
ಬೆಂಗಳೂರು(ಅ.02): ಅಪರೂಪದ ಬೆನ್ನುಮೂಳೆ ಸ್ನಾಯುಗಳ ಕ್ಷೀಣತೆ ಕಾಯಿಲೆಯಿಂದ ಬಳಲುತ್ತಿರುವ ನಗರದ ಒಂದೂವರೆ ವರ್ಷದ ಮಗು ಎನ್. ಜನೀಶ್ನನ್ನು ಆರೋಗ್ಯ ತಪಾಸಣೆಗಾಗಿ ತಕ್ಷಣವೇ ನಗರದ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ (ಐಜಿಐಸಿಎಚ್) ವೈದ್ಯರ ಬಳಿಗೆ ಕರೆದೊಯ್ಯಬೇಕು ಎಂದು ಮಗುವಿನ ಪಾಲಕರಿಗೆ ಹೈಕೋರ್ಟ್(High Court) ಶುಕ್ರವಾರ ನಿರ್ದೇಶಿಸಿದೆ.
ಜನೀಶ್ ಚಿಕಿತ್ಸೆಗೆ(Treatment) ಆರ್ಥಿಕ ನೆರವು ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸುವಂತೆ ಕೋರಿ ಮಗುವಿನ(Child) ತಂದೆ ನವೀನ್ ಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರು ಈ ನಿರ್ದೇಶನ ನೀಡಿದರು.
ಹೈಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರದ ಪರ ವಕೀಲರು ಶುಕ್ರವಾರ ಮೆಮೊ ಸಲ್ಲಿಸಿ, ಮಗುವನ್ನು ತಪಾಸಣೆಗಾಗಿ ಐಜಿಐಸಿಎಚ್ಗೆ ಕರೆದೊಯ್ಯಬಹುದು. ಅಲ್ಲಿನ ವೈದ್ಯ ಡಾ. ಜಿ.ಎನ್. ಸಂಜೀವ್ ಮಗುವಿನ ಆರೋಗ್ಯ ಸ್ಥಿತಿ ಕುರಿತು ತಪಾಸಣೆ ನಡೆಸಿ, ತಜ್ಞರ ಸಮಿತಿಗೆ ವರದಿ ಸಲ್ಲಿಸುತ್ತಾರೆ. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಬಹುದು ಎಂದು ವಿವರಿಸಿದರು.
ಹೈಕೋರ್ಟ್ಗೇ ಸವಾಲು ಹಾಕಿದ ವಕೀಲನಿಗೆ 50,000 ದಂಡ..!
ಅದನ್ನು ಪರಿಗಣಿಸಿದ ಪೀಠ, ಮಗುವನ್ನು ಶುಕ್ರವಾರವೇ ವೈದ್ಯ ಜಿ.ಎನ್. ಸಂಜೀವ್ ಅವರ ಬಳಿ ಕರೆದೊಯ್ಯಬೇಕು. ಮಗುವಿನ ಪಾಲಕರು ಅಥವಾ ಪೋಷಕರು ಕೂಡಲೇ ವೈದ್ಯರನ್ನು ಇ-ಮೇಲ್ ಅಥವಾ ದೂರವಾಣಿ ಕರೆ ಮೂಲಕ ಸಂಪರ್ಕಿಸಬೇಕು. ವೈದ್ಯರು ತಕ್ಷಣವೇ ಸಕಾರಾತ್ಮಕವಾಗಿ ಸ್ಪಂದಿಸಬೇಕು. ವೈದ್ಯರು ಸೂಕ್ತವಾಗಿ ಸ್ಪಂದಿಸದಿದ್ದರೆ ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಹಾಗೆಯೇ, ಅರ್ಜಿಯಲ್ಲಿನ ಪ್ರತಿವಾದಿಗಳ ವಿಳಂಬದಿಂದ ಮಗುವಿನ ಜೀವಕ್ಕೆ ಅಪಾಯವಾದರೆ, ಅದಕ್ಕೆ ಅವರೇ ಹೊಣೆಯಾಗಲಿದ್ದಾರೆ ಎಂದು ಎಚ್ಚರಿಸಿತು.
ಜನೀಶ್ ಅಪರೂಪದ ಬೆನ್ನುಮೂಳೆ ಸ್ನಾಯುಗಳ ಕ್ಷೀಣತೆ (ಸ್ಪೈನಲ್ ಮಸ್ಕುಲರ್ ಆಸ್ಟೊರಫಿ ಟೈಪ್-1) ಕಾಯಿಲೆಯಿಂದ ಬಳಲುತ್ತಿದ್ದು, ಭಾರತದಲ್ಲಿ ಔಷಧ ಲಭ್ಯವಿಲ್ಲ. ಚಿಕಿತ್ಸೆಗೆ ಅತ್ಯವಿರುವ ಜೊಲ್ಗೆನಿಸ್ಮ ಚುಚ್ಚುಮದ್ದನ್ನು ಅಮೆರಿಕದಿಂದಲೇ ಆಮದು ಮಾಡಿಕೊಳ್ಳಬೇಕಿದೆ. ಅದಕ್ಕಾಗಿ ಸುಮಾರು 16 ಕೋಟಿ ರು. ಖರ್ಚು ಬರುತ್ತದೆ. ಸಾರ್ವಜನಿಕರು ಹಿತೈಷಿಗಳು ಹಾಗೂ ದಾನಿಗಳ ಮೂಲಕ 8.24 ಕೋಟಿ ರು. ಸಂಗ್ರಹಿಸಿದ್ದು, ಉಳಿದ 7.76 ಕೋಟಿ ರು. ಅಗತ್ಯವಿದೆ. 17 ತಿಂಗಳ ಮಗುವಿನ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದ್ದು, 18ರಿಂದ 24 ತಿಂಗಳ ತುಂಬುವುದರೊಳಗೆ ಚಿಕಿತ್ಸೆ ಕೊಡಿಸಬೇಕು. ಇಲ್ಲವಾದರೆ ಜೀವಕ್ಕೆ ಅಪಾಯವಿದೆ. ಇದರಿಂದ ಮಗುವಿನ ಚಿಕಿತ್ಸೆ ಮೇಲ್ವಿಚಾರಣೆಗೆ ವೈದ್ಯಕೀಯ ಮಂಡಳಿ ರಚಿಸಬೇಕು. ಆ ಮಂಡಳಿ ವತಿಯಿಂದಲೇ ಚಿಕಿತ್ಸೆ ಕೊಡಿಸಬಹುದು. ಇಲ್ಲವೆ ಚಿಕಿತ್ಸೆಗೆ ಅಗತ್ಯವಿರುವ ಬಾಕಿ ಹಣವನ್ನು ಕೂಡಲೇ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ