
ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ತಾತ್ಕಾಲಿಕ ರಿಲೀಫ್ ದೊರೆತಿದ್ದು, ತುರ್ತು ವಿಚಾರಣೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಈ ಮೂಲಕ ಪ್ರಕರಣವನ್ನು ತಕ್ಷಣವೇ ವಿಚಾರಣೆ ನಡೆಸಬೇಕೆಂಬ ಬೇಡಿಕೆಗೆ ನ್ಯಾಯಾಲಯ ಸ್ಪಷ್ಟ ನಿರಾಕರಣೆ ನೀಡಿದೆ.
ಸಮಾಜ ಪರಿವರ್ತನಾ ಸಮುದಾಯ ಸಂಸ್ಥೆಯು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತುರ್ತು ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಇತ್ತೀಚೆಗೆ ನಡೆದ ಸರ್ವೇ ಕಾರ್ಯಗಳ ಹಿನ್ನೆಲೆಯಲ್ಲಿ ಪ್ರಕರಣ ತುರ್ತು ವಿಚಾರಣೆಗೆ ಒಳಪಡಿಸಬೇಕು ಎಂದು ಮನವಿ ಮಾಡಲಾಗಿತ್ತು. ಆದರೆ, ಈ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿ, ಪ್ರಕರಣವನ್ನು ಸಾಮಾನ್ಯ ವಿಚಾರಣೆಯ ಕ್ರಮದಲ್ಲಿಯೇ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದೆ.
ಸಮಾಜ ಪರಿವರ್ತನಾ ಸಮುದಾಯ ಸಂಸ್ಥೆಯ ಪರವಾಗಿ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ವಾದ ಮಂಡಿಸಿದರು. ಮತ್ತೊಂದೆಡೆ, ಕುಮಾರಸ್ವಾಮಿ ಪರ ವಕೀಲರು ತುರ್ತು ವಿಚಾರಣೆಯ ಅಗತ್ಯವಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿ, ಪ್ರಕರಣವನ್ನು ಸಾಮಾನ್ಯ ಕ್ರಮದಲ್ಲಿ ವಿಚಾರಣೆ ನಡೆಸಬೇಕು ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಈ ವಾದವನ್ನು ಗಮನಿಸಿದ ಪೀಠವು ತುರ್ತು ವಿಚಾರಣೆಗೆ ಅವಕಾಶ ನೀಡದೆ, ನಿಯಮಿತ ಕ್ರಮದಲ್ಲೇ ವಿಚಾರಣೆ ನಡೆಯಲಿದೆ ಎಂದು ಹೇಳಿದೆ.
ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ನ್ಯಾಯಾಂಗ ನಿಂದನೆ (Contempt of Court) ಪ್ರಕರಣದಲ್ಲಿ ತಮ್ಮ ವಿರುದ್ಧ ಇರುವ ಆರೋಪಗಳನ್ನು ಪ್ರಶ್ನಿಸಿ ಎಚ್.ಡಿ. ಕುಮಾರಸ್ವಾಮಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಕರಣವನ್ನು ಸಾಮಾನ್ಯ ವಿಚಾರಣೆಯ ಕ್ರಮದಲ್ಲಿ ಮುಂದುವರಿಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿರುವುದರಿಂದ, ಮುಂದಿನ ದಿನಗಳಲ್ಲಿ ವಿಚಾರಣೆಯ ವೇಳಾಪಟ್ಟಿ ನಿಗದಿಯಾಗಲಿದೆ. ಇತ್ತ, ಕುಮಾರಸ್ವಾಮಿ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ಪ್ರಕರಣದ ಅಂತಿಮ ತೀರ್ಪಿನತ್ತ ಎಲ್ಲರ ಗಮನ ಹರಿದಿದೆ.
ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮಾಜಿ ಶಾಸಕ ಡಿ.ಸಿ.ತಮ್ಮಣ್ಣ ಮತ್ತಿತರರ ವಿರುದ್ಧ ಭೂಕಬಳಿಕೆ ಆರೋಪ ಕೇಳಿ ಬಂದಿತ್ತು. ತನಿಖೆ ನಡೆಸಿದ್ದ ಲೋಕಾಯುಕ್ತ, ಒತ್ತುವರಿ ತೆರವಿಗೆ ಸೂಚಿಸಿತ್ತು. ಆದರೆ, ಲೋಕಾಯುಕ್ತದ ಸೂಚನೆ ಬಳಿಕವೂ ಅಧಿಕಾರಿಗಳು ಒತ್ತುವರಿ ತೆರವಿಗೆ ಮುಂದಾಗಿರಲಿಲ್ಲ. ಕೇತಗಾನಹಳ್ಳಿಯಲ್ಲಿ 14 ಎಕರೆ ಸರ್ಕಾರಿ ಭೂಮಿ ಒತ್ತುವರಿ ಆರೋಪವಿದೆ. ಈ ಸಂಬಂಧ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ವರದಿ ನೀಡಿದ್ದರು. ಈ ವರದಿ ಮೇರೆಗೆ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ 2020ರಲ್ಲಿ ಆದೇಶಿಸಿತ್ತು. ಆದರೆ, ಇದನ್ನು ಜಾರಿಗೊಳಿಸದ ಹಿನ್ನೆಲೆಯಲ್ಲಿ ಸಮಾಜ ಪರಿವರ್ತನಾ ಸಮುದಾಯ ಸಂಘಟನೆ ಸರ್ಕಾರದ ವಿರುದ್ಧ ಹೈಕೋರ್ಟ್ಗೆ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ವಿಚಾರಣೆಯಲ್ಲಿ ಭಾಗಿಯಾಗುವಂತೆ ಕುಮಾರಸ್ವಾಮಿಗೆ ಸೂಚಿಸಿತ್ತು. ಈ ನ್ಯಾಯಾಂಗ ನಿಂದನೆ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ಈ ಮೇಲ್ಮನವಿ ಬಗ್ಗೆ ಹೈಕೋರ್ಟ್ ಗಮನಕ್ಕೆ ತಂದು ತಮ್ಮ ವಿರುದ್ಧ ಕಾನೂನು ಪ್ರಕ್ರಿಯೆಗೆ ತಡೆ ನೀಡುವಂತೆ ಮನವಿ ಮಾಡಿದ್ದರು. ಬಳಿಕ ಹೈಕೋರ್ಟ್ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶಿಸಿತ್ತು. ಈ ನಡುವೆ ರಾಜ್ಯ ಸರ್ಕಾರ ಕೇತಗಾನಹಳ್ಳಿ ವಿವಿಧ ಸರ್ವೆ ಸಂಖ್ಯೆಗಳಲ್ಲಿ ಒತ್ತುವರಿಯಾಗಿರುವ 14 ಎಕರೆ ಜಮೀನಿನ ಮಾಲೀಕತ್ವ ಕುರಿತು ವಿಚಾರಣೆ ನಡೆಸಲು ಐಎಎಸ್ ಅಧಿಕಾರಿ ಆಮ್ನಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ ಎಸ್ಐಟಿ ರಚಿಸಿ ಆದೇಶಿಸಿತ್ತು. ಇದನ್ನು ಕುಮಾರಸ್ವಾಮಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಎಸ್ಐಟಿ ತನಿಖೆಗೆ ಹೈಕೋರ್ಟ್ ಏಕದಸ್ಯ ಪೀಠ ಮಧ್ಯಂತರ ತಡೆ ನೀಡಿತ್ತು. ಬಳಿಕ ರಾಜ್ಯ ಸರ್ಕಾರದ ಮನವಿ ಮೇರೆಗೆ ಹೈಕೋರ್ಟ್ನ ದ್ವಿಸದಸ್ಯ ಪೀಠ ಈ ಮಧ್ಯಂತರ ತಡೆ ತೆರವುಗೊಳಿಸಿತ್ತು. ಹೀಗಾಗಿ ಎಚ್.ಡಿ.ಕುಮಾರಸ್ವಾಮಿ ಅವರು ಸಂಕಷ್ಟಕ್ಕೆ ಸಿಲುಕಿದರು. ಈ ಸರ್ಕಾರಿ ಭೂಮಿ ಒತ್ತವರಿ ಪ್ರಕರಣದಲ್ಲಿ ಕುಮಾರಸ್ವಾಮಿ ಅವರು ಸುದೀರ್ಘ ಕಾನೂನು ಹೋರಾಟ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ