
ಉಡುಪಿ (ಆ.15): ರಾಜ್ಯದ ಕರಾವಳಿ ತೀರ, ನೈಸರ್ಗಿಕ ತಾಣ ಹಾಗೂ ಧಾರ್ಮಿಕ ಕ್ಷೇತ್ರವೂ ಆಗಿರುವ ಉಡುಪಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಆದ್ಯತೆಯ ಮೇಲೆ ಕಲ್ಪಿಸಬೇಕು. ಈಗಾಗಲೇ ಜಿಲ್ಲೆಯಲ್ಲಿ 48 ಪ್ರವಾಸಿ ತಾಣಗಳನ್ನು ಗುರುತಿಸಲಾಗಿದೆ. ಇನ್ನೂ ಹೊಸದಾಗಿ 32 ಪ್ರವಾಸಿ ತಾಣಗಳನ್ನು ಸೇರ್ಪಡೆಗೊಳಿಸಿ ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ನೀಡಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ಅಧಿಕಾರಿಗಳೊಂದಿಗೆ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆಸಿದ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯ ಪ್ರಕೃತಿ ಸೌಂದರ್ಯ, ಧಾರ್ಮಿಕ ಕೇಂದ್ರಗಳು ಪ್ರವಾಸಿಗರನ್ನು ಕೈ ಬೀಸಿ ಕರೆಯುವಂತಿದೆ ಇಲ್ಲಿನ ಪ್ರವಾಸಿತಾಣಗಳ ಅಭಿವೃಧ್ದಿಗೆ ಹೆಚ್ಚಿನ ಒತ್ತು ನೀಡಬೇಕು ಆಗಮಿಸುವ ಪ್ರವಾಸಿಗರಿಗೆ ಕುಡಿಯುವ ನೀರಿನ ಸೌಲಭ್ಯ, ಶೌಚಾಲಯ, ವಾಹನಗಳ ಪಾರ್ಕಿಂಗ್, ಸೇರಿದಂತೆ ಮತ್ತಿತರ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಸೂಚಿಸಿದರು.
ಲೋಡ್ ಶೆಡ್ಡಿಂಗ್ ಆರಂಭ, ಕತ್ತಲೆಯಲ್ಲಿ ಮುಳುಗಲಿದೆ ಕರ್ನಾಟಕ: ಗೃಹ ಸಚಿವ ಪರಮೇಶ್ವರ್
ಜಿಲ್ಲೆಯ ಪ್ರವಾಸಿ ಕೇಂದ್ರಗಳಲ್ಲಿ ಪ್ರವಾಸಿಗರ ಸುರಕ್ಷತೆಗೆ ಸೂಚನಾ ಫಲಕಗಳನ್ನು ಅಳವಡಿಸುವುದರ ಜೊತೆಗೆ ಪ್ರವಾಸಿ ಮಿತ್ರರನ್ನು ನಿಯೋಜಿಸಿ ಅಪಘಾತಗಳು ಆಗದಂತೆ ನೋಡಿಕೊಳ್ಳಬೇಕು. ಹೊರಗಿನಿಂದ ಬರುವ ಪ್ರವಾಸಿಗರು ಹೆಚ್ಚಾಗಿ ಮಲ್ಪೆ, ಕಾಪು, ಮರವಂತೆ ಬೀಚ್ ಗಳಿಗೆ ಭೇಟಿ ನೀಡುತ್ತಿದ್ದು, ವಾರಾಂತ್ಯದಲ್ಲಿ ಜನದಟ್ಟಣೆ ಹೆಚ್ಚಿರುತ್ತದೆ. ಇದಲ್ಲದೇ ಇನ್ನೂ ಅನೇಕ ಕಡಲತೀರಗಳು ಸುಂದರವಾಧ ಪ್ರಕೃತಿ ಸೌಂದರ್ಯ ಹೊಂದಿವೆ. ಇವುಗಳ ಬಗ್ಗೆ ಹೆಚ್ಚಿನ ಪ್ರಚಾರ ನೀಡಿ ಜನರು ಭೇಟಿ ನೀಡುವಂತೆ ನೋಡಿಕೊಳ್ಳಬೇಕು ಎಂದರು.
ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಅಭಿವೃದ್ದಿಯಿಂದ ಸ್ಥಳಿಯ ಜನರಿಗೆ ಉದ್ಯೋಗವಕಾಶ ಕಲ್ಪಸುವುದರ ಜೊತೆಗೆ ಆರ್ಥಿಕ ಸ್ವಾವಲಂಬಿಗಳಾಗಲು ಸಹಾಯವಾಗುತ್ತದೆ. ಜಿಲ್ಲೆಯಲ್ಲಿ ಈಗಾಗಲೇ 48 ಪ್ರವಾಸಿ ತಾಣಗಳೆಂದು ಗುರುತಿಸಲಾಗಿದೆ. ಇನ್ನೂ 32 ಪ್ರವಾಸಿ ತಾಣಗಳು ಹೊಸದಾಗಿ ಸೇರ್ಪಡೆಗೊಳಿಸಿ ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಪ್ರವಾಸಿ ತಾಣಗಳ ಅಭಿವೃಧ್ದಿಗೆ ಸರ್ಕಾರ ನೀಡಿರುವ ಅನುದಾನಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವುದರೊಂದಿಗೆ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು. ಒಂದೊಮ್ಮೆ ಅನುದಾನದ ಕೊರತೆಯಾದಲ್ಲಿ ಸರ್ಕಾರದಿಂದ ತಾವೇ ಸ್ವತಃ ಮಂಜೂರು ಮಾಡಿಸಿಕೊಡುವುದಾಗಿ ತಿಳಿಸಿದರು.
ದಲಿತ ವಿರೋಧಿ ಹೇಳಿಕೆ: ನಟ ಉಪೇಂದ್ರ ವಿರುದ್ಧ ಎಫ್ಐಆರ್: ಸಚಿವ ಮಲ್ಲಿಕಾರ್ಜುನ ವಿರುದ್ಧ ಕೇವಲ ಎನ್ಸಿಆರ್
ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಕರ್ಯಗನ್ನು ಒಳಗೊಂಡ ಕಾಮಗಾರಿಗಳನ್ನು ಕೈಗೊಳ್ಳಲು ಸಿಆರ್ಝಡ್ ನಿಂದ ನಿರಾಕ್ಷೇಪಣಾ ಪತ್ರವನ್ನು ಶೀಘ್ರದಲ್ಲಿಯೇ ಪಡೆದು ಪೂರ್ಣಗೊಳಿಸಬೇಕು. ಪಕ್ಕದ ರಾಜ್ಯ ಗೋವಾದಲ್ಲಿ ಪ್ರವಾಸಿ ಚಟುವಟಿಕೆಗಳನ್ನು ಕೈಗೊಳ್ಳುವುದರೊಂದಿಗೆ ಹೆಚ್ಚಿನ ಜನಾಕರ್ಷಣೆಯಗಿದೆ. ಆದರೆ, ನಮ್ಮ ಜಿಲ್ಲೆಯಲ್ಲಿ ಉತ್ತಮ ಕಡಲತೀರಗಳಿದ್ದರೂ ಹೆಚ್ಚು ಪ್ರಚಲಿತವಾಗಿರುವುದಿಲ್ಲ. ಜನಾಕರ್ಷಣೀಯ ಜಲ ಸಾಹಸ ಕ್ರೀಡೆಗಳು ಸೇರಿದಂತೆ ಮತ್ತಿತರ ಪ್ರವಾಸಿ ಚಟುವಟಿಕೆಗಳನ್ನು ಅಭಿವೃಧ್ದಿಪಡಿಸಬೇಕು. ಇನ್ನು ರಾಜ್ಯದ ಪ್ರಸಾದ್ ಯೋಜನೆಯಡಿಯಲ್ಲಿ ವಿವಿಧ ಧಾರ್ಮಿಕ ಹೆರಿಟೇಜ್ ಸ್ಥಳಗಳಲ್ಲಿ ಪ್ರವಾಸಿಗರಿಗೆ ಸೌಲಭ್ಯ ಒದಗಿಸುವ ಯೋಜನೆ ಅನುಷ್ಠಾನಗೊಳಿಸಬೇಕು ಎಂದು ಸೂಚನೆ ನೀಡಿದರು.
ಈ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಾಣಧಿಕಾರಿ ಪ್ರಸನ್ನ ಹೆಚ್, ಎಸ್ಪಿ ಅಕ್ಷಯ್ ಎಂ ಹಾಕೆ , ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ