ಬೆಂಗಳೂರು (ಸೆ.5): ಬಾಗಲಕೋಟೆ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬರಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ಬಳಿಕ ಬಾಗಲಕೋಟೆಯಲ್ಲಿ ರೈತರ ಜಮೀನಿಗೆ ತೆರಳಿ ಬೆಳೆ ವೀಕ್ಷಣೆ ಮಾಡಿದರು. ಸಮೀಕ್ಷೆಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರೈತರ ಐದು ಲಕ್ಷ ರು.ವರೆಗಿನ ಸಾಲ ಮನ್ನಾ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಡಿರುವ ಆಗ್ರಹಕ್ಕೆ ಪ್ರತಿಕ್ರಿಯೆ ನೀಡಿದರು. ಸಾಲಮನ್ನಾ ಬೇಡಿಕೆ ಸರಿಯಿದೆ. ರೈತರ ಸಾಲ ಮನ್ನಾಗೆ ನೆರವು ಕೋರಿ ದೆಹಲಿಗೆ ಸರ್ವ ಪಕ್ಷ ನಿಯೋಗ ಕರೆದೊಯ್ಯುತ್ತೇವೆ. ರಾಜ್ಯ ಬಿಜೆಪಿ ನಾಯಕರು ಕೇಂದ್ರ ಸರ್ಕಾರದಿಂದ ಸಾಲಮನ್ನಾ ಮಾಡಿಸುವ ಜವಾಬ್ದಾರಿ ಹೊರಬೇಕು. ಬರಗಾಲದ ಬಗ್ಗೆ ಪ್ರಧಾನಮಂತ್ರಿಗಳೇ ಹೇಳಿದ್ದು, ಕೇಂದ್ರ ಸರ್ಕಾರ ಸಾಲಮನ್ನಾ ಮಾಡಬೇಕು. ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಇತರೆ ನಾಯಕರು ನಮ್ಮೊಂದಿಗೆ ದೆಹಲಿಗೆ ಬಂದು ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆ ಹಾಗೂ ರೈತರ ಸಾಲ ಮನ್ನಾಕ್ಕೆ ಆಗ್ರಹಿಸಬೇಕು ಎಂದಿದ್ದಾರೆ. ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್ಡೇಟ್ ಇಲ್ಲಿದೆ.
07:25 AM (IST) Sep 05
ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಪಶುವೈದ್ಯ ಹುದ್ದೆಗಳ ನೇಮಕಾತಿ ಅಕ್ರಮದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಕೆಪಿಎಸ್ಸಿ ಸದಸ್ಯರಾದ ನಂತರ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೂರಾರು ಎಕರೆ ಜಮೀನು ಖರೀದಿಸಿದ್ದಾರೆ.
07:15 AM (IST) Sep 05
ಉಡುಪಿಯ ಕೃಷ್ಣಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಭಕ್ತಿ, ಶ್ರದ್ಧೆಯಿಂದ ಆಚರಿಸಲಾಯಿತು. ಪರ್ಯಾಯ ಶೀರೂರು ಶ್ರೀಗಳು ಕೃಷ್ಣನಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಿದ್ದು, ಮಧ್ಯರಾತ್ರಿ ಅರ್ಘ್ಯ ಪ್ರದಾನ ಮಾಡಲಾಯಿತು.
06:57 AM (IST) Sep 05
ಕರ್ನಾಟಕ 2026-27ನೇ ಸಾಲಿನಲ್ಲಿ 3,767 ಸರ್ಕಾರಿ ಶಾಲೆ ಮತ್ತು ಪಿಯು ಕಾಲೇಜುಗಳಲ್ಲಿ 'ಸ್ಮಾರ್ಟ್ ಕ್ಲಾಸ್'ಗಳನ್ನು ಆರಂಭಿಸಲು ಮುಂದಾಗಿದೆ. 88.52 ಕೋಟಿ ರೂ. ವೆಚ್ಚದ ಈ ಯೋಜನೆಯು, ಡಿಜಿಟಲ್ ಶಿಕ್ಷಣ ನೀಡಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಆಧಾರಿತ ಕಲಿಕೆಯನ್ನು ಒದಗಿಸುವ ಗುರಿ ಹೊಂದಿದೆ.
06:41 AM (IST) Sep 05
ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯಲ್ಲಿ ಪಾರದರ್ಶಕತೆ ತರಲು, ದೈಹಿಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಕಾಲಿಗೆ ಚಿಪ್ ಅಳವಡಿಕೆ ಸೇರಿದಂತೆ ನಾಲ್ಕು ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದೆ.
06:24 AM (IST) Sep 05
ಹಿಂದಿಯೇತರ ರಾಜ್ಯಗಳಿಗೆ ಆಗುತ್ತಿರುವ ಉದ್ಯೋಗ ಸಂಬಂಧಿತ ಅನ್ಯಾಯದ ವಿರುದ್ಧ ಹೋರಾಡಲು ಕರ್ನಾಟಕ ಸೇರಿದಂತೆ 14 ರಾಜ್ಯಗಳು 'ಅಖಿಲ ಭಾರತ ಮಾತೃ ಭಾಷಾ ವೇದಿಕೆ'ಯನ್ನು ರಚಿಸಿವೆ.
05:58 AM (IST) Sep 05
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಾಗಲಕೋಟೆಯ ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿ, ಬೆಳೆ ಹಾನಿ ವೀಕ್ಷಿಸಿದರು. ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿದ ಬಿಜೆಪಿಗೆ, ಕೇಂದ್ರದಿಂದಲೇ ಸಾಲ ಮನ್ನಾ ಮಾಡಿಸಲು ದೆಹಲಿಗೆ ಬರುವಂತೆ ಸವಾಲು ಹಾಕಿದರು.