ಮಹಿಳಾ ನೌಕರರಿಗೆ ಬ್ಯಾಡ್ ನ್ಯೂಸ್: ಮುಟ್ಟಿನ ರಜೆಗೆ ಹೈಕೋರ್ಟ್ ತಡೆ: ಸರ್ಕಾರದ ಆದೇಶಕ್ಕೆ ಹಿನ್ನಡೆ?

Published : Dec 09, 2025, 12:17 PM IST
Menstrual Leave stay

ಸಾರಾಂಶ

ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ವೇತನ ಸಹಿತ ರಜೆ ನೀಡುವ ರಾಜ್ಯ ಸರ್ಕಾರದ ನವೆಂಬರ್ 20ರ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ಆದೇಶಕ್ಕೆ ಮುನ್ನ ಸಂಘಟನೆಗಳ ಅಭಿಪ್ರಾಯ ಪಡೆಯದಿರುವ ಬಗ್ಗೆ ಕೋರ್ಟ್‌ ಪ್ರಶ್ನಿಸಿದೆ.

ಬೆಂಗಳೂರು (ಡಿ.09): ರಾಜ್ಯ ಸರ್ಕಾರವು ಮಹಿಳಾ ನೌಕರರಿಗೆ ಋತುಚಕ್ರದ (ಮುಟ್ಟಿನ) ಅವಧಿಯಲ್ಲಿ ಒಂದು ದಿನದ ವೇತನಸಹಿತ ರಜೆ ನೀಡುವ ಕುರಿತು ಹೊರಡಿಸಿದ್ದ ಮಹತ್ವದ ಅಧಿಸೂಚನೆಗೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಬೆಂಗಳೂರು ಹೋಟೆಲುಗಳ ಸಂಘ (ರಿ) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ನ್ಯಾಯಪೀಠವು, ಸರ್ಕಾರದ ಅಧಿಸೂಚನೆಗೆ ತಡೆ ನೀಡಿ ಮುಂದಿನ ವಿಚಾರಣೆಯನ್ನು ಮುಂದೂಡಿದೆ.

ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯು 2025ರ ನವೆಂಬರ್ 20ರಂದು ಈ ಕುರಿತು ಅಧಿಸೂಚನೆ ಹೊರಡಿಸಿ, ಮುಟ್ಟಿನ ರಜೆಯನ್ನು ಜಾರಿಗೊಳಿಸಲು ಮುಂದಾಗಿತ್ತು. ಆದರೆ, ಈ ಆದೇಶದಿಂದ ಹೋಟೆಲ್‌ ಉದ್ಯಮಕ್ಕೆ ತೀವ್ರ ಸಮಸ್ಯೆ ಉಂಟಾಗುತ್ತದೆ ಎಂದು ಬೆಂಗಳೂರು ಹೋಟೆಲುಗಳ ಸಂಘವು (ರಿ) ಹೈಕೋರ್ಟ್‌ ಮೊರೆ ಹೋಗಿತ್ತು.

ಹೈಕೋರ್ಟ್‌ನಿಂದ ಸರ್ಕಾರದ ಆದೇಶಕ್ಕೆ ತಡೆ ಏಕೆ?

ಅರ್ಜಿ ವಿಚಾರಣೆ ವೇಳೆ, ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, 'ಯಾವುದೇ ಕಾಯ್ದೆಯಲ್ಲಿ ಉಲ್ಲೇಖವಿಲ್ಲದ ನಿಯಮವನ್ನು ರಾಜ್ಯ ಸರ್ಕಾರವು ಏಕಪಕ್ಷೀಯ ಆದೇಶದ ಮೂಲಕ ಜಾರಿಗೆ ತರಲು ಹೊರಟಿದೆ. ಈ ಏಕಪಕ್ಷೀಯ ಆದೇಶದಿಂದ ಹೋಟೆಲ್ ಉದ್ಯಮಕ್ಕೆ ಗಂಭೀರ ಸಮಸ್ಯೆ ಎದುರಾಗುತ್ತದೆ. ಆದೇಶ ಹೊರಡಿಸುವ ಮುನ್ನ ಯಾವುದೇ ಸಂಘ-ಸಂಸ್ಥೆಗಳ ಅಭಿಪ್ರಾಯವನ್ನು ಸರ್ಕಾರ ಪಡೆದಿಲ್ಲ' ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಈ ವಾದವನ್ನು ಆಲಿಸಿದ ನ್ಯಾಯಾಲಯ, 'ಸರ್ಕಾರದ ಆದೇಶಕ್ಕೆ ಮುನ್ನ ಸಂಬಂಧಿತ ಸಂಘಟನೆಗಳ ಅಭಿಪ್ರಾಯ ಪಡೆಯಲಾಗಿತ್ತೇ?' ಎಂದು ನೇರವಾಗಿ ಪ್ರಶ್ನಿಸಿತು. ಇದಕ್ಕೆ, ಹೋಟೆಲ್‌ ಅಸೋಸಿಯೇಷನ್ ಪರ ವಕೀಲರು 'ಇಲ್ಲ' ಎಂದು ಉತ್ತರಿಸಿದರು. ಈ ಹಿನ್ನೆಲೆಯಲ್ಲಿ, ಹೈಕೋರ್ಟ್‌ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಪ್ರಶ್ನಿಸಿ, ಮುಂದಿನ ವಿಚಾರಣೆ ನಡೆಯುವವರೆಗೆ ಆದೇಶಕ್ಕೆ ತಡೆಯಾಜ್ಞೆ ನೀಡಿತು.

ಸರ್ಕಾರಕ್ಕೆ ನೋಟಿಸ್‌ ಜಾರಿ; ಮಾರ್ಪಾಡಿಗೆ ಅವಕಾಶ

ನ್ಯಾಯಾಲಯವು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರದ ಪರ ವಕೀಲರಿಗೆ ನೋಟಿಸ್ ಜಾರಿ ಮಾಡಿದೆ. ಆದಾಗ್ಯೂ, ಮಧ್ಯಂತರ ತಡೆ ಆದೇಶವನ್ನು ಮಾರ್ಪಾಡು ಮಾಡುವಂತೆ ಕೋರಿ ಸರ್ಕಾರವು ನ್ಯಾಯಾಲಯಕ್ಕೆ ಮನವಿ ಸಲ್ಲಿಸುವುದಕ್ಕೆ ಸ್ವಾತಂತ್ರ್ಯವಿದೆ ಎಂದು ನ್ಯಾಯಪೀಠವು ಸ್ಪಷ್ಟಪಡಿಸಿದೆ. ಕಾರ್ಮಿಕ ಕಲ್ಯಾಣ ದೃಷ್ಟಿಯಿಂದ ಸರ್ಕಾರ ಹೊರಡಿಸಿದ್ದ ಈ ಪ್ರಗತಿಪರ ಆದೇಶವು, ತಾಂತ್ರಿಕ ಮತ್ತು ಕಾನೂನಾತ್ಮಕ ಅಡೆತಡೆಗಳಿಂದಾಗಿ ತಾತ್ಕಾಲಿಕವಾಗಿ ಜಾರಿಯಾಗುವುದಕ್ಕೆ ಹಿನ್ನಡೆ ಕಂಡಂತಾಗಿದೆ. ಅಂತಿಮವಾಗಿ ಸರ್ಕಾರದ ಕ್ರಮ ಕಾನೂನಿನ ಚೌಕಟ್ಟಿನಲ್ಲಿದೆಯೇ ಅಥವಾ ಇಲ್ಲವೇ ಎಂಬುದನ್ನು ಕೋರ್ಟ್ ಮುಂದಿನ ವಿಚಾರಣೆಯಲ್ಲಿ ನಿರ್ಧರಿಸಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಕೆಸು ಹೆಸರಿನಲ್ಲಿ ಕೋಟ್ಯಂತರ ವಂಚನೆ ಪ್ರಕರಣ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ