
ಬೆಂಗಳೂರು (ಜೂ.26): ಜನೌಷಧ ಕೇಂದ್ರಗಳಲ್ಲಿ ಯಾವುದೇ ಖಾಸಗಿ ಕಂಪನಿಯ ಔಷಧಗಳನ್ನು ನೇರವಾಗಿ ಮಾರಾಟ ಮಾಡಲು ಅವಕಾಶ ಇರುವುದಿಲ್ಲ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ.
ಆರೋಗ್ಯ ಇಲಾಖೆಯ ಅಥವಾ ನಿಗದಿತ ಮಾನದಂಡಗಳ ಪ್ರಕಾರವೇ ಕಂಪನಿಗಳು ಔಷಧಗಳನ್ನು ಮಾರಾಟ ಮಾಡಬೇಕು. ಜನೌಷಧ ಕೇಂದ್ರಗಳಲ್ಲಿ ಕಡಿಮೆ ಬೆಲೆಗೆ ಔಷಧಗಳು ದೊರೆಯುತ್ತವೆ ಎಂಬ ಕಾರಣಕ್ಕೆ ಬಡವರು, ಮುಗ್ಧರು ಹೋಗುತ್ತಾರೆ. ಆದರೆ, ಇಲ್ಲಿ ಸರ್ಕಾರದ ಮಾನದಂಡಗಳಿಗೆ ಅನುಗುಣವಾಗಿ ಇಲ್ಲದಂತಹ ಔಷಧಗಳನ್ನು ಮಾರಾಟ ಮಾಡಿ ಜನರನ್ನು ತಪ್ಪುದಾರಿಗೆಳೆಯುವ ಕೆಲಸ ಆಗಬಾರದು ಎಂದರು. ಇದೇ ವೇಳೆ, ರಾಜ್ಯದಲ್ಲಿ ‘108 ಆರೋಗ್ಯ ಕವಚ’ ಯೋಜನೆಯಡಿ ಆಂಬುಲೆನ್ಸ್ ಸೇವೆ ಬಲಪಡಿಸಲು ಆದ್ಯತೆ ನೀಡಲಾಗಿದೆ ಎಂದರು.
ರಾಷ್ಟ್ರೀಯ ಮಾನದಂಡದ ಪ್ರಕಾರ ಆಂಬ್ಯುಲೆನ್ಸ್ ರೋಗಿಯನ್ನು ಚಿಕಿತ್ಸಾ ಕೇಂದ್ರಕ್ಕೆ ಕರೆದೊಯ್ಯುವ ಸಮಯದ ಮಿತಿ (ಗೋಲ್ಡನ್ ಅವರ್) 20 ನಿಮಿಷವಿದೆ. ವಿವಿಧ ಕಾರಣಗಳಿಂದ ಈ ಸಮಯದ ಮಿತಿಯೊಳಗೆ ರೋಗಿಯನ್ನು ಕರೆದೊಯ್ಯಲು ರಾಜ್ಯದಲ್ಲಿ ಸಾಧ್ಯವಾಗುತ್ತಿರಲಿಲ್ಲ. ಈಗ ವ್ಯವಸ್ಥೆಯಲ್ಲಿ ಕೆಲ ಬದಲಾವಣೆ ಮಾಡಿ, 10 ನಿಮಿಷಗಳ (ಪ್ಲಾಟಿನಂ ಅವರ್) ಮಿತಿಯನ್ನು ಗೊತ್ತುಪಡಿಸಲಾಗುತ್ತಿದೆ. ಆಂಬ್ಯುಲೆನ್ಸ್ ರೋಗಿಯ ಬಳಿ ತಲುಪಿದ ಬಳಿಕ ತುರ್ತು ಚಿಕಿತ್ಸೆ ಲಭ್ಯವಾಗುತ್ತದೆ ಎಂದರು.
ಶಿಶುಗಳ ಜನನ ವಿಷಯಕ್ಕೂ ನಮಗೂ ಸಂಬಂಧವಿಲ್ಲ. ಎಷ್ಟು ಜನ ಹುಟ್ಟುತ್ತಾರೋ ಅಷ್ಟು ಜನರ ಲೆಕ್ಕ ಬರುತ್ತದೆ. ನಾವು ಹೋಗಿ ಮಕ್ಕಳು ಮಾಡಿ ಎನ್ನಲಾಗಲ್ಲ. ಇದು ನಮ್ಮ ಇಲಾಖೆ ವ್ಯಾಪ್ತಿಗೆ ಬರುವುದಿಲ್ಲ ಎಂದು ಸಚಿವ ಯು.ಟಿ. ಖಾದರ್ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.
- ಇಲಾಖೆ ನಿಗದಿಪಡಿಸಿದ ಔಷಧ ಅಷ್ಟೇ ಮಾರಾಟ
- ಆರೋಗ್ಯ ಸಚಿವ ಯು.ಟಿ. ಖಾದರ್ರಿಂದ ಸ್ಪಷ್ಟನೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ