
ಬೆಂಗಳೂರು/ಯಾದಗಿರಿ (ನ.04): ರಾಜ್ಯದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮಗಳು ಬೆಳಕಿಗೆ ಬಂದು ಕೋಲಾಹಲ ಸೃಷ್ಟಿಸಿದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಇದೇ ಮೊದಲ ಬಾರಿಗೆ ಪರೀಕ್ಷಾ ಕೇಂದ್ರಗಳ ಪರಿವೀಕ್ಷಕರಿಗೆ ಬಾಡಿ ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಿದೆ. ಲೆಕ್ಕ ಸಹಾಯಕರು ಹಾಗೂ ಸಹಕಾರ ಸಂಘಗಳ ನಿರೀಕ್ಷಕರ ಹುದ್ದೆಗಳ ನೇಮಕಾತಿಗಾಗಿ ನ.೪ ಮತ್ತು ೫ರಂದು ಕೆಪಿಎಸ್ಸಿ ರಾಜ್ಯಾದ್ಯಂತ ಪರೀಕ್ಷೆಗಳನ್ನು ನಡೆಸುತ್ತಿದೆ. ರಾಜ್ಯದ 23 ಜಿಲ್ಲಾ ಕೇಂದ್ರಗಳ 207 ಪರೀಕ್ಷಾ ಉಪಕೇಂದ್ರಗಳಲ್ಲಿ ನಡೆಸಲಾಗುವ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ತಡೆಯಲು ಈ ಬಾರಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು ಪರೀಕ್ಷಾ ಕೇಂದ್ರಗಳ ಪರಿವೀಕ್ಷಕರಿಗೆ ಬಾಡಿ ಕ್ಯಾಮೆರಾ ಅಳವಡಿಸಿ ೭೮ ಸಾವಿರಕ್ಕೂ ಹೆಚ್ಚಿನ ಅಭ್ಯರ್ಥಿಗಳ ಪರೀಕ್ಷಾ ಚಟುವಟಿಕೆ ಮೇಲೆ ಹದ್ದಿನ ಕಣ್ಣಿಡಲು ಸಿದ್ಧತೆ ಮಾಡಿಕೊಂಡಿದೆ.
ಪೊಲೀಸ್ ಸಬ್ ಇನ್ಸ್ಪೆಕ್ಟರ್(ಪಿಎಸ್ಐ) ಮತ್ತು ಕೆಇಎ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮಗಳು ಬೆಳಕಿಗೆ ಬಂದಿದ್ದು, ಪರೀಕ್ಷಾ ಪ್ರಾಧಿಕಾರಗಳಿಗೆ ಸಾಕಷ್ಟು ಮುಜುಗರವನ್ನು ತಂದೊಡ್ಡಿದೆ. ಹೀಗಾಗಿ ಪರೀಕ್ಷೆಯಲ್ಲಿ ಪಾರದರ್ಶಕತೆ, ದಕ್ಷತೆ, ನ್ಯಾಯ ಹಾಗೂ ಗೌಪ್ಯತೆ ಕಾಪಾಡಿಕೊಂಡು ನಿಷ್ಪಕ್ಷಪಾತವಾಗಿ ಪರೀಕ್ಷೆ ನಡೆಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.ನ.೪ ಮತ್ತು ೫ರಂದು ನಡೆಯುವ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಯಾವುದೇ ಆಧುನಿಕ ಉಪಕರಣಗಳು, ಮೊಬೈಲ್, ಬ್ಲೂಟೂತ್, ಕ್ಯಾಲ್ಕ್ಯೂಲೇಟರ್, ವೈರ್ಲೆಸ್ ಸೆಟ್, ಪೇಪರ್, ಬುಕ್ಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಎಲ್ಲಾ ಪರೀಕ್ಷಾ ಉಪ ಕೇಂದ್ರಗಳಲ್ಲಿ ಪರೀಕ್ಷಾ ಚಟುವಟಿಕೆಗಳ ಕುರಿತು ಪ್ರತ್ಯೇಕವಾಗಿ ವಿಡಿಯೋ ಚಿತ್ರೀಕರಣ ಮಾಡಲು ನಿರ್ಧರಿಸಲಾಗಿದೆ.
ಇನ್ನೂ ನಿಲ್ಲದ ಸಿಎಂ ಚರ್ಚೆ: ಹೈಕಮಾಂಡ್ ಸೂಚನೆಗೂ ಡೋಂಟ್ಕೇರ್!
ಪರೀಕ್ಷೆಯ ನೇರ ಪ್ರಸಾರ: ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳ ನೈಜತೆಯನ್ನು ಪರಿಶೀಲಿಸಲು ಬಯೋಮೆಟ್ರಿಕ್ ಫೇಸ್ ರೆಕಗ್ನಿಷನ್ ಮಾಡಲಾಗುತ್ತಿದೆ. ಪರೀಕ್ಷಾ ಉಪಕೇಂದ್ರಗಳ ಕೊಠಡಿಗಳಲ್ಲಿ ನಕಲು ಮಾಡುವುದನ್ನು ತಡೆಯಲು ಎಲ್ಲಾ ಕೊಠಡಿಗಳಿಗೂ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ. ಪರೀಕ್ಷಾರ್ಥಿಗಳು ಕೊಠಡಿ ಗಳಿಗೆ ಅಭ್ಯರ್ಥಿಗಳು ಪ್ರವೇಶಿಸುವ ಮುನ್ನ ಹ್ಯಾಂಡ್ ಹೆಲ್ಡ್ ಮೆಟಲ್ ಡಿಟೆಕ್ಟರ್(ಎಚ್ಎಚ್ಎಂಡಿ) ಮುಖಾಂತರ ಪುರುಷ ಮತ್ತು ಮಹಿಳಾ ಭದ್ರತಾ ಸಿಬ್ಬಂದಿಗಳಿಂದ ತಪಾಸಣೆ ನಡೆಸಲಾಗುತ್ತದೆ.
ತಾಳಿ, ಕಾಲುಂಗುರ ಧರಿಸಲು ಅನುಮತಿ: ಪರೀಕ್ಷಾರ್ಥಿಗಳು ತುಂಬು ತೋಳಿನ ಶರ್ಟ್ ಮತ್ತು ಯಾವುದೇ ಆಭರಣಗಳನ್ನು (ಮಂಗಳ ಸೂತ್ರ ಹಾಗೂ ಕಾಲುಂಗುರವನ್ನು ಹೊರತು ಪಡಿಸಿ), ಜಾಕೆಟ್, ಮೇಲುಹೊದಿಕೆ, ಸ್ವೆಟರ್ ಧರಿಸಿ ಹಾಜರಾಗುವುದನ್ನು ನಿಷೇಧಿಸಿದೆ. ಲೋಹದ ಅಥವಾ ಪಾರದರ್ಶಕ ನೀರಿನ ಬಾಟಲುಗಳನ್ನು ಪರೀಕ್ಷಾ ಕೊಠಡಿಯೊಳಗೆ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಿದೆ. ಕಿವಿ, ಬಾಯಿಯನ್ನು ಮುಚ್ಚಿಕೊಳ್ಳುವಂತೆ ಫಿಲ್ಟರ್ ಇರುವ ಫೇಸ್ ಮಾಸ್ಕ್ ಅನ್ನು ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸುವಂತಿಲ್ಲ.
ಸಿಎಂ ಹುದ್ದೆ ಬಗ್ಗೆ ಹೈಕಮಾಂಡ್ ನಿರ್ಧಾರ ಫೈನಲ್: ಸಿದ್ದು ಸ್ಪಷ್ಟನೆ
ಮೂಲ ಗುರುತಿನ ಚೀಟಿ ಕಡ್ಡಾಯ: ಪ್ರವೇಶ ಪತ್ರ, ಬ್ಲ್ಯಾಕ್ ಪೆನ್ ಹಾಗೂ ಸಿಂಧುವಾದ ಗುರುತಿನ ಚೀಟಿಗಳನ್ನು ಮಾತ್ರ ಕೇಂದ್ರಕ್ಕೆ ತರಬೇಕು. ಬೆಳಗ್ಗಿನ ಅಧಿವೇಶನಕ್ಕೆ ೯ ಗಂಟೆಗೆ ಹಾಗೂ ಮಧ್ಯಾಹ್ನದ ಅಧಿವೇಶನಕ್ಕೆ ೧ ಗಂಟೆಗೆ ಹಾಜರಿರತಕ್ಕದ್ದು. ಬೆಳಗ್ಗೆ ೯.೫೦ ರ ನಂತರ ಅಥವಾ ಮಧ್ಯಾಹ್ನ ೧.೫೦ ನಂತರ ಪರೀಕ್ಷಾ ಕೇಂದ್ರಗಳಿಗೆ ಬರುವವರಿಗೆ ಪ್ರವೇಶ ನೀಡಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿರುವ ಕೆಪಿಎಸ್ಸಿ, ಅಭ್ಯರ್ಥಿಗಳು ಪಾಸ್ಪೋರ್ಟ್, ಆಧಾರ್ಸೇರಿದಂತೆ, ಅಧಿಕೃತ ಗುರುತಿನ ಚೀಟಿ ತರಬೇಕು ಎಂದು ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ