
ಬೆಂಗಳೂರು/ಗದಗ/ಯಾದಗಿರಿ (ಏ.27): ರಾಜ್ಯದಲ್ಲಿ ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಜನತೆಗೆ ಹವಾಮಾನ ಇಲಾಖೆ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಮುಂದಿನ ಮೂರು ಗಂಟೆಗಳಲ್ಲಿ ರಾಜ್ಯದ ಒಟ್ಟು ಎಂಟು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ರಾಜ್ಯದ ಎರಡು ಪ್ರತ್ಯೇಕ ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ:
ಹೆಚ್ಚಿನ ತೀವ್ರತೆಯ ಮಳೆ (ಗಂಟೆಗೆ 40-50 ಕಿ.ಮೀ ವೇಗದ ಗಾಳಿ):
ಚಿಕ್ಕಮಗಳೂರು, ಹಾಸನ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇಲ್ಲಿ ಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿಲೋಮೀಟರ್ ಇರಲಿದ್ದು, ಗುಡುಗು ಸಹಿತ ಮಿಂಚಿನ ಅಬ್ಬರ ಜೋರಾಗಿರಲಿದೆ.
ಸಾಧಾರಣ ಮಳೆ (ಗಂಟೆಗೆ 30-40 ಕಿ.ಮೀ ವೇಗದ ಗಾಳಿ):
ಚಾಮರಾಜನಗರ, ಮೈಸೂರು, ಬಳ್ಳಾರಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇಲ್ಲಿ ಗಾಳಿಯು ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆಯಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಉಂಟಾಗಿದ್ದು, ಧಾರಾಕಾರ ಮಳೆ ಮತ್ತು ಬಿರುಗಾಳಿ ಭಾರೀ ಅನಾಹುತಗಳನ್ನು ಸೃಷ್ಟಿಸಿದೆ. ಯಾದಗಿರಿ ಜಿಲ್ಲೆಯಲ್ಲಿ ಸಿಡಿಲು ಬಡಿದು 50ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ್ದರೆ, ಗದಗ ಜಿಲ್ಲೆಯಲ್ಲಿ ಬೃಹತ್ ಮೊಬೈಲ್ ಟವರ್ ನೆಲಕ್ಕಪ್ಪಳಿಸಿದೆ. ಈ ಬೆನ್ನಲ್ಲೇ ಹವಾಮಾನ ಇಲಾಖೆಯು ರಾಜ್ಯದ ಹಲವು ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಘೋಷಿಸಿದೆ.
ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಬೂದೂರು ಗ್ರಾಮದಲ್ಲಿ ಪ್ರಕೃತಿ ವಿಕೋಪಕ್ಕೆ ರೈತರು ತತ್ತರಿಸಿದ್ದಾರೆ. ಕುರಿಗಳನ್ನು ಮೇಯಿಸಿಕೊಂಡು ಮನೆಗೆ ಮರಳುತ್ತಿದ್ದ ವೇಳೆ ಏಕಾಏಕಿ ಸಿಡಿಲು ಬಡಿದು ಮಲ್ಲಪ್ಪ, ಆಶಪ್ಪ, ಜಾಲ್ಲಪ್ಪ, ಲಕ್ಸಮಪ್ಪ ಮತ್ತು ಹನುಮಂತ ಎಂಬ ರೈತರಿಗೆ ಸೇರಿದ 50ಕ್ಕೂ ಹೆಚ್ಚು ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ತಮ್ಮ ಜೀವನಾಧಾರವಾಗಿದ್ದ ಕುರಿಗಳ ಮಾರಣಹೋಮ ಕಂಡು ಕುರಿಗಾಹಿಗಳು ಕಣ್ಣೀರು ಹಾಕುತ್ತಿದ್ದಾರೆ. ನೊಂದ ರೈತರಿಗೆ ಸರ್ಕಾರ ತಕ್ಷಣವೇ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಸ್ಥಳೀಯ ಹೋರಾಟಗಾರರು ಆಗ್ರಹಿಸಿದ್ದಾರೆ.
ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಜಾಗೃತಿ ಸರ್ಕಲ್ ಬಳಿ ಬಿರುಗಾಳಿ ಮಳೆಯ ರಭಸಕ್ಕೆ ಏರ್ಟೆಲ್ ಮೊಬೈಲ್ ಟವರ್ವೊಂದು ಬಿಲ್ಡಿಂಗ್ ಮೇಲಿಂದ ಕೆಳಕ್ಕೆ ಬಿದ್ದಿದೆ. ಸವಣೂರು ಎಂಬುವವರಿಗೆ ಸೇರಿದ ಕಟ್ಟಡದ ಮೇಲೆ ಈ ಟವರ್ ಅಳವಡಿಸಲಾಗಿತ್ತು. ಅದೃಷ್ಟವಶಾತ್ ಟವರ್ ಬೀಳುವ ಸಮಯದಲ್ಲಿ ಜನಸಂಚಾರ ವಿರಳವಾಗಿದ್ದರಿಂದ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ. ಸ್ಥಳಕ್ಕೆ ಪೊಲೀಸರು ಮತ್ತು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ