
ಬೆಂಗಳೂರು(ಮಾ.15): ವೇತನ ಪರಿಷ್ಕರಣೆಗೆಂದು ಸರ್ಕಾರಕ್ಕೆ ನೀಡಿರುವ ಕಾಲಾವಧಿ ಮುಕ್ತಾಯಕ್ಕೆ ಕೇವಲ ಒಂದು ದಿನ ಮಾತ್ರ ಬಾಕಿ ಇದೆ. ನಾಳೆ(ಬುಧವಾರ)ಯೊಳಗೆ ಸಮಸ್ಯೆ ಇತ್ಯರ್ಥ ಪಡಿಸದಿದ್ದರೆ ಮಾರ್ಚ್ 16ರಂದು ಅಧಿಕಾರಿ, ನೌಕರರು ಕರ್ತವ್ಯ ಬಹಿಷ್ಕರಿಸಿ ಮುಷ್ಕರ ನಡೆಸುವುದು ನಿಶ್ಚಿತ ಎಂದು ಕೆಪಿಟಿಸಿಎಲ್ ಹಾಗೂ ಎಸ್ಕಾಂಗಳ ನೌಕರರ ಸಂಘಟನೆಗಳ ಮುಖಂಡರು ಎಚ್ಚರಿಸಿದ್ದಾರೆ.
ಕೆಪಿಟಿಸಿಎಲ್ ಮತ್ತು ವಿದ್ಯುತ್ ಸರಬರಾಜು ಕಂಪನಿಗಳ(ಎಸ್ಕಾಂ) ಅಧಿಕಾರಿಗಳು, ನೌಕರರ ಬೇಡಿಕೆಗೆ ಈವರೆಗೆ ರಾಜ್ಯ ಸರ್ಕಾರ ಸ್ಪಂದಿಸಿಲ್ಲ. ಬುಧವಾರವೂ (ಮಾರ್ಚ್ 15) ಕೂಡ ಸರ್ಕಾರಕ್ಕೆ ತೀರ್ಮಾನ ಕೈಗೊಳ್ಳಲು ಅವಕಾಶವಿದೆ. ಒಂದು ವೇಳೆ ವಿದ್ಯುತ್ ನೌಕರರ ವೇತನ ಪರಿಷ್ಕರಣೆಗೆ ಸರ್ಕಾರ ಮುಂದಾಗದಿದ್ದರೆ ಮಾರ್ಚ್ 16ರಿಂದ ರಾಜ್ಯಾದ್ಯಂತ ಮುಷ್ಕರ ನಡೆಸುವುದು ಖಚಿತ. ಗ್ರಾಹಕರು ತಮ್ಮ ಸಮಸ್ಯೆಗಳು ಏನಿದ್ದರೂ ಬುಧವಾರವೇ ಇತ್ಯರ್ಥಪಡಿಸಿಕೊಳ್ಳಬಹುದು. ಇಲ್ಲದಿದ್ದರೆ ಗ್ರಾಹಕರಿಗೆ ಆಗುವ ತೊಂದರೆಗೆ ಸರ್ಕಾರವೇ ಹೊಣೆ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘ ಮತ್ತು ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಆರ್.ಎಚ್.ಲಕ್ಷ್ಮಿಪತಿ ತಿಳಿಸಿದ್ದಾರೆ.
ವೇತನ ಪರಿಷ್ಕರಣೆಗೆ ಆಗ್ರಹಿಸಿ ಒಕ್ಕೂಟವು ಸರ್ಕಾರಕ್ಕೆ ಈಗಾಗಲೇ ಮನವಿ ಸಲ್ಲಿಸಿದೆ. ಬೇಡಿಕೆ ಈಡೇರಿಸದಿದ್ದರೆ ಮುಷ್ಕರ ನಡೆಸುವುದಾಗಿ 14 ದಿನಗಳ ಮೊದಲೇ ನೋಟಿಸ್ ನೀಡಲಾಗಿದೆ. ಆದರೂ ಈವರೆಗೆ ಸರ್ಕಾರದಿಂದ ನಮ್ಮ ಬೇಡಿಕೆಗಳಿಗೆ ಪೂರಕವಾದ ಸ್ಪಂದನೆ ದೊರೆತಿಲ್ಲ. ಆದ್ದರಿಂದ ಅನಿವಾರ್ಯವಾಗಿ ಈಗಾಗಲೇ ನಿಗದಿಯಾಗಿರುವಂತೆ ಮಾಚ್ರ್16 ರಿಂದ ಸಾಮೂಹಿಕವಾಗಿ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಒಮ್ಮತದ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
₹13708 ಕೋಟಿ ರು. ಎಸ್ಕಾಂ ಸಾಲಕ್ಕೆ ಸರ್ಕಾರದ ಖಾತ್ರಿ: ಸಚಿವ ಸಂಪುಟ ನಿರ್ಧಾರ
ಕೆಪಿಟಿಸಿಎಲ್ ಮತ್ತು ಎಸ್ಕಾಂಗಳ ನೌಕರರ ಮುಷ್ಕರದಿಂದ ರಾಜ್ಯಾದ್ಯಂತ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಕೆಪಿಟಿಸಿಎಲ್ ಮತ್ತು ಎಸ್ಕಾಂಗಳಲ್ಲಿ ಸುಮಾರು 62 ಸಾವಿರಕ್ಕೂ ಹೆಚ್ಚು ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ. ಹೀಗಾಗಿ ನೌಕರರು ಗ್ರಾಹಕರ ದೂರವಾಣಿ ಸಂಪರ್ಕಕ್ಕೆ ಲಭ್ಯವಿರುವುದಿಲ್ಲ. ಏಪ್ರಿಲ್ 2022ರಿಂದ ವೇತನ ಪರಿಷ್ಕರಣೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇವೆ. ಹಿಂದಿನ ನಿರ್ಧಾರದ ಪ್ರಕಾರ ನಮ್ಮ ಸಂಬಳವನ್ನು ಶೇ.22ರಷ್ಟುಹೆಚ್ಚಿಸಬೇಕಿತ್ತು. ಈ ಪ್ರಸ್ತಾವನೆಯನ್ನು ಕೆಪಿಟಿಸಿಎಲ್ ಮಂಡಳಿಯು ಅನುಮೋದಿಸಿದೆ. ಆದರೆ, ಸರ್ಕಾರ ಅದಕ್ಕೆ ಒಪ್ಪಿಗೆ ನೀಡದೆ ಪ್ರಸ್ತಾವನೆಯನ್ನು ಬಾಕಿ ಉಳಿಸಿಕೊಂಡಿದೆ. ಹೀಗಾಗಿ ಅನಿವಾರ್ಯವಾಗಿ ಪ್ರತಿಭಟನೆ ನಡೆಸಲು ತೀರ್ಮಾನ ಕೈಗೊಂಡಿದ್ದೇವೆ ಎಂದು ಯೂನಿಯನ್ ಮತ್ತು ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಕೆ.ಬಲರಾಮ್ ಹೇಳಿದ್ದಾರೆ.
ಕೆಇಬಿ ಎಂಜಿನಿಯರುಗಳ ಸಂಘ, ಕೆಇವಿ ಎಸ್ಸಿ, ಎಸ್ಟಿನೌಕರರ ಕಲ್ಯಾಣ ಸಂಸ್ಥೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(ಕವಿಪ್ರನಿನಿ) ಲೆಕ್ಕಾಧಿಕಾರಿಗಳ ಸಂಘ, ಕವಿಪ್ರನಿನಿ ಡಿಪ್ಲಮೋ ಎಂಜಿನಿಯರುಗಳ ಸಂಘ, ಕೆಪಿಟಿಸಿಎಲ್ ಮಾಜಿ ನೌಕರರ ಸಂಘ ಸೇರಿದಂತೆ ಕೆಪಿಟಿಸಿಎಲ್ನ ನೌಕರರ ಎಲ್ಲ ಸಂಘಟನೆಗಳು ಈ ಹೋರಾಟದಲ್ಲಿ ಭಾಗಿಯಾಗುವುದಾಗಿ ಈಗಾಗಲೇ ಪ್ರಕಟಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ