
ಬೆಂಗಳೂರು(ಜ.02): ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಕುರಿತು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಬಳಸಿದ್ದಾರೆ ಎನ್ನಲಾದ ಆಕ್ಷೇಪಾರ್ಹ ಪದ ಪ್ರಕರಣಕ್ಕೆ ಸಂಬಂಧಿಸಿ ಸ್ಥಳ ಮಹಜರು ವಿಚಾರದಲ್ಲಿ ಗೊಂದಲ ಮುಂದುವರಿ ದಿದ್ದು, ಯಾವ ರೀತಿಯಲ್ಲಿ ಮಹಜರು ಮಾಡಲಾಗುತ್ತದೆ ಎಂಬುದನ್ನು ವಿವರಿಸುವಂತೆ ವಿಧಾನ ಪರಿಷತ್ ಸಚಿವಾಲಯವು ಸಿಐಡಿಗೆ ಪತ್ರ ಬರೆದಿದೆ.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲ ಅಧಿವೇಶನ ವೇಳೆ ನಡೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಮತ್ತು ಸಿ.ಟಿ.ರವಿ ಪ್ರಕರಣ ಸಂಬಂಧ ಸ್ಥಳ ಮಹಜರು ಮಾಡಲು ಪತ್ರ ಬರೆದಿರುವ ಸಿಐಡಿಗೆ ವಿಧಾನಪರಿಷತ್ ಸಚಿವಾಲಯ ಈ ಮರು ಪತ್ರ ಬರೆದಿದೆ ಎಂದು ತಿಳಿದು ಬಂದಿದೆ.
ಹೆಬ್ಬಾಳ್ಕರ್ ಕೇಸಲ್ಲಿ ಅಮಾನವೀಯ ನಡೆ: ಪೊಲೀಸರ ವಿರುದ್ಧ ಗವರ್ನರ್ಗೆ ಸಿ.ಟಿ.ರವಿ ದೂರು
ವಿಧಾನಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮೀ ಅವರು ಸಿಐಡಿಗೆ ಪತ್ರ ಬರೆದು ಯಾವ ರೀತಿ ಮಹಜರು ಮಾಡಲಾಗುತ್ತದೆ ಎಂಬುದರ ಕುರಿತು ವಿವರಣೆ ನೀಡುವಂತೆ ಸೂಚಿಸಿದ್ದಾರೆ. ಸ್ಥಳ ಮಹಜರು ಯಾವ ರೀತಿ ಇರಲಿದೆ ಎಂಬುದರ ಜತೆಗೆ ಯಾರನ್ನು ಮಹಜರು ಸ್ಥಳಕ್ಕೆ ಕರೆದೊಯ್ಯಲಾಗುತ್ತದೆ ಎಂಬ ಬಗ್ಗೆ ಮಾಹಿತಿ ನೀಡುವಂತೆ ಕೇಳಲಾಗಿದೆ. ಸಭಾಪತಿ ಬಸವರಾಜ ಹೊರಟ್ಟಿ ನಿರ್ದೇಶನ ಮೇರೆಗೆ ಸಿಐಡಿಗೆ ಪತ್ರ ಬರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಿ.ಟಿ.ರವಿ ನಡುವಿನ ಮಾತಿನ ಚಕಮಕಿ ವೇಳೆ ವಿಧಾನಪರಿಷತ್ ಹಲವು ಸದಸ್ಯರು ಉಪಸ್ಥಿತರಿದ್ದರು. ಈ ಪೈಕಿ ಯಾವ ಸದಸ್ಯರಿಗೆ ಮಹಜರು ವೇಳೆ ಸಾಕ್ಷಿಯಾಗಲು ಸೂಚನೆ ನೀಡಲಾಗುತ್ತದೆ ಎಂಬುದರ ಕುರಿತು ಮಾಹಿತಿ ನೀಡಬೇಕು ಎಂದು ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ ಎಂದು ಹೇಳಲಾಗಿದೆ.
ವಿಧಾನಪರಿಷತ್ ಸಚಿವಾಲಯದಿಂದ ಕೇಳಲಾದ ಪ್ರಶ್ನೆಗೆ ಸಿಐಡಿಯಿಂದ ಉತ್ತರ ಬಂದ ಬಳಿಕ ಮಹಜರಿಗೆ ಅನುಮತಿ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಅಲ್ಲಿಯವರೆಗೆ ಯಾವುದೇ ನಿರ್ಣಯ ಕೈಗೊಳ್ಳದಿರಲು ನಿರ್ಧರಿಸಲಾಗಿದೆ. ಸಿಐಡಿಯಿಂದ ಮಹಜರು ಕುರಿತು ವಿವರ ತಲುಪಿದ ಬಳಿಕ ವಿಧಾನಪರಿಷತ್ ಸಚಿವಾಲದಿಂದ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ