
ಕೊಡಗು (ಮೇ 19): ಕೊಡಗು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ದುಬಾರೆ ಸಾಕಾನೆ ಶಿಬಿರದಲ್ಲಿ ಸೋಮವಾರ ನಡೆದ ಎರಡು ಸಾಕಾನೆಗಳ ನಡುವಿನ ಭೀಕರ ಕಾದಾಟದ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಅರಣ್ಯ ಇಲಾಖೆಯು ಶಿಬಿರಕ್ಕೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿದೆ. ಇಂದು ಮತ್ತು ನಾಳೆ (ಮಂಗಳವಾರ ಮತ್ತು ಬುಧವಾರ) ಪ್ರವಾಸಿಗರಿಗೆ ದುಬಾರೆ ಶಿಬಿರಕ್ಕೆ ಭೇಟಿ ನೀಡಲು ಅವಕಾಶವಿರುವುದಿಲ್ಲ ಎಂದು ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಆನೆಗಳ ನಡುವಿನ ಜಗಳದಿಂದಾಗಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವುದರಿಂದ, ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕಾವೇರಿ ನದಿ ದಾಟಿಸಿ ಪ್ರವಾಸಿಗರನ್ನು ಶಿಬಿರಕ್ಕೆ ಕರೆದೊಯ್ಯುವ ಬೋಟಿಂಗ್ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿದ್ದು, ನದಿ ತೀರದವರೆಗೂ ಬರದಂತೆ ಪ್ರವಾಸಿಗರಿಗೆ ಸೂಚನೆ ನೀಡಲಾಗಿದೆ.
ನಿನ್ನೆ ನಡೆದ ಕಾದಾಟದಲ್ಲಿ 'ಮಾರ್ತಾಂಡ' ಆನೆಯು 'ಕಂಜನ್' ಆನೆಯ ದಾಳಿಗೆ ಒಳಗಾಗಿ ತೀವ್ರವಾಗಿ ಗಾಯಗೊಂಡಿದೆ. ಮಾರ್ತಾಂಡನ ಹೊಟ್ಟೆಯ ಭಾಗ, ಕಿವಿಯ ಹಿಂಭಾಗ ಹಾಗೂ ಕಾಲುಗಳಿಗೆ ಆಳವಾದ ಗಾಯಗಳಾಗಿವೆ. ಸದ್ಯ ದುಬಾರೆ ಶಿಬಿರದಲ್ಲೇ ಮಾರ್ತಾಂಡನಿಗೆ ಅರಣ್ಯ ಇಲಾಖೆಯ ಪಶುವೈದ್ಯರಾದ ಡಾ. ಮುಜೀಬ್ ಅವರ ನೇತೃತ್ವದ ತಂಡ ಚಿಕಿತ್ಸೆ ನೀಡುತ್ತಿದೆ. ಆನೆಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದೆ ಎಂದು ತಿಳಿದುಬಂದಿದೆ.
ಆನೆಗಳ ಕಾಳಗದ ರಭಸಕ್ಕೆ ಸಿಲುಕಿ ಮೃತಪಟ್ಟಿದ್ದ ಚೆನ್ನೈ ಮೂಲದ ಪ್ರವಾಸಿ ಮಹಿಳೆ ಜಿನ್ನು (33) ಅವರ ಕುಟುಂಬದಲ್ಲಿ ಶೋಕ ಮಡುಗಟ್ಟಿದೆ. ಅನಿರೀಕ್ಷಿತ ದುರಂತದಲ್ಲಿ ಪತ್ನಿಯನ್ನು ಕಳೆದುಕೊಂಡ ನೋವಿನ ನಡುವೆಯೂ, ಆಕೆಯ ಪತಿ ಸಮಾಜಕ್ಕೆ ಮಾದರಿಯಾಗುವ ನಿರ್ಧಾರ ಕೈಗೊಂಡಿದ್ದಾರೆ. ಮೃತ ಜಿನ್ನು ಅವರ ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಇನ್ನು ಮೃತ ಮಹಿಳೆಯ ಕುಟುಂಬಕ್ಕೆ ರಾಜ್ಯ ಸರ್ಕಾರವು 20 ಲಕ್ಷ ರೂಪಾಯಿಗಳ ಪರಿಹಾರ ಧನವನ್ನು ಘೋಷಿಸಿದೆ.
ಸ್ನಾನ ಮಾಡಿಸುವ ಸಂದರ್ಭದಲ್ಲಿ ಮಾರ್ತಾಂಡ ಮತ್ತು ಕಂಜನ್ ಆನೆಗಳ ನಡುವೆ ಅನಿರೀಕ್ಷಿತವಾಗಿ ಜಗಳ ಆರಂಭವಾಗಿತ್ತು. ರೊಚ್ಚಿಗೆದ್ದ ಆನೆಗಳು ಓಡಾಡುತ್ತಿದ್ದಾಗ ಅಲ್ಲೇ ಇದ್ದ ಜಿನ್ನು ಅವರು ಆನೆಗಳ ಕಾಲಡಿ ಸಿಲುಕಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದರು. ಈ ಘಟನೆಯಿಂದಾಗಿ ದುಬಾರೆ ಶಿಬಿರದ ಸುರಕ್ಷತೆಯ ಬಗ್ಗೆ ವ್ಯಾಪಕ ಚರ್ಚೆಗಳು ನಡೆಯುತ್ತಿದ್ದು, ಮಾವುತರ ನಿರ್ಲಕ್ಷ್ಯದ ಬಗ್ಗೆಯೂ ತನಿಖೆ ನಡೆಯುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ