
ಬೆಂಗಳೂರು(ಜೂ.18): ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಲು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಕುರಿತ ವಿಚಾರಣೆಗಾಗಿ ಜೂ.24ರಂದು ಖುದ್ದು ಹಾಜರಾಗಬೇಕು ಎಂದು ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಸೂಚಿಸಿದೆ.
ಪ್ರಜ್ವಲ್ ಆಯ್ಕೆ ಪ್ರಶ್ನಿಸಿ ಪರಾಜಿತ ಬಿಜೆಪಿ ಅಭ್ಯರ್ಥಿ ಎ.ಮಂಜು ಮತ್ತು ಜಿ.ದೇವರಾಜೇ ಗೌಡ ಸಲ್ಲಿಸಿರುವ ಪ್ರತ್ಯೇಕ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರು ಈ ಸೂಚನೆ ನೀಡಿದರು.
ಗಾಂಧಿಯನ್ನೇ ಬಿಟ್ಟಿಲ್ಲ ನಿಮ್ಮನ್ನು ಬಿಡುತ್ತಾ ಬಿಜೆಪಿ?: ಪ್ರಜ್ವಲ್ ರೇವಣ್ಣ
ಪ್ರಜ್ವಲ್ ವಿರುದ್ಧ ಆರೋಪ ಏನು?:
ವಿಚಾರಣೆ ವೇಳೆ ಅರ್ಜಿದಾರ ಜಿ. ದೇವರಾಜೇಗೌಡ ಸಾಕ್ಷ್ಯ ನುಡಿದು, ಪ್ರಜ್ವಲ್ ರೇವಣ್ಣ ಅವರು ಬೇನಾಮಿಗಳ ಹೆಸರಿನಲ್ಲಿ ಆಸ್ತಿ ಸಂಪಾದನೆ ಮಾಡಿದ್ದಾರೆ. ಆದಾಯ ತೆರಿಗೆ ವಂಚಿಸಿದ್ದಾರೆ. ಹೊಳೆನರಸೀಪುರದಲ್ಲಿ ಅವರ ಒಡೆತನದಲ್ಲಿರುವ ಚೆನ್ನಾಂಬಿಕ ಕನ್ವೆನ್ಶನ್ ಸೆಂಟರ್ ಕಟ್ಟಡ ಕನಿಷ್ಠ 5 ಕೋಟಿ ರು. ಬೆಲೆ ಬಾಳುತ್ತದೆ. ಆದರೆ, ಚುನಾವಣಾ ಆಯೋಗಕ್ಕೆ ನಾಮಪತ್ರದೊಂದಿಗೆ ಸಲ್ಲಿಸಿದ್ದ ಪ್ರಮಾಣ ಪತ್ರದಲ್ಲಿ ಕಟ್ಟಡದ ಮೌಲ್ಯವನ್ನು ಕೇವಲ 14 ಲಕ್ಷ ರು. ಎಂಬುದಾಗಿ ತೋರಿಸಲಾಗಿದೆ. ಬೆಂಗಳೂರಿನ ಮಿನರ್ವ ಸರ್ಕಲ್ ಶಾಖೆಯ ಕರ್ನಾಟಕ ಬ್ಯಾಂಕ್ ಖಾತೆಯಲ್ಲಿ 48 ಲಕ್ಷ ರು. ಹೊಂದಿದ್ದರೂ ಕೇವಲ 5 ಲಕ್ಷ ರು. ಇರುವುದಾಗಿ ತಿಳಿಸಲಾಗಿದೆ ಎಂದು ಆರೋಪಿಸಿದರು.
ದೇವರಾಜೇಗೌಡ ಅವರ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ, ಮುಂದಿನ ವಿಚಾರಣೆಯನ್ನು ಜೂ.24ಕ್ಕೆ ನಿಗದಿಪಡಿಸಿತು. ಅಂದು ಪ್ರಜ್ವಲ್ ರೇವಣ್ಣ ಅವರು ವಿಚಾರಣೆಗೆ ಹಾಜರಿರಬೇಕು ಎಂದು ಸೂಚಿಸಿತು. ಮತ್ತೊಬ್ಬ ಅರ್ಜಿದಾರ ಎ.ಮಂಜು ಅವರು ಸಹ ವಿಚಾರಣೆಗೆ ಶುಕ್ರವಾರ ಹಾಜರಾಗಿದ್ದು, ಅವರನ್ನೂ ಮುಖ್ಯ ವಿಚಾರಣೆಗೆ ಒಳಪಡಿಸಲಾಗುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ