
ಮೂಡಿಗೆರೆ(ಡಿ.14): ರಾಷ್ಟ್ರಕವಿ ಕುವೆಂಪು ಅವರ ಸೊಸೆ ಹಾಗೂ ಖ್ಯಾತ ಕವಿ ದಿವಂಗತ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ(84) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿಂದು ವಿಧಿವಶರಾಗಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ರಾಜೇಶ್ವರಿ, ರಾಜಲಕ್ಷ್ಮಿ ಮಲ್ಟಿ ಸ್ಪೆಷಲಿಟಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.
ರಾಜೇಶ್ವರಿ ಅವರು ಮೂಡಿಗೆರೆಯ ಹ್ಯಾಂಡ್ ಪೋಸ್ಟ್ನಲ್ಲಿ ವಾಸವಾಗಿದ್ದರು. ಪತಿ ಪೂರ್ಣಚಂದ್ರ ತೇಜಸ್ವಿಯವರ ನಿಧನದ ಬಳಿಕ ತೋಟದ ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು. ಕೆಲವು ದಿನಗಳ ಹಿಂದೆ ರಾಜೇಶ್ವರಿ ಅವರು ಬೆಂಗಳೂರಿಗೆ ಬಂದಿದ್ದರು. ಕಳೆದ ಮೂರ್ನಾಲ್ಕು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಅಪ್ಪನಲ್ಲಿ ಕೇಳಲೇ ಬೇಕಿದ್ದ ಪ್ರಶ್ನೆಗಳಿದ್ದವು: ಈಶಾನ್ಯೆ ಕೆ ಪಿ
ಪೂರ್ಣಚಂದ್ರ ತೇಜಸ್ವಿ ಹಾಗೂ ರಾಜೇಶ್ವರಿ ದಂಪತಿಯ ಮಗಳಾದ ಸುಷ್ಮಿತಾ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಇಂದು(ಡಿ.14) ಸಂಜೆ 5.30ರ ವರೆಗೆ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
1937ರಲ್ಲಿ ಬೆಂಗಳೂರಿನ ಕಲಾಸಿಪಾಳ್ಯದ ಹೊಸ ಬಡಾವಣೆಯಲ್ಲಿ ಸಾಮಾನ್ಯ ಕುಟುಂಬದಲ್ಲಿ ರಾಜೇಶ್ವರಿ ತೇಜಸ್ವಿ ಜನನವಾಯ್ತು. ಹೆಣ್ಣುಮಕ್ಕಳಿಗೂ ಸಮಾನ ವಿದ್ಯಾಭ್ಯಾಸ ಕೊಡಬೇಕೆನ್ನುವ ಅವರ ತಂದೆಯ ಧ್ಯೇಯದಿಂದಾಗಿ ರಾಜೇಶ್ವರಿಯವರು ತತ್ವಶಾಸ್ತ್ರದಲ್ಲಿ ಆನರ್ಸ್ ಮತ್ತು ಎಂ.ಎ. ಮಾಡಲು ಮೈಸೂರು ಮಾನಸ ಗಂಗೋತ್ರಿಗೆ ಬಂದರು. ಅಲ್ಲೇ ತೇಜಸ್ವಿಯವರ ಪರಿಚಯವಾಗಿ ಸ್ನೇಹ ಪ್ರೀತಿಗೆ ತಿರುಗಿತು. ಆನಂತರ ಇವರ ಬದುಕಿನ ದಿಕ್ಕು ಬದಲಾಯಿಸಿತು. 1966ರಲ್ಲಿ ಪೂರ್ಣಚಂದ್ರ ತೇಜಸ್ವಿರನ್ನು ವಿವಾಹವಾದರು.
ನನ್ನ ತೇಜಸ್ವಿ
'ನನ್ನ ತೇಜಸ್ವಿ' ರಾಜೇಶ್ವರಿ ತೇಜಸ್ವಿ ಅವರ ಮೊಟ್ಟ ಮೊದಲ ಪುಸ್ತಕವಾಗಿದ್ದು, ಇದು ಒಟ್ಟು ಐದನೇ ಮುದ್ರಣ ಕಂಡಿದೆ. 'ನಮ್ಮ ಮನೆಗೂ ಬಂದರು ಗಾಂಧೀಜಿ' ರಾಜೇಶ್ವರಿಯವರ ಎರಡನೆ ಪುಸ್ತಕವಾಗಿದೆ. ಪೂರ್ಣಚಂದ್ರ ತೇಜಸ್ವಿ ಹಾಗೂ ರಾಜೇಶ್ವರಿ ದಂಪತಿಗೆ ಇಬ್ಬರು ಹೆಣ್ಣುಮಕ್ಕಳಿದ್ದು, ಇಬ್ಬರೂ ಸಾಫ್ಟ್ವೇರ್ ಇಂಜಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ ರಾಜೇಶ್ವರಿ ತೇಜಸ್ವಿಯವರು ಮೂಡಿಗೆರೆಯಲ್ಲಿ ಕಾಫಿತೋಟವನ್ನು ನೋಡಿಕೊಳುತ್ತಿದ್ದರು.
ಸಿನಿಮಾ ಆಗುತ್ತಿದೆ ಪೂರ್ಣಚಂದ್ರ ತೇಜಸ್ವಿ ಅವರ 'ಡೇರ್ಡೆವಿಲ್ ಮುಸ್ತಾಫಾ' ಕಥೆ!
ಗೃಹ ಸಚಿವ ಆರಗ ಜ್ಞಾನೇಂದ್ರ ಸಂತಾಪ
ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೇಶ್ವರಿ ತೇಜಸ್ವಿಯವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ದಿವಂಗತ ಪೂರ್ಣಚಂದ್ರ ತೇಜಸ್ವಿಯವರ ಧರ್ಮಪತ್ನಿ ಶ್ರೀಮತಿ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿ ಅವರ ನಿಧನ ವಾರ್ತೆ ತಿಳಿದು ತುಂಬಾ ದುಃಖವಾಗಿದೆ. ಸರಳರೂ, ಸಹೃದಯಿಗಳು ಆಗಿದ್ದ ರಾಜೇಶ್ವರಿ ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಹಾಗೂ ಅವರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿ, ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ
ಮಾಜಿ ಸಿಎಂ ಎಚ್ಡಿಕೆ ಸಂತಾಪ
ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಕೂಡಾ ರಾಜೆಶ್ವರಿ ತೇಜಸ್ವಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಎಚ್ಡಿಕೆ ಕನ್ನಡ ಸಾಹಿತ್ಯದಲ್ಲಿ ಅಚ್ಚಳಿಯದ ಹೆಸರು, ಬೆರಗಿನ ಬರಹದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಧರ್ಮಪತ್ನಿ ಶ್ರೀಮತಿ ರಾಜೇಶ್ವರಿ ತೇಜಸ್ವಿ ಅವರು ನಿಧನರಾದ ವಾರ್ತೆ ಕೇಳಿ ಬಹಳ ದುಃಖವಾಗಿದೆ. ಅವರ ಅಗಲಿಕೆ ಭರಿಸುವ ಶಕ್ತಿಯನ್ನು ಕುಟುಂಬವರಿಗೆ ಮತ್ತು ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ