
ಬೆಂಗಳೂರು (ಸೆ.23): ಕರ್ನಾಟಕ ರಾಜ್ಯದ ಎಲ್ಲಾ ಮಲ್ಟಿಪ್ಲೆಕ್ಸ್ಗಳು ಮತ್ತು ಚಿತ್ರಮಂದಿರಗಳಲ್ಲಿ ಸಿನಿಮಾ ಟಿಕೆಟ್ ದರವನ್ನು ₹200 ಕ್ಕೆ ಸೀಮಿತಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಹೊಂಬಾಳೆ ಫಿಲ್ಮ್ಸ್ ಸೇರಿದಂತೆ ಹಲವು ಚಿತ್ರಮಂದಿರಗಳ ಮಾಲೀಕರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಮಧ್ಯಂತರ ಆದೇಶ ನೀಡಿದೆ.
ರಾಜ್ಯ ಸರ್ಕಾರವು ಎಲ್ಲಾ ಚಿತ್ರಮಂದಿರಗಳಲ್ಲಿ ಜಿಎಸ್ಟಿ ಹೊರತುಪಡಿಸಿ, ಸಿನಿಮಾ ಟಿಕೆಟ್ ದರವನ್ನು ₹200ಕ್ಕೆ ಏಕರೂಪವಾಗಿ ನಿಗದಿಪಡಿಸಿ ಆದೇಶ ಹೊರಡಿಸಿತ್ತು. ಇದು ಸಾರ್ವಜನಿಕರ ಹಿತದೃಷ್ಟಿಯಿಂದ ಕೈಗೊಂಡ ನಿರ್ಧಾರ ಎಂದು ಸರ್ಕಾರ ತನ್ನ ಬಜೆಟ್ನಲ್ಲಿಯೂ ಘೋಷಿಸಿತ್ತು. ಆದರೆ, ಸರ್ಕಾರದ ಈ ನಿರ್ಧಾರ ಏಕಪಕ್ಷೀಯವಾಗಿದ್ದು, ಯಾವುದೇ ಸೂಕ್ತ ಅಂಕಿ-ಅಂಶಗಳನ್ನು ಪರಿಗಣಿಸದೆ ಇರುವುದು ಕಾನೂನುಬಾಹಿರ ಎಂದು ಮಲ್ಟಿಪ್ಲೆಕ್ಸ್ ಮಾಲೀಕರು ಮತ್ತು ಚಲನಚಿತ್ರ ನಿರ್ಮಾಪಕರು ಆಕ್ಷೇಪ ವ್ಯಕ್ತಪಡಿಸಿದ್ದರು.
ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಮುಕುಲ್ ರೋಹ್ಟಗಿ ಮತ್ತು ಧ್ಯಾನ್ ಚಿನ್ನಪ್ಪ ವಾದ ಮಂಡಿಸಿದರು. ಅವರು,'ಚಿತ್ರಮಂದಿರ ಮತ್ತು ಮಲ್ಟಿಪ್ಲೆಕ್ಸ್ ನಡೆಸಲು ಮತ್ತು ಉತ್ತಮ ಗುಣಮಟ್ಟದ ಚಲನಚಿತ್ರಗಳನ್ನು ನಿರ್ಮಿಸಲು ಭಾರಿ ಶ್ರಮ ಹಾಗೂ ಬಂಡವಾಳ ಬೇಕಾಗುತ್ತದೆ. ಸರ್ಕಾರದ ಈ ನಿಯಮ ಕಾನೂನುಬಾಹಿರವಾಗಿದ್ದು, ಸಿನಿಮಾದ ಹೂಡಿಕೆಗೆ ನಿರ್ಬಂಧ ಹೇರುವಂತಿದೆ' ಎಂದು ವಾದಿಸಿದರು.
ಸರ್ಕಾರದ ಪರವಾಗಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಇಸ್ಮಾಯಿಲ್ ಜಬೀವುಲ್ಲಾ ಅವರು ವಾದ ಮಂಡಿಸಿ, 'ಸಾರ್ವಜನಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಟಿಕೆಟ್ ದರ ನಿಗದಿ ಮಾಡಲಾಗಿದೆ. ಈ ಬಗ್ಗೆ ಬಜೆಟ್ನಲ್ಲಿಯೂ ಘೋಷಣೆ ಮಾಡಲಾಗಿತ್ತು' ಎಂದು ತಿಳಿಸಿದರು.
ವಾದ-ಪ್ರತಿವಾದಗಳನ್ನು ಆಲಿಸಿದ ನಂತರ, ನ್ಯಾಯಾಲಯ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ಟಿಕೆಟ್ ದರವನ್ನು ₹200ಕ್ಕೆ ಸೀಮಿತಗೊಳಿಸಿ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ತಡೆ ನೀಡಿ ಮಧ್ಯಂತರ ಆದೇಶ ನೀಡಿದೆ. ಇದರಿಂದಾಗಿ ಚಿತ್ರಮಂದಿರ ಮಾಲೀಕರಿಗೆ ತಾತ್ಕಾಲಿಕವಾಗಿ ದೊಡ್ಡ ರಿಲೀಫ್ ದೊರೆತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ