
ಬೆಂಗಳೂರು (ಮೇ 04): ಕಳೆದ ಕೆಲವು ದಿನಗಳಿಂದ ತೀವ್ರ ಬಿಸಿಲಿನ ತಾಪದಿಂದ ಬೆಂದಿದ್ದ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಮಳೆ ಮುಂದುವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತು ಹವಾಮಾನ ಇಲಾಖೆಯ ವಿಜ್ಞಾನಿ ಲತಾ ಶ್ರೀಧರ್ ಅವರು ಮಾಹಿತಿ ನೀಡಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಪ್ರಮಾಣ ಹೇಗಿರಲಿದೆ ಎಂಬುದನ್ನು ವಿವರಿಸಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಅದಾದ ಬಳಿಕ ಮಳೆಯ ತೀವ್ರತೆ ಸ್ವಲ್ಪ ಹೆಚ್ಚಾಗಲಿದ್ದು, ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ವರದಿಯಾಗಿದೆ. ಸಂಜೆ ಅಥವಾ ರಾತ್ರಿಯ ಅವಧಿಯಲ್ಲಿ ಮೋಡಕವಿದ ವಾತಾವರಣದೊಂದಿಗೆ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.
ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆದರೆ, ಮುಂದಿನ ಮೂರು ದಿನಗಳ ಬಳಿಕ ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು, 'ಭಾರೀ ಮಳೆ'ಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಕೊಡಗಿನ ಮಲೆನಾಡು ಭಾಗದಲ್ಲಿ ಮಳೆಯಿಂದಾಗಿ ತಂಪು ವಾತಾವರಣ ನಿರ್ಮಾಣವಾಗಲಿದೆ.
ದಕ್ಷಿಣ ಒಳನಾಡಿಗೆ ಹೋಲಿಸಿದರೆ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಿರಲಿದೆ. ಈ ಭಾಗಗಳಲ್ಲಿ ಮುಂದಿನ ಒಂದು ವಾರ ಹಗುರವಾದ ಮಳೆಯಾಗುವ ಮುನ್ಸೂಚನೆ ಇದೆ. ಸದ್ಯಕ್ಕೆ ಈ ಭಾಗದಲ್ಲಿ ಯಾವುದೇ ಪ್ರಕೃತಿ ವಿಕೋಪ ಅಥವಾ ಭೂಕುಸಿತದಂತಹ ಅಪಾಯದ ಮುನ್ಸೂಚನೆಗಳು ವರದಿಯಾಗಿಲ್ಲ.
ಎಲ್ಲರೂ ಕಾತರದಿಂದ ಕಾಯುತ್ತಿರುವ ಮುಂಗಾರು (Monsoon) ಪ್ರವೇಶದ ಬಗ್ಗೆಯೂ ಇಲಾಖೆ ಮಾಹಿತಿ ಹಂಚಿಕೊಂಡಿದೆ. ಸದ್ಯಕ್ಕೆ ರಾಜ್ಯಕ್ಕೆ ಮುಂಗಾರು ಎಂಟ್ರಿ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲ. ಆದರೆ, ಮೇ 15 ರಂದು ಅಂಡಮಾನ್ ನಿಕೋಬಾರ್ ದ್ವೀಪಗಳಿಗೆ ಮುಂಗಾರು ಪ್ರವೇಶಿಸಲಿದೆ. ಅದೇ ದಿನದ ಆಸುಪಾಸಿನಲ್ಲಿ ಕೇರಳಕ್ಕೆ ಮುಂಗಾರು ಯಾವಾಗ ಬರಲಿದೆ ಎಂಬ ಸ್ಪಷ್ಟ ಚಿತ್ರಣ ಸಿಗಲಿದೆ. ಕೇರಳಕ್ಕೆ ಮುಂಗಾರು ಪ್ರವೇಶಿಸಿದ ಬಳಿಕವಷ್ಟೇ ಕರ್ನಾಟಕಕ್ಕೆ ಮುಂಗಾರು ಮಳೆಯ ಆಗಮನದ ದಿನಾಂಕ ನಿಗದಿಯಾಗಲಿದೆ.
ಇತ್ತೀಚೆಗೆ ರಾಜ್ಯದ ಹಲವೆಡೆ ಆಲಿಕಲ್ಲು ಮಳೆಯಾಗುತ್ತಿರುವುದಕ್ಕೆ ವಿಜ್ಞಾನಿ ಲತಾ ಶ್ರೀಧರ್ ಕಾರಣ ನೀಡಿದ್ದಾರೆ. 'ರಾಜ್ಯದಲ್ಲಿ ತೀವ್ರವಾದ ಬಿಸಿಲು ಮತ್ತು ತಾಪಮಾನ ಏರಿಕೆಯಾದ ಹಿನ್ನೆಲೆಯಲ್ಲಿ ವಾತಾವರಣದಲ್ಲಿ ಉಂಟಾದ ಬದಲಾವಣೆಗಳಿಂದಾಗಿ ಆಲಿಕಲ್ಲು ಮಳೆಯಾಗುತ್ತಿದೆ' ಎಂದು ಅವರು ತಿಳಿಸಿದ್ದಾರೆ. ಸದ್ಯಕ್ಕೆ ಮಳೆಯಿಂದಾಗಿ ಎಲ್ಲೂ ಭೂಕುಸಿತ ಅಥವಾ ಇತರ ಗಂಭೀರ ಹಾನಿಯ ಬಗ್ಗೆ ವರದಿಗಳಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಒಟ್ಟಾರೆಯಾಗಿ, ಮುಂದಿನ ಏಳು ದಿನಗಳು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆಗಮನವಾಗಲಿದ್ದು, ಬಿಸಿಲಿನಿಂದ ಕಂಗಾಲಾಗಿದ್ದ ಜನರಿಗೆ ಮತ್ತು ರೈತರಿಗೆ ಇದು ಕೊಂಚ ನಿಮ್ಮದಿ ತರಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ