆಮಿಷವೊಡ್ಡಿದ್ದ. ಸಂಭೋಗದ ದೃಶ್ಯಗಳನ್ನು ಆರೋಪಿ ಸೆರೆಹಿಡಿದುಕೊಂಡಿದ್ದಾನೆ. ನಂತರ ಆ ದೃಶ್ಯಗಳನ್ನು ಸಂತ್ರಸ್ತೆಗೆ ತೋರಿಸಿ ಸಾರ್ವಜನಿಕಗೊಳಿಸುವುದಾಗಿ ಬೆದರಿಸಿ ಬ್ಲಾಕ್ಮೇಲ್ ಮಾಡಿದ್ದಾನೆ. ಈ ಬ್ಲ್ಯಾಕ್ ಮೇಲ್ ಕಿರುಕುಳ ಸಹಿಸಿಕೊಳ್ಳಲು ಸಾಧ್ಯವಾಗದಿದ್ದಾಗ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ ಎಂದು ಪೀಠ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ.
ಪ್ರೇಮ ಸಂಬಂಧದಿಂದ ನಡೆದ ಯಾವುದೇ ಸಮ್ಮತಿ ಕ್ರಿಯೆಯು, ಪ್ರೇಮಿಯು ತನ್ನ ಪ್ರೇಯಸಿಯೊಂದಿಗೆ ಕಳೆದ ಖಾಸಗಿ ಕ್ಷಣಗಳ ಫೋಟೋ ತೆಗೆದು ಪ್ರಕಟಿಸಲು ಅಥವಾ ಬೆದರಿಕೆ ಹಾಕಿ ಪ್ರೇಯಸಿಯನ್ನು ದೈಹಿಕ ಸಂಬಂಧಕ್ಕೆ ಒತ್ತಾಯಿಸಲು ಪ್ರೇರೇಪಣೆ ನೀಡುವುದಿಲ್ಲ. ಪ್ರಕರಣವನ್ನು ಪೊಲೀಸರು ತಖೆ ನಡೆಸಿ, ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಆರೋಪಿ ತಲೆಮರಿಸಿಕೊಂಡಿದ್ದಾನೆ. ತಾನು ಕಾನೂನು ಪಾಲಕನಾಗಿದ್ದು, ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಕೋರಿದ್ದಾನೆ. ಆದರೆ, ತಲೆಮರೆಸಿಕೊಂಡಿರುವ ಆರೋಪಿಯನ್ನು ಕಾನೂನು ಪಾಲಕನೆಂದು ಪರಿಗಣಿಸಲಾಗದು. ತನಿಖೆ ವೇಳೆ ಪೊಲೀಸರು ಸಂಗ್ರಹಿಸಿರುವ ಮಾಹಿತಿ ಪರಿಶೀಲಿಸಿದರೆ ಆರೋಪಿಯ ನೀರೀಕ್ಷಣಾ ಜಾಮೀನು ಅರ್ಜಿ ಪುರಸ್ಕರಿಸುವ ಅಗತ್ಯ ಕಾಣುವುದಿಲ್ಲ ಎಂದು ಪೀಠ ತಿಳಿಸಿದೆ.
ಪ್ರಕರಣದಲ್ಲಿ ಅರ್ಜಿದಾರ ಆರೋಪಿ, ಬ್ಲಾಕ್ಮೇಲ್ ಮಾಡಿ ತನ್ನ ಮೇಲೆ ಲೈಂಗಿಕ ದೌರ್ಜ್ಯನ್ಯ ಎಸಗಿದ್ದಾನೆ ಎಂದು ಆರೋಪಿಸಿ ಸಂತ್ರಸ್ತೆ 2025ರ ಮಾ.11ರಂದು ಪೊಲೀಸರಿಗೆ ದೂರು ನೀಡಿದ್ದಳು. ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ತಿರಸ್ಕರಿಸಿತ್ತು. ಇದರಿಂದ ಆರೋಪಿ ಹೈಕೋರ್ಟ್ ಮೆಟ್ಟಿಲೇರಿದ್ದ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ