
ಬೆಂಗಳೂರು(ಆ.30): ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನಿರಾಕರಿಸಿದೆ. ಆದರೆ ಇತ್ತ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ಹುಬ್ಬಳ್ಳಿ ಧಾರವಾಡ ಪಾಲಿಕೆ ಗಣೇಶೋತ್ಸವಕ್ಕೆ ಅನುಮತಿ ನೀಡಿರುವ ನಿರ್ಧಾರವನ್ನು ಪಶ್ನಿಸಿ ಅಂಜುಮನ್ ಇಸ್ಲಾಂ ಸಂಸ್ಥೆ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಕುರಿತು ತಡರಾತ್ರಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಕಟಿಸಿದೆ. ಮುಸ್ಲಿಂ ಬೋರ್ಡ್ ಅರ್ಜಿ ತಿರಸ್ಕರಿಸಿದ ಹೈಕೋರ್ಟ್, ಗಣೇಶೋತ್ಸವಕ್ಕೆ ಅನುಮತಿ ನೀಡಿದೆ. ಹೈಕೋರ್ಟ್ ತೀರ್ಪು ಹೊರಬೀಳುತ್ತಿದ್ದಂತೆ ಹಿಂದೂ ಸಂಘಟನೆಗಳ ಸಂಭ್ರಮ ಮುಗಿಲು ಮುಟ್ಟಿದೆ. ಸಿಹಿ ಹಂಚಿ ಸಂಭ್ರಮ ಆಚರಿಸಿದ್ದಾರೆ.
ಕೆಲವು ಹಿಂದೂಪರ ಸಂಘಟನೆಗಳು ಈ ಬಾರಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕು ಎಂದು ಈ ತಿಂಗಳ ಆರಂಭದಲ್ಲೇ ಪಾಲಿಕೆಗೆ ಮನವಿ ಸಲ್ಲಿಸಿದ್ದವು. ಇದಕ್ಕೆ ಕಾಂಗ್ರೆಸ್ ಸೇರಿದಂತೆ ವಿವಿಧ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಈ ಹಿನ್ನಲೆಯಲ್ಲಿ ಪಾಲಿಕೆ ಐವರು ಸದಸ್ಯರ ಸದನ ಸಮಿತಿ ರಚಿಸಿತ್ತು. ಸಮಿತಿಯ ವರದಿ ಆದರಿಸಿ ಮೇಯರ್ ಈರೇಶ್ ಅಂಚಟಗೇರಿ ಗಣೇಶೋತ್ಸವಕ್ಕೆ ಅನುಮತಿ ನೀಡಿದ್ದರು. ಈ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್ ಮೇಟ್ಟಿಲೇರಲಾಗಿತ್ತು.
200 ವರ್ಷದಿಂದ ಇಲ್ಲದ ಗಣೇಶೋತ್ಸವ ಈಗ ಯಾಕೆ? ಈದ್ಗಾ ಮೈದಾನದಲ್ಲಿ ಯಥಾ ಸ್ಥಿತಿಗೆ ಸುಪ್ರೀಂ ಆದೇಶ!
3 ದಿನ ಗಣೇಶ ಪ್ರತಿಷ್ಠಾಪನೆ ಮಾಡಲು ಒಪ್ಪಿಗೆ ಸೂಚಿರುವ ಪಾಲಿಕೆ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಕೇಳಿ ಅರ್ಜಿ ಸಲ್ಲಿಸಿರುವ ಆರು ಸಂಘಟನೆಗಳಲ್ಲಿ ಒಂದು ಸಂಘಟನೆಗೆ ಅನುಮತಿ ನೀಡಿದೆ. ಇದೀಗ ಪಾಲಿಕೆಯ ಈ ನಿರ್ಧಾರವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನಡೆಯುವ ಸ್ಥಳದಲ್ಲೇ ಗಣೇಶನನ್ನು ಪ್ರತಿಷ್ಠಾಪಿಸಬೇಕು. ಮೂರು ದಿನಗಳ ಕಾಲ ಪೂಜೆ, ಪುನಸ್ಕಾರ, ಧಾರ್ಮಿಕ ಕಾರ್ಯಕ್ರಮ ನಡೆಸಬಹುದು. ಆದರೆ ಡಿಜೆ ಬಳಸುವಂತಿಲ್ಲ. ಉಳಿದ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಅನ್ವಯವಾಗುವ ನಿಯಮಗಳೇ ಇಲ್ಲೂ ಅನ್ವಯವಾಗುತ್ತವೆ. ಅವುಗಳನ್ನು ಗಣೇಶ ಪ್ರತಿಷ್ಠಾಪಿಸುವ ಮಂಡಳಿ ಸರಿಯಾಗಿ ಪಾಲಿಸಬೇಕು ಎಂದು ತಿಳಿಸಲಾಗಿದೆ. ಪ್ರತಿ ವರ್ಷ ಇಲ್ಲಿ ಗಣೇಶನ ಪ್ರತಿಷ್ಠಾಪನೆಗೆ ಅವಕಾಶ ದೊರೆಯಲಿದೆ. ಇದು ಮೊದಲ ವರ್ಷವಾಗಿರುವುದರಿಂದ 3 ದಿನಗಳ ಕಾಲದ ಅನುಮತಿ ನೀಡಲಾಗಿದೆ ಅಷ್ಟೇ. ಮುಂದಿನ ವರ್ಷ ಎಷ್ಟುದಿನದ ಪ್ರತಿಷ್ಠಾಪನೆ ಮಾಡಬೇಕು ಎಂಬುದನ್ನು ಆಗ ನಿರ್ಧರಿಸಲಾಗುವುದು. ಆದರೆ ಇನ್ನು ಮುಂದೆ ಪ್ರತಿವರ್ಷ ಗಣೇಶನ ಪ್ರತಿಷ್ಠಾಪನೆಗೆ ಮತ್ತೆ ಸದನ ಸಮಿತಿ ಮಾಡುವ ಅಗತ್ಯ ಬೀಳುವುದಿಲ್ಲ. ಇದೇ ನಿಯಮ ಪಾಲಿಸಿಕೊಂಡು ಹೋಗಲಾಗುವುದು ಎಂದು ಮೇಯರ್ ಅಂಚಟಗೇರಿ ಇದೇ ವೇಳೆ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ