
ಬೆಂಗಳೂರು (ಏ.22): ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಬಹುದಿನಗಳ ಕಾಯುವಿಕೆಗೆ ಕೊನೆಗೂ ತೆರೆಬಿದ್ದಿದೆ. ತೃತೀಯ ಭಾಷೆ (ಹಿಂದಿ) ಅಂಕಗಳ ಹಂಚಿಕೆ ವಿಚಾರವಾಗಿ ಸೃಷ್ಟಿಯಾಗಿದ್ದ ಕಾನೂನು ಗೊಂದಲಗಳು ಪರಿಹಾರವಾಗಿದ್ದು, ನಾಳೆಯೇ (ಗುರುವಾರ) ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ನಡೆದ ಮಹತ್ವದ ಸಭೆಯ ಬಳಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ವಿಷಯವನ್ನು ಖಚಿತಪಡಿಸಿದ್ದಾರೆ.
ತೃತೀಯ ಭಾಷೆಗೆ ಗ್ರೇಡ್ ಬದಲಾಗಿ ಅಂಕಗಳನ್ನೇ ನೀಡಬೇಕು ಎಂಬ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು. ಆದರೆ, ಅಂತಿಮವಾಗಿ ಮಕ್ಕಳ ಹಿತದೃಷ್ಟಿಯಿಂದ ಮತ್ತು ಫಲಿತಾಂಶ ವಿಳಂಬವಾಗುವುದನ್ನು ತಪ್ಪಿಸಲು ಈ ವರ್ಷ ಕೋರ್ಟ್ ಆದೇಶವನ್ನೇ ಪಾಲಿಸಲು ಸರ್ಕಾರ ನಿರ್ಧರಿಸಿದೆ. ಅದರಂತೆ, ಈ ಬಾರಿ ತೃತೀಯ ಭಾಷೆಗೆ ಅಂಕಗಳನ್ನೇ ನೀಡಲಾಗುವುದು ಹಾಗೂ ಅಂಕದ ಜೊತೆಗೆ ಗ್ರೇಡ್ ಅನ್ನೂ ನಮೂದಿಸುವ ಬಗ್ಗೆಯೂ ಸಮಾಲೋಚನೆ ನಡೆಸಲಾಗಿದೆ.
ಈ ಹಿಂದೆ ಏಪ್ರಿಲ್ 24ರಂದು ಫಲಿತಾಂಶ ಪ್ರಕಟಿಸಲು ಉದ್ದೇಶಿಸಲಾಗಿತ್ತು. ಆದರೆ, ಈಗ ಕಾನೂನು ತೊಡಕು ನಿವಾರಣೆಯಾಗಿರುವುದರಿಂದ ನಿಗದಿತ ದಿನಕ್ಕಿಂತ ಒಂದು ದಿನ ಮುಂಚಿತವಾಗಿಯೇ, ಅಂದರೆ ನಾಳೆ ಮಧ್ಯಾಹ್ನ 12 ಗಂಟೆಗೆ ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಸಭೆಯ ಬಳಿಕ ಮಾತನಾಡಿದ ಸಚಿವ ಮಧು ಬಂಗಾರಪ್ಪ, "ಕೋರ್ಟ್ ಆದೇಶದ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ವಿವರವಾಗಿ ಚರ್ಚಿಸಿದ್ದೇವೆ. ನಮಗೆ ಮಕ್ಕಳ ಭವಿಷ್ಯ ಮತ್ತು ಅವರ ಹಿತದೃಷ್ಟಿ ಅತ್ಯಂತ ಮುಖ್ಯ. ಹೀಗಾಗಿ ನ್ಯಾಯಾಲಯದ ನಿರ್ದೇಶನವನ್ನು ಗೌರವಿಸಿ ಈ ವರ್ಷ ಅಂಕಗಳನ್ನೇ ನೀಡಲು ತೀರ್ಮಾನಿಸಿದ್ದೇವೆ," ಎಂದು ಸ್ಪಷ್ಟಪಡಿಸಿದರು. ಇದರೊಂದಿಗೆ ಎಸ್ಎಸ್ಎಲ್ಸಿ ಫಲಿತಾಂಶದ ಕುರಿತಿದ್ದ ಅನಿಶ್ಚಿತತೆ ದೂರವಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ನಿಟ್ಟುಸಿರು ಬಿಡುವಂತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ