Mekedatu Padayatre: ನನ್ನ ಸಾಯಿಸಿದರೂ ಪಾದಯಾತ್ರೆ ನಿಲ್ಲದು: ಡಿಕೆಶಿ

By Kannadaprabha NewsFirst Published Mar 1, 2022, 1:10 AM IST
Highlights

ನಾವು ನಿಮ್ಮ ಎಫ್‌ಐಆರ್‌ ಬೆದರಿಕೆಗಳಿಗೆ ಜಗ್ಗುವುದಿಲ್ಲ. ನೀವು ನನ್ನನ್ನು ಹಾಗೂ ಸಿದ್ದರಾಮಯ್ಯ ಅವರನ್ನು ಸಾಯಿಸಿದರೂ ನಮ್ಮಂತಹ ನೂರಾರು ಮಂದಿ ಹುಟ್ಟುತ್ತಾರೆ. ಅಷ್ಟೇ ಹೊರತು ಮೇಕೆದಾಟು ಯೋಜನೆಗಾಗಿನ ಹೋರಾಟ ಮಾತ್ರ ಯಾವುದೇ ಕಾರಣಕ್ಕೂ ನಿಲ್ಲಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು (ಮಾ.01): ನಾವು ನಿಮ್ಮ ಎಫ್‌ಐಆರ್‌ (FIR) ಬೆದರಿಕೆಗಳಿಗೆ ಜಗ್ಗುವುದಿಲ್ಲ. ನೀವು ನನ್ನನ್ನು ಹಾಗೂ ಸಿದ್ದರಾಮಯ್ಯ (Siddaramaiah) ಅವರನ್ನು ಸಾಯಿಸಿದರೂ ನಮ್ಮಂತಹ ನೂರಾರು ಮಂದಿ ಹುಟ್ಟುತ್ತಾರೆ. ಅಷ್ಟೇ ಹೊರತು ಮೇಕೆದಾಟು (Mekedatu Padayatre) ಯೋಜನೆಗಾಗಿನ ಹೋರಾಟ ಮಾತ್ರ ಯಾವುದೇ ಕಾರಣಕ್ಕೂ ನಿಲ್ಲಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ಬಿಡದಿಯಿಂದ ಪ್ರಾರಂಭವಾದ ಎರಡನೇ ದಿನದ ಪಾದಯಾತ್ರೆ ವೇಳೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹಾಗೂ ಜಿಲ್ಲಾಡಳಿತದ ಗಮನಕ್ಕೆ ತಂದು ಮೇಕೆದಾಟು ಪಾದಯಾತ್ರೆ ಹಮ್ಮಿಕೊಂಡಿದ್ದರೂ 37 ಮಂದಿ ಮೇಲೆ ದುರುದ್ದೇಶದಿಂದ ಎಫ್‌ಐಆರ್‌ ದಾಖಲಿಸಲಾಗಿದೆ. ನಾವು ಪಾದಯಾತ್ರೆ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತಂದಾಗ ಕೊರೋನಾ ನಿಯಮ ಉಲ್ಲಂಘಿಸದಂತೆ ಮಾಡಲು ಸೂಚನೆ ನೀಡಿದ್ದರು. ಇದೀಗ ರಾಜಕೀಯ ದ್ವೇಷದಿಂದ ಎಫ್‌ಐಆರ್‌ ದಾಖಲಿಸಲಾಗಿದೆ. ಅಲ್ಲದೆ ಬೆಂಗಳೂರಿನಲ್ಲಿ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

Latest Videos

ನಮ್ಮನ್ನು ಜೈಲಿಗೆ ಹಾಕಿ- ಡಿಕೆಶಿ: ನಮಗೆ ಕೊರೋನಾ ನಿರ್ಬಂಧ ಅಡ್ಡಿಯಾಗುವುದಾದರೆ ಇತ್ತೀಚೆಗೆ ಸಚಿವ ಕೆ.ಎಸ್‌. ಈಶ್ವರಪ್ಪ, ಸಂಸದ ರಾಘವೇಂದ್ರ ಶಿವಮೊಗ್ಗದಲ್ಲಿ ಮೆರವಣಿಗೆ ಮಾಡಿದ್ದರು. ಬಜರಂಗದಳದವರು ಸೇರಿ ಸಾವಿರಾರು ಮಂದಿ ಭಾಗವಹಿಸಿದ್ದರು. ಆದರೆ ಯಾರ ಮೇಲೂ ಪ್ರಕರಣ ದಾಖಲಿಸಿಲ್ಲ. ಜನರ ಪರವಾಗಿ, ಜನರಿಗೆ ನೀರು ನೀಡುವಂತೆ ಆಗ್ರಹಿಸಿ ಪಾದಯಾತ್ರೆ ಮಾಡುತ್ತಿರುವ ಹೋರಾಟಗಾರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನಮ್ಮನ್ನು ಕೇಸ್‌ ಹಾಕಿ ಜೈಲಿಗೆ ಕರೆದುಕೊಂಡು ಹೋಗಲಿ. ಇಲ್ಲದಿದ್ದರೆ ನೀವು ಸಾಯಿಸಿದರೂ ನಾವು ಹೆದರಲ್ಲ ಎಂದು ಹೇಳಿದರು.

Mekedatu Padayatre: ಕಾಂಗ್ರೆಸ್‌ ಮೇಕೆದಾಟು ನಡಿಗೆ 2ನೇ ಕಂತು ಅದ್ಧೂರಿ ಆರಂಭ

ಅನುಮತಿ ನೀಡದಿದ್ದರೂ ಹೋರಾಟ: ಪಾದಯಾತ್ರೆಗೆ ಬಿಬಿಎಂಪಿ ಅನುಮತಿ ನಿರಾಕರಿಸಿರಬಹುದು. ಅನುಮತಿ ನೀಡದಿದ್ದರೂ ಜನರಿಗಾಗಿ ನಾವು ಹೋರಾಟ ಮಾಡುತ್ತೇವೆ. ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಸಮಾವೇಶ ಮಾಡಲು ಅನುಮತಿ ಸಿಕ್ಕಿದೆ. ಕೊರೋನಾ ಮಾರ್ಗಸೂಚಿ ಗಮನದಲ್ಲಿಟ್ಟುಕೊಂಡು ಹೋರಾಟ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಸಿದ್ದು, ಡಿಕೆಶಿ ಒಗ್ಗಟ್ಟು ಪ್ರದರ್ಶನ: ಮುಂಬರುವ ವಿಧಾನಸಭಾ ಚುನಾವಣೆಗೆ ರಣತಂತ್ರ ರೂಪಿಸುವ ವಿಚಾರಕ್ಕೆ ಸಂಬಂಧಿಸಿ ರಾಜ್ಯದ 16 ಹಿರಿಯ ನಾಯಕರೊಂದಿಗೆ ಕಾಂಗ್ರೆಸ್‌ ಹೈಕಮಾಂಡ್‌ ನಾಯಕ ರಾಹುಲ್‌ ಗಾಂಧಿ ಅವರು ಹಮ್ಮಿಕೊಂಡಿದ್ದ ಸಭೆಯಲ್ಲಿ ಭಾಗಹಿಸುವ ಸಲುವಾಗಿ ರಾಷ್ಟ್ರ ರಾಜಧಾನಿ ದೆಹಲಿಗೆ ಆಗಮಿಸಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌  ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ.  ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ, ನಾವೆಲ್ಲ ಒಗ್ಗಟ್ಟಾಗಿದ್ದು ಕರ್ನಾಟಕದಲ್ಲಿ ಕಾಂಗ್ರೆಸ್‌ ಅನ್ನು ಮತ್ತೆ ಅಧಿಕಾರಕ್ಕೆ ತರುವುದಾಗಿ ರಾಹುಲ್‌ ಗಾಂಧಿ ಅವರಿಗೆ ಭರವಸೆ ಕೊಟ್ಟಿದ್ದಾರೆ. 

ನವದೆಹಲಿಯ ಕರ್ನಾಟಕ ಭವನದಲ್ಲಿ ಶುಕ್ರವಾರ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರು ಈ ಬಗ್ಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಒಂದು ವರ್ಷವಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುವಂತಹ ವಾತಾವರಣ ನಿರ್ಮಾಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ರಾಜ್ಯದ ಸುಮಾರು 16 ಜನ ಹಿರಿಯ ನಾಯಕರನ್ನು ದೆಹಲಿಗೆ ಕರೆದು ಸಭೆ ನಡೆಸಿ ರಾಜ್ಯದ ಸದ್ಯದ ಸ್ಥಿತಿಗತಿ, ಮುಂದೆ ನಾವು ಗೆಲ್ಲಬೇಕಾದರೆ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಗೆಲ್ಲುವ ಅವಕಾಶ ಇರುವುದರಿಂದ ಎಚ್ಚರ ತಪ್ಪದೆ ಕೆಲಸ ಮಾಡಬೇಕು ಎಂಬ ಸಲಹೆ ನೀಡಿದ್ದಾರೆ. 

Congress Padayatre: ಮೇಕೆದಾಟು ಜಾರಿ ಇಚ್ಛಾಶಕ್ತಿ ಬಿಜೆಪಿಗಿಲ್ಲ: ಸುರ್ಜೇವಾಲಾ

ಮತ್ತೆ ಅಧಿಕಾರಕ್ಕೆ ಬರಲು ಅಗತ್ಯವಿರುವ ಬೆಂಬಲ, ಸಹಕಾರವನ್ನು ತಾವು ನೀಡುತ್ತೇವೆ ಎಂಬ ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ನಾಯಕರು ಒಗ್ಗಟ್ಟಾಗಿ ಕೆಲಸ ಮಾಡುತ್ತಿರುವ ಬಗ್ಗೆ ಸಂದೇಶ ಸಿಕ್ಕಂತಿದೆ. ಹಾಗಾಗಿ ಅವರು ಕೆಪಿಸಿಸಿ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು, ಇತರೆ ಎಲ್ಲ ನಾಯಕರು ಒಗ್ಗೂಡಿ, ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ, ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುತ್ತೆ ಎಂಬ ಮಾಹಿತಿ ನಮಗಿದೆ ಎಂದು ಹೇಳಿದರು ಎಂದರು.

click me!