
ಬಳ್ಳಾರಿ (ಡಿ.21): ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಎಫ್ಡಿಎ ಹುದ್ದೆಗಳ ಭರ್ತಿಗಾಗಿ ಜಿಲ್ಲೆಯಾದ್ಯಂತ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಯಿತು.
ಬಳ್ಳಾರಿಯ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳನ್ನು ತಪಾಸಣೆ ನಡೆಸಿದ ನಂತರವೇ ಒಳಗೆ ಬಿಡಲಾಯಿತು. ಈ ವೇಳೆ ವಿದ್ಯಾರ್ಥಿನಿಯರ ಕಾಲುಗೆಜ್ಜೆಗಳನ್ನು ಕಳಚುವಂತೆ ಸೂಚನೆ ನೀಡಿದ್ದಲ್ಲದೇ, ಕೈ ಮತ್ತು ಕತ್ತಿನಲ್ಲಿದ್ದ ಶಿವದಾರಗಳನ್ನು ಕಟ್ ಮಾಡಿ ಅಭ್ಯರ್ಥಿಗಳನ್ನು ಪರೀಕ್ಷಾ ಕೊಠಡಿಯೊಳಗೆ ಕಳುಹಿಸಲಾಯಿತು.
ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ ಆಯೋಜಿಸಲಾಗಿತ್ತು. ಮುಂಜಾನೆಯಿಂದಲೇ ಅಭ್ಯರ್ಥಿಗಳು ಉತ್ಸಾಹದಿಂದ ಕೇಂದ್ರಗಳಿಗೆ ಆಗಮಿಸಿ ಪರೀಕ್ಷೆ ಬರೆಯಲು ಸಿದ್ಧರಾಗಿದ್ದರು. ಆದರೆ ತಪಾಸಣಾ ನಿಯಮಗಳಿಂದಾಗಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ವಿದ್ಯಾರ್ಥಿನಿಯರ ಅಸಮಾಧಾನ
ಪರೀಕ್ಷಾ ಸಿಬ್ಬಂದಿಯ ಸೂಚನೆಯಂತೆ ವಿದ್ಯಾರ್ಥಿನಿಯರು ತಮ್ಮ ಕಾಲುಗೆಜ್ಜೆಗಳನ್ನು ಬಿಚ್ಚಿಟ್ಟರು. ಶಿವದಾರಗಳನ್ನು ಕತ್ತರಿಸಿದ್ದಕ್ಕೆ ಕೆಲವು ಅಭ್ಯರ್ಥಿಗಳು ಸ್ಥಳದಲ್ಲಿಯೇ ಅಸಮಾಧಾನ ವ್ಯಕ್ತಪಡಿಸಿದರಾದರೂ, ಪರೀಕ್ಷೆಯ ಸಮಯವಾಗಿದ್ದರಿಂದ ಅನಿವಾರ್ಯವಾಗಿ ನಿಯಮಗಳಿಗೆ ಅನುಸಾರವಾಗಿ ನಡೆದುಕೊಂಡರು.
ಯಶಸ್ವಿಯಾಗಿ ಮುಕ್ತಾಯಗೊಂಡ ಪರೀಕ್ಷಾ ಪ್ರಕ್ರಿಯೆ
ಪರೀಕ್ಷೆಯು ಯಾವುದೇ ಅಡೆತಡೆಯಿಲ್ಲದೆ ಸುಗಮವಾಗಿ ನಡೆಯಲು ಬಿಗಿ ಪೊಲೀಸ್ ಭದ್ರತೆ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗಿತ್ತು. ಯಾವುದೇ ಅಹಿತಕರ ಘಟನೆಗಳು ಸಂಭವಿಸದೆ ಪರೀಕ್ಷೆಯು ಯಶಸ್ವಿಯಾಗಿ ಸಂಪನ್ನವಾಯಿತು ಎಂದು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ