
ಬೆಂಗಳೂರು (ಡಿ.30): ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಡಿ.31ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ನೌಕರರು ಹಮ್ಮಿಕೊಂಡಿದ್ದ ಮುಷ್ಕರವನ್ನು ಕೈಬಿಡುವಂತೆ ಸಂಧಾನ ಸಭೆಯನ್ನು ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೌಕರರ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಕೆಎಸ್ಆರ್ಟಿಸಿ ನೌಕರರು ಹಮ್ಮಿಕೊಂಡಿದ್ದ ಮುಷ್ಕರವನ್ನು ಕೈಬಿಡಲು ನಿರ್ಧರಿಸಿದ್ದಾರೆ ಎಂದು ಸ್ವತಃ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, 'ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರಿಗೆ ಸಚಿವರು ಹಾಗೂ ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಜೊತೆ ಸಭೆ ನಡೆಸಿ ಚರ್ಚಿಸಿದರು. ಸಾರಿಗೆ ನೌಕರರು ತಮ್ಮ ವಿವಿಧ 13 ಬೇಡಿಕೆಗಳನ್ನು ಮುಂದಿಟ್ಟು, ಮುಷ್ಕರಕ್ಕೆ ಕರೆ ನೀಡಿದ್ದರು. ಈ ಎಲ್ಲಾ ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಸಮಾಲೋಚಿಸಿ, ಪರಿಹರಿಸುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬಂದಿದ್ದು, ಇದರಿಂದ ನೌಕರರು ಮುಷ್ಕರ ಕೈಬಿಡುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ: ಡಿ.31ರಿಂದ ಕೆಎಸ್ಆರ್ಟಿಸಿ ಬಸ್ ಅನಿರ್ದಿಷ್ಟಾವಧಿ ಮುಷ್ಕರ: ತಡೆಗೆ ಸರ್ಕಾರ ಕಸರತ್ತು
ಈ ಹಿಂದಿನ ಬಿಜೆಪಿ ಸರ್ಕಾರ ಸಾರಿಗೆ ನಿಗಮಗಳಿಗೆ ನೀಡಬೇಕಿರುವ ಹಣದಲ್ಲಿ ರೂ.5,900 ಕೋಟಿಯನ್ನು ಬಾಕಿ ಉಳಿಸಿದ್ದರಿಂದ ಸಮಸ್ಯೆ ಉದ್ಭವವಾಗಿದೆ. ನೌಕರರ ಕಷ್ಟವನ್ನು ಮನಗಂಡು ರಾಜ್ಯ ಸರ್ಕಾರ ರೂ.2,000 ಕೋಟಿಯನ್ನು ಈಗಾಗಲೇ ಬಿಡುಗಡೆ ಮಾಡಿದ್ದು, ಮುಂಬರುವ ಬಜೆಟ್ನಲ್ಲಿ ಬಾಕಿ ಉಳಿದಿರುವ ಹಣವನ್ನು ಬಿಡುಗಡೆಗೊಳಿಸಿ ನೌಕರರ ಹಿತ ಕಾಪಾಡಲು ನಿರ್ಧರಿಸಿದೆ. ಮುಷ್ಕರ ನಿರ್ಧಾರದಿಂದ ಹಿಂದೆ ಸರಿದಿರುವ ಸಾರಿಗೆ ನೌಕರರಿಗೆ ಧನ್ಯವಾದಗಳು. ನಿಮ್ಮ ಅಹವಾಲುಗಳನ್ನು ಸಮಚಿತ್ತದಿಂದ ಆಲಿಸಿ ಪರಿಹರಿಸಲು ಸರ್ಕಾರ ಮುಕ್ತವಾಗಿದೆ' ಎಂದು ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ