
ಬೆಂಗಳೂರು/ ಉತ್ತರ ಕನ್ನಡ (ಫೆ.05): ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಂಕಷ್ಟಕ್ಕೀಡಾಗಿದ್ದ ಕಾರವಾರದ ಶಾಸಕ ಸತೀಶ್ ಕೃಷ್ಣ ಸೈಲ್ ಅವರಿಗೆ ಕರ್ನಾಟಕ ಹೈಕೋರ್ಟ್ ಗುರುವಾರ ಮಹತ್ವದ ರಿಲೀಫ್ ನೀಡಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಶಾಸಕರಿಗೆ ಲಿವರ್ ಕಸಿ (Liver Transplant) ಚಿಕಿತ್ಸೆಗಾಗಿ ವೈದ್ಯಕೀಯ ಜಾಮೀನು ಮಂಜೂರು ಮಾಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಕಾರವಾರ ಶಾಸಕ ಸತೀಶ್ ಸೈಲ್ ಅವರು ಕಳೆದ ಕೆಲ ಸಮಯದಿಂದ ಲಿವರ್ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಹಿಂದೆ ಅವರು ದೆಹಲಿಯಲ್ಲಿ ಚಿಕಿತ್ಸೆ ಕೂಡ ಪಡೆದಿದ್ದರು. ಇದೀಗ ವೈದ್ಯರು ಅವರಿಗೆ ಲಿವರ್ ಕಸಿ ಅನಿವಾರ್ಯ ಎಂದು ಸೂಚಿಸಿರುವ ಹಿನ್ನೆಲೆಯಲ್ಲಿ, ಶಾಸಕರು ಹೈಕೋರ್ಟ್ಗೆ ವೈದ್ಯಕೀಯ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಮಾನವೀಯ ಆಧಾರದ ಮೇಲೆ ಲಿವರ್ ಕಸಿ ಪ್ರಕ್ರಿಯೆ ಮುಗಿಯುವವರೆಗೆ ಜಾಮೀನು ಮಂಜೂರು ಮಾಡಿದೆ.
ಅಕ್ರಮ ಕಬ್ಬಿಣದ ಅದಿರು ರಫ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) 2025ರ ಆಗಸ್ಟ್ 13 ಮತ್ತು 14ರಂದು ಸತೀಶ್ ಸೈಲ್ ಅವರ ಕಾರವಾರ, ಗೋವಾ, ಮುಂಬೈ ಹಾಗೂ ದೆಹಲಿ ನಿವಾಸಗಳ ಮೇಲೆ ದಾಳಿ ನಡೆಸಿತ್ತು. ದಾಳಿಯ ವೇಳೆ ಅಕ್ರಮ ಆಸ್ತಿ ದಾಖಲೆಗಳು, ನಗದು ಹಾಗೂ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿತ್ತು. ತದನಂತರ, ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ (PMLA) 2025ರ ಸೆಪ್ಟೆಂಬರ್ 9 ರಂದು ಇಡಿ ಅಧಿಕಾರಿಗಳು ಸತೀಶ್ ಸೈಲ್ ಅವರನ್ನು ಬೆಂಗಳೂರಿನಲ್ಲಿ ಬಂಧಿಸಿದ್ದರು.
ಇದಕ್ಕೂ ಮುನ್ನ, ಬಹುಕೋಟಿ ಬೇಲೆಕೇರಿ ಅದಿರು ನಾಪತ್ತೆ ಮತ್ತು ಅಕ್ರಮ ರಫ್ತು ಪ್ರಕರಣದಲ್ಲಿ (2010ರ ಪ್ರಕರಣ) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 2024ರ ಅಕ್ಟೋಬರ್ 26ರಂದು ಸತೀಶ್ ಸೈಲ್ ಅವರಿಗೆ ಬರೋಬ್ಬರಿ 7 ವರ್ಷಗಳ ಜೈಲು ಶಿಕ್ಷೆ ಹಾಗೂ 44 ಕೋಟಿ ರೂ. ದಂಡ ವಿಧಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸೈಲ್ ಹೈಕೋರ್ಟ್ ಮೆಟ್ಟಿಲೇರಿದ್ದರು. 2024ರ ಡಿಸೆಂಬರ್ 21ರಂದು ಕರ್ನಾಟಕ ಹೈಕೋರ್ಟ್, ವಿಶೇಷ ನ್ಯಾಯಾಲಯ ನೀಡಿದ್ದ ಶಿಕ್ಷೆಗೆ ತಡೆಯಾಜ್ಞೆ ನೀಡಿತ್ತು. ಸಿಬಿಐ ತನಿಖೆ ನಡೆಸಿದ್ದ ಆ ಪ್ರಕರಣದಲ್ಲಿ ರಿಲೀಫ್ ಸಿಕ್ಕರೂ, ಇಡಿ ದಾಖಲಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಅವರು ಜೈಲು ಪಾಲಾಗಿದ್ದರು. ಇದೀಗ ಅನಾರೋಗ್ಯದ ಕಾರಣದಿಂದ ಅವರಿಗೆ ಮತ್ತೆ ಬಿಡುಗಡೆಯ ಭಾಗ್ಯ ಸಿಕ್ಕಂತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ